'ವಿದ್ಯಾರ್ಥಿಗಳ ಬೇಡಿಕೆಗಳನ್ನು ಶೀಘ್ರದಲ್ಲಿ ಈಡೇರಿಸಿ'
ಕಾವಳಮೂಡೂರು ಮಕ್ಕಳ ಗ್ರಾಮ ಸಭೆಯಲ್ಲಿ ವಿದ್ಯಾರ್ಥಿಗಳ ಆಗ್ರಹ
![ವಿದ್ಯಾರ್ಥಿಗಳ ಬೇಡಿಕೆಗಳನ್ನು ಶೀಘ್ರದಲ್ಲಿ ಈಡೇರಿಸಿ ವಿದ್ಯಾರ್ಥಿಗಳ ಬೇಡಿಕೆಗಳನ್ನು ಶೀಘ್ರದಲ್ಲಿ ಈಡೇರಿಸಿ](https://www.varthabharati.in/sites/default/files/images/articles/2019/11/29/221481-1575039469.jpeg)
ಬಂಟ್ವಾಳ, ನ.29: ಶಾಲೆಗಳಿಗೆ ವಿಟಮಿನ್ ‘ಎ’ ಮಾತ್ರೆ ವಿತರಣೆಯಾಗುತ್ತಿಲ್ಲ. ಈ ಬಗ್ಗೆ ಆರೋಗ್ಯ ಇಲಾಖೆ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.
ತಾಲೂಕಿನ ಕಾವಳಮೂಡೂರು ಗ್ರಾಮ ಪಂಚಾಯತ್ನ ಸಭಾ ಭವನದಲ್ಲಿ ಏರ್ಪಡಿಸಿದ್ದ ಮಕ್ಕಳ ಗ್ರಾಮ ಸಭೆಯಲ್ಲಿ ವಿದ್ಯಾರ್ಥಿಗಳು ತಮ್ಮ ಅಹವಾಲನ್ನು ಮುಂದಿಟ್ಟರು.
ಶಾಲೆಗಳಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆಗಳನ್ನು ವಿತರಿಸಬೇಕೆಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದು, ಕಳೆದ ಬಾರಿ ಮಕ್ಕಳ ಗ್ರಾಮ ಸಭೆಯಲ್ಲಿ ಆಗ್ರಹಿಸಿದ್ದ ಕೆಲವು ಬೇಡಿಕೆಗಳು ಈಡೇರಿದ್ದು, ಬಾಕಿಯುಳಿದ ಬೇಡಿಕೆಗಳ ಈಡೇರಿಕೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಮಕ್ಕಳ ಗ್ರಾಮಸಭೆಯ ಅಧ್ಯಕ್ಷತೆಯನ್ನು ಗ್ರಾಪಂ ಅಧ್ಯಕ್ಷ ಸಂತೋಷ್ ಪೂಂಜ ವಹಿಸಿದ್ದರು. ಶಿಕ್ಷಣ ಸಂಪನ್ಮೂಲ ಕೇಂದ್ರದ ಅಧ್ಯಕ್ಷ ಫಾರೂಕ್ ಬಂಟ್ವಾಳ ಮಕ್ಕಳ ಗ್ರಾಮಸಭೆಯ ಮಾಹಿತಿ ನೀಡಿದರು. ಪಿಡಿಒ ವೇದವ ಕಾರ್ಯಕ್ರಮವ್ನನು ನಿರೂಪಿಸಿ ವಂದಿಸಿದರು.
ಇದೇ ವೇಳೆ ಪರಿಶಿಷ್ಟ ಜಾತಿ, ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಯಿತು. ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಪಂ ಸದಸ್ಯ ಪದ್ಮಶೇಖರ್ ಜೈನ್, ಗ್ರಾಪಂ ಸದಸ್ಯರಾದ ಸತೀಶ್ ಪಡಂತ್ರಬೆಟ್ಟು, ಇಸ್ಮಾಯಿಲ್ ಸಿದ್ದೀಕ್, ಅಬ್ದುಲ್ ನಝೀರ್, ಮೋಹನ್ ಆಚಾರ್ಯ, ಪೂವಕ್ಕ ಕೃಷ್ಣಪ್ಪನಾಯ್ಕ, ವಿಶಾಲಾಕ್ಷಿ ಪುಟ್ಟಪ್ಪ, ಚಂಪಾ, ಗ್ರಾಮ ಲೆಕ್ಕಾಧಿಕಾರಿ ಆಶಾ ಮೆಹೆಂದಲೆ, ಆರೋಗ್ಯ, ಶಿಕ್ಷಣ, ಕಂದಾಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾಧಿಕಾರಿಗಳು, ಕಾವಳಮೂಡೂರು ಸರಕಾರಿ ಪ್ರೌಢಶಾಲೆ ಮತ್ತು ಸರಕಾರಿ ಉರ್ದು ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ಉಪಸ್ಥಿತರಿದ್ದರು.