ಸಿದ್ದರಾಮಯ್ಯರನ್ನು ಸಿಎಂ ಮಾಡದಿದ್ದಕ್ಕೆ ರಾಜೀನಾಮೆ: ಅನರ್ಹ ಶಾಸಕ ರಮೇಶ್ ಜಾರಕಿಹೊಳಿ
![ಸಿದ್ದರಾಮಯ್ಯರನ್ನು ಸಿಎಂ ಮಾಡದಿದ್ದಕ್ಕೆ ರಾಜೀನಾಮೆ: ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಸಿದ್ದರಾಮಯ್ಯರನ್ನು ಸಿಎಂ ಮಾಡದಿದ್ದಕ್ಕೆ ರಾಜೀನಾಮೆ: ಅನರ್ಹ ಶಾಸಕ ರಮೇಶ್ ಜಾರಕಿಹೊಳಿ](https://www.varthabharati.in/sites/default/files/images/articles/2019/11/3/217644-1572786191.jpg)
ಬೆಳಗಾವಿ, ನ. 3: ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡದಿರುವ ಕಾರಣಕ್ಕೆ ನಾವು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು ಎಂದು ಗೋಕಾಕ್ ಕ್ಷೇತ್ರದ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ರವಿವಾರ ಚಿಕ್ಕೋಡಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಲೆಂದು ಬಯಸಿದ್ದೆವು. ಆದರೆ ಅದು ಆಗದ ಕಾರಣ ನಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದೆವು ಎಂದು ತಿಳಿಸಿದರು.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರದಲ್ಲಿ ಎಂ.ಬಿ.ಪಾಟೀಲ್ ಜಲಸಂಪನ್ಮೂಲ ಸಚಿವರಾಗುತ್ತಾರೆಂದು ನಾವು ಭಾವಿಸಿದ್ದೆವು. ಆದರೆ, ಡಿ.ಕೆ.ಶಿವಕುಮಾರ್ ಅವರಿಗೆ ಆ ಖಾತೆಯನ್ನು ನೀಡಲಾಯಿತು. ಅವರು ಈ ಭಾಗದ ಯಾವುದೇ ನೀರಾವರಿ ಯೋಜನೆಗಳಿಗೆ ಸ್ಪಂದಿಸಲಿಲ್ಲ ಎಂದು ಟೀಕಿಸಿದರು.
ಮೈತ್ರಿ ಸರಕಾರವೂ ನಮ್ಮನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿತ್ತು. ಹೀಗಾಗಿ ನಮ್ಮ ಯಾವುದೇ ಬೇಡಿಕೆಗಳಲ್ಲಿ ಸಮರ್ಪಕ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಬೇಸತ್ತು ನಾವೆಲ್ಲರೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು ಎಂದು ರಮೇಶ್ ಜಾರಕಿಹೊಳಿ ವಿವರಣೆ ನೀಡಿದರು.