ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ ಬದ್ಧ: ಬಿ.ಎಸ್.ಯಡಿಯೂರಪ್ಪ
494 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

ಬೆಂಗಳೂರು, ನ.9: ನಗರದ ಸಮಗ್ರ ಅಭಿವೃದ್ಧಿಗೆ ನಮ್ಮ ಸರಕಾರ ಬದ್ಧವಾಗಿದ್ದು, ನಗರೋತ್ಥಾನ ಮತ್ತು ಸ್ಮಾರ್ಟ್ ಸಿಟಿ ಯೋಜನೆಯಡಿ 494 ಕೋಟಿ ರೂ. ವೆಚ್ಚದಲ್ಲಿ ವಿವಿಧ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಹೇಳಿದ್ದಾರೆ.
ಬಿಬಿಎಂಪಿ ಕೇಂದ್ರ ಕಚೇರಿಯ ಗಾಜಿನ ಮನೆಯಲ್ಲಿ ಹಮ್ಮಿಕೊಂಡಿದ್ದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಇತ್ತೀಚೆಗೆ ಬೆಂಗಳೂರು ಅಭಿವೃದ್ಧಿ ಕುರಿತಂತೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಂಚಾರ ದಟ್ಟಣೆ, ಘನತ್ಯಾಜ್ಯ ವಿಲೇವಾರಿ, ಕೆರೆ ಸಂರಕ್ಷಣೆ ಬಗ್ಗೆ ಕೆಲವು ಪ್ರಮುಖ ತೀರ್ಮಾನಗಳನ್ನು ಕೈಗೊಂಡಿದ್ದೇವೆ. ಬೆಂಗಳೂರು ಮ್ಯಾನೇಜ್ಮೆಂಟ್ ಅಥಾರಿಟಿ ಸ್ಥಾಪಿಸಿ ಸಂಯೋಜಿತ ಸಂಚಾರ ನಿರ್ವಹಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.
ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ನಗರಕ್ಕೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸುವುದು ಸರಕಾರದ ಕರ್ತವ್ಯ. ಈ ನಿಟ್ಟಿನಲ್ಲಿ ನಗರದ ಗುಂಡಿಬಿದ್ದ ರಸ್ತೆಗಳನ್ನು ಮುಚ್ಚಲು ಅನುಕೂಲವಾಗುವಂತೆ ಬಿದರಹಳ್ಳಿಯಲ್ಲಿ ಡಾಂಬರು ಘಟಕ ಸ್ಥಾಪಿಸಲಾಗುತ್ತಿದೆ. ಹೊರವರ್ತುಲ ರಸ್ತೆಗಳನ್ನು ಸಿಗ್ನಲ್ ಮುಕ್ತಗೊಳಿಸುವ ಉದ್ದೇಶದಿಂದ ಡಾ.ಮುತ್ತುರಾಜ್ ವೃತ್ತದ ಕೆಳಸೇತುವೆಯನ್ನು ಲೋಕಾರ್ಪಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ನಗರದ ಅತಿ ಹೆಚ್ಚು ಸಂಚಾರ ದಟ್ಟಣೆಯುಳ್ಳ 12 ರಸ್ತೆಗಳನ್ನು ಗುರುತಿಸಲಾಗಿದೆ. ಈ ರಸ್ತೆಗಳಲ್ಲಿ ಪ್ರತ್ಯೇಕ ಬಸ್ ಪಥ ಹಾಗೂ ಸೈಕಲ್ ಪಥಗಳನ್ನು ನಿರ್ಮಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು. 2021ರ ಡಿಸೆಂಬರ್ ವೇಳೆಗೆ ಮೆಟ್ರೋ 2ನೆ ಹಂತದ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಸಾರ್ವಜನಿಕ ಸಾರಿಗೆ ಹೆಚ್ಚಿಸಿ ಖಾಸಗಿ ವಾಹನಗಳಿಗೆ ಕಡಿವಾಣ ಹಾಕಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಆರ್. ಅಶೋಕ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್.ಆರ್.ವಿಶ್ವನಾಥ್, ಸಂಸದ ಪಿ.ಸಿ.ಮೋಹನ್, ಪಾಲಿಕೆ ಮೇಯರ್ ಗೌತಮ್ ಕುಮಾರ್ ಜೈನ್, ಉಪಮೇಯರ್ ಮೋಹನ್ ರಾಜ್, ಆಯುಕ್ತ ಅನಿಲ್ ಕುಮಾರ್, ಆಡಳಿತ ಪಕ್ಷದ ನಾಯಕ ಮುನೀಂದ್ರ ಕುಮಾರ್ ಮತ್ತಿತರದ್ದರು.
ಸುಂದರ ಬೆಂಗಳೂರು ನಿರ್ಮಾಣ...
ಬಿಬಿಎಂಪಿ ವ್ಯಾಪ್ತಿಗೆ ಸೇರಿದ 110 ಹಳ್ಳಿಗಳಿಗೆ ಕುಡಿಯುವ ನೀರಿನ ಪೂರೈಕೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಒಟ್ಟಾರೆ ನಗರದ ಸಮಗ್ರ ಅಭಿವೃದ್ಧಿಗೆ ನಮ್ಮ ಸರಕಾರ ನೀಲಿ ನಕ್ಷೆ ಸಿದ್ಧಪಡಿಸಿದ್ದು, ಭವಿಷ್ಯದಲ್ಲಿ ಸುಂದರ ಬೆಂಗಳೂರು ನಿರ್ಮಾಣ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ.
-ಬಿ.ಎಸ್ ಯಡಿಯೂರಪ್ಪ,ಮುಖ್ಯಮಂತ್ರಿ







