ವಸತಿ ಶಾಲೆಗಳಲ್ಲಿ ಎಪ್ರಿಲ್ 1ರಂದೇ ಪಠ್ಯ ಪುಸ್ತಕಗಳ ವಿತರಣೆ: ಗೋವಿಂದ ಕಾರಜೋಳ

ಬೆಂಗಳೂರು. ಡಿ.11: ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ವಸತಿ ಶಾಲೆಗಳಲ್ಲಿ ಶಾಲೆ ಪ್ರಾರಂಭವಾದ ದಿನದಂದೆ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ವಿತರಿಸಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಸೂಚಿಸಿದರು.
ಬುಧವಾರ ನಗರದಲ್ಲಿ ನಡೆದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ 72 ನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಸತಿ ಶಿಕ್ಷಣ ಸಂಸ್ಥೆಗಳ ಸಂಘಕ್ಕೆ 2019-20ನೆ ಸಾಲಿನಲ್ಲಿ 999 ಕೋಟಿ ರೂ. ಅನುದಾನವನ್ನು ಒದಗಿಸಲಾಗಿದ್ದು, 863 ಕೋಟಿ ರೂ. ನಿರ್ವಹಣೆಗೆ ಹಾಗೂ ಉಳಿದ 135 ಕೋಟಿ ರೂ.ಅನುದಾನವನ್ನು ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ವಿನಿಯೋಗಿಸಲಾಗುತ್ತಿದೆ ಎಂದರು.
ವಸತಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಹಾಗೂ ತರಬೇತಿಯನ್ನು ನೀಡಬೇಕು. ಈಗಾಗಲೇ ನೇಮಕಾತಿ ಪ್ರಕ್ರಿಯೆಯಲ್ಲಿರುವ 3067 ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರಿಗೆ ಶೀಘ್ರವಾಗಿ ನೇಮಕಾತಿ ಆದೇಶ ನೀಡಬೇಕು ಎಂದು ಗೋವಿಂದ ಕಾರಜೋಳ ಹೇಳಿದರು.
ವಸತಿ ಶಾಲೆಗಳು ಹಾಗೂ ವಸತಿ ನಿಲಯಗಳ ಕಟ್ಟಡಗಳನ್ನು ಹೆಚ್ಚಾಗಿ ನಿರ್ಮಿಸಿ ಕೊರತೆಯನ್ನು ನೀಗಿಸಬೇಕು. ಕಟ್ಟಡಗಳ ಗುಣಮಟ್ಟವನ್ನು ಲೋಕೋಪಯೋಗಿ ಇಲಾಖೆಯಿಂದ ಪರಿಶೀಲಿಸಿ ವಶಕ್ಕೆ ತೆಗೆದುಕೊಳ್ಳಬೇಕು ಎಂದು ಅವರು ಸೂಚಿಸಿದರು.
ಇಲಾಖೆ ವ್ಯಾಪ್ತಿಯ 68 ಪದವಿ ಪೂರ್ವ ಕಾಲೇಜುಗಳಲ್ಲಿ 3843 ವಿದ್ಯಾರ್ಥಿಗಳು ವಿಜ್ಞಾನ ವಿಷಯವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇವರಿಗೆ ಪರೀಕ್ಷೆ ಸಿದ್ದತೆಗೆ ಅನುಕೂಲವಾಗುವಂತೆ ರಜೆ ಅವಧಿಯಲ್ಲಿ ವಿಶೇಷ ತರಬೇತಿ ನೀಡಬೇಕು ಎಂದು ಗೋವಿಂದ ಕಾರಜೋಳ ತಿಳಿಸಿದರು.
ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಉನ್ನತ ವೃತ್ತಿಪರ ವ್ಯಾಸಂಗಕ್ಕೆ ಅಗತ್ಯ ಪೂರಕ ಪಠ್ಯ ಪುಸ್ತಕಗಳನ್ನು ನೀಡಬೇಕು. ಎಲ್ಲ ಶಾಲಾ ಕಾಲೇಜುಗಳ ಕಟ್ಟಡಗಳ ಆವರಣದಲ್ಲಿ ಸಸಿ ಬೆಳೆಸಲು ಅರಣ್ಯ ಇಲಾಖೆಯ ಸಹಕಾರ ಪಡೆಯಬೇಕು ಎಂದು ಅವರು ಹೇಳಿದರು. ಶಾಲಾ ಶೈಕ್ಷಣಿಕ ಹಾಗೂ ವಿಚಾರ ಪ್ರದರ್ಶನಗಳಲ್ಲಿ ರಾಷ್ಟ್ರ ಹಾಗೂ ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಬಹುಮಾನದೊಂದಿಗೆ ಅಭಿನಂದಿಸಿ ಉತ್ತೇಜನ ನೀಡಲಾಗುವುದು. 6, 7 ಮತ್ತು 8ನೆ ತರಗತಿ ವಿದ್ಯಾರ್ಥಿಗಳಿಗೆ ಸ್ಥಳೀಯ ಸಂಸ್ಥೆಗಳು ಭೇಟಿಗೆ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕು ಎಂದು ಅವರು ಹೇಳಿದರು.
ಶೈಕ್ಷಣಿಕ ಮಾಸ ಪತ್ರಿಕೆ ಹಾಗೂ ವೆಬ್ಸೈಟ್ ರೂಪಿಸಬೇಕು. ಯಾವುದೇ ಪೂರ್ವಾನುಮತಿ ಇಲ್ಲದೇ ಹೆಚ್ಚುವರಿ ಕಟ್ಟಡ ಕಾಮಗಾರಿಗಳನ್ನು ನಿರ್ಮಿಸಬಾರದು. ಅಂದಾಜು ವೆಚ್ವಕ್ಕೆ ಸೀಮಿತವಾಗಿರಬೇಕು ಎಂದು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.
ಸಭೆಯಲ್ಲಿ ಎಸ್ಸಿಪಿ ಮತ್ತು ಟಿಎಸ್ಪಿಕಾರ್ಯಕ್ರಮಗಳ ಸಲಹೆಗಾರ ವೆಂಕಟಯ್ಯ, ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರ ನಾಯಕ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಮೊಹ್ಸಿನ್, ಆಯುಕ್ತ ಪೆದ್ದಪ್ಪಯ್ಯ, ಡಿಸಿಎಂ ಆಪ್ತಕಾರ್ಯದರ್ಶಿ ವಿ.ಶ್ರೀನಿವಾಸ್, ವಸತಿ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ರಾಘವೇಂದ್ರ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ನಿರ್ದೇಶಕ ಸಂಗಪ್ಪ ಮತ್ತಿತರರು ಉಪಸ್ಥಿತರಿದ್ದರು.







