ವಾಹನ ತಪಾಸಣೆ ವೇಳೆ ಬೈಕ್ ಅಪಘಾತ: ಪೊಲೀಸರ ವಿರುದ್ಧ ಸಾರ್ವಜನಿಕರಿಂದ ಪ್ರತಿಭಟನೆ
ಕುಂದಾಪುರ, ಅ.26: ತೆಕ್ಕಟ್ಟೆ ಸಮೀಪದ ಕನ್ನುಕೆರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ವಾಹನ ತಪಾಸಣೆ ವೇಳೆ ಬೈಕ್ ಸವಾರ ರಸ್ತೆಗೆ ಬಿದ್ದು ತೀವ್ರವಾಗಿ ಗಾಯಗೊಂಡ ವಿಚಾರಕ್ಕೆ ಸಂಬಂಧಿಸಿ ಸಾರ್ವಜನಿಕರು ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಿರುವ ಬಗ್ಗೆ ವರದಿಯಾಗಿದೆ.
ತೆಕ್ಕಟ್ಟೆ ಕಡೆಯಿಂದ ಕುಂದಾಪುರ ಕಡೆ ಹೋಗುತ್ತಿದ್ದ ಬೈಕ್ನ್ನು ವಾಹನ ತಪಾಸಣೆ ನಡೆಸುತ್ತಿದ್ದ ಹೈವೇ ಪ್ಯಾಟ್ರೋಲ್ ಪೊಲೀಸರು ತಡೆದು ನಿಲ್ಲಿಸಿದಾಗ ಬೈಕ್ ಸವಾರ ಗೋಪಾಡಿ ನಿವಾಸಿ ಉಲ್ಲಾಸ್ ಎಂಬವರು ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದು ತೀವ್ರವಾಗಿ ಗಾಯಗೊಂಡರೆನ್ನಲಾಗಿದೆ. ಈ ಘಟನೆಗೆ ಹೈವೇ ಪ್ಯಾಟ್ರೋಲ್ ವಾಹನದ ಸಹಾಯಕ ಪೊಲೀಸ್ ಉಪನಿರೀಕ್ಷಕರೇ ಕಾರಣ ಎಂಬುದಾಗಿ ಆರೋಪಿಸಿ ಸಾರ್ವಜನಿಕರು ಪೊಲೀಸರ ವಿರುದ್ಧ ಪ್ರತಿಭಟನೆ ವ್ಯಕ್ತಪಡಿಸಿದರು.
ತೀವ್ರವಾಗಿ ಗಾಯಗೊಂಡ ಉಲ್ಲಾಸ್ರನ್ನು ಕೂಡಲೇ ಕೋಟೇಶ್ವರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಯಿತು. ಇದೇ ಸಂದರ್ಭದಲ್ಲಿ ಗಾಯ ಗೊಂಡ ಸಹಾಯಕ ಪೊಲೀಸ್ ಉಪನಿರೀಕ್ಷಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲಿ ಜಮಾಯಿಸಿದ ಸಾರ್ವಜನಿಕರು ಡಿವೈಎಸ್ಪಿ ಆಗಮಿಸುವಂತೆ ಪಟ್ಟು ಹಿಡಿದರು.
ಸ್ಥಳಕ್ಕೆ ಆಗಮಿಸಿದ ಉಡುಪಿ ಡಿವೈಎಸ್ಪಿಟಿ.ಜೈಶಂಕರ್ ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಸಂಬಂದಪಟ್ಟವರ ವಿರುದ್ಧ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದರು. ಈ ಸಂದರ್ಭ ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕ್ಷ ಅನಂತಪದ್ಮನಾಭ, ಕೋಟ ಠಾಣಾಧಿಕಾರಿ ನಿತ್ಯಾನಂದ ಗೌಡ ಹಾಜರಿದ್ದರು.