ಅರವಿಂದ್ ಸಾವಂತ್ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ
ಹೊಸದಿಲ್ಲಿ, ನ.12: ಕೇಂದ್ರದ ಎನ್ಡಿಎ ಸರಕಾರದಲ್ಲಿ ಭಾರೀ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮ ಇಲಾಖೆಯ ಸಚಿವ ಸ್ಥಾನಕ್ಕೆ ಶಿವಸೇನೆಯ ಮುಖಂಡ ಅರವಿಂದ್ ಸಾವಂತ್ ನೀಡಿರುವ ರಾಜೀನಾಮೆಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಗೀಕರಿಸಿದ್ದಾರೆ. ಮಂಗಳವಾರ ಸಾವಂತ್ ರಾಜೀನಾಮೆಯನ್ನು ರಾಷ್ಟ್ರಪತಿ ಅಂಗೀಕರಿಸಿದ್ದಾರೆ. ಈ ಇಲಾಖೆಯ ಹೊಣೆಯನ್ನು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ಗೆ ಹೆಚ್ಚುವರಿಯಾಗಿ ವಹಿಸಿಕೊಡಲಾಗಿದೆ ಎಂದು ಸರಕಾರದ ಮೂಲಗಳು ತಿಳಿಸಿವೆ.
ಮಹಾರಾಷ್ಟ್ರದಲ್ಲಿ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿದ್ದ ಬಿಜೆಪಿ ಮತ್ತು ಶಿವಸೇನೆಯ ನಡುವೆ ಮುಖ್ಯಮಂತ್ರಿ ಹುದ್ದೆಯ ವಿಷಯದಲ್ಲಿ ಭಿನ್ನಾಭಿಪ್ರಾಯ ಉಂಟಾದ ಹಿನ್ನೆಲೆಯಲ್ಲಿ ಶಿವಸೇನೆಯು ಕಾಂಗ್ರೆಸ್ ಮತ್ತು ಎನ್ಸಿಪಿ ಜೊತೆ ಮೈತ್ರಿ ಮಾಡಿಕೊಂಡು ಸರಕಾರ ರಚಿಸಲು ಮುಂದಾಗಿತ್ತು. ಬೆಂಬಲ ನೀಡಬೇಕಾದರೆ ಎನ್ಡಿಎ ಮೈತ್ರಿಕೂಟದಿಂದ ಹೊರಬರಬೇಕು ಎಂದು ಎನ್ಸಿಪಿ ಷರತ್ತು ವಿಧಿಸಿತ್ತು.
ಈ ಹಿನ್ನೆಲೆಯಲ್ಲಿ ಅರವಿಂದ್ ಸಾವಂತ್ ಸಚಿವ ಸಂಪುಟದಿಂದ ಹೊರಬಂದಿದ್ದರು. ಚುನಾವಣೆಗೆ ಮೊದಲು ನೀಡಿದ್ದ ಭರವಸೆಯಿಂದ ಬಿಜೆಪಿ ಹಿಂದೆ ಸರಿದಿರುವುದರಿಂದ ಸಚಿವ ಹುದ್ದೆಯಲ್ಲಿ ಮುಂದುವರಿಯಲು ತನ್ನ ಮನಸ್ಸಾಕ್ಷಿ ಒಪ್ಪುವುದಿಲ್ಲ ಎಂದು ಸಾವಂತ್ ಹೇಳಿದ್ದರು.