ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆ : ಜಾಮಿಯಾ ಮಿಲ್ಲಿಯಾದ 50 ವಿದ್ಯಾರ್ಥಿಗಳ ಬಿಡುಗಡೆ
ಹೊಸದಿಲ್ಲಿ, ಡಿ.16: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆಯ ಸಂದರ್ಭದಲ್ಲಿ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ ಬಂಧನಕ್ಕೊಳಗಾದ 50 ವಿದ್ಯಾರ್ಥಿಗಳನ್ನು ಸೋಮವಾರ ಮುಂಜಾನೆ ಬಿಡುಗಡೆ ಮಾಡಲಾಗಿದೆ. ಹೀಗಿದ್ದರೂ ಹಿಂಸಾಚಾರ ಮುಂದುವರಿದಿದೆ.
ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ 500ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಕೇಸು ದಾಖಲಿಸಲಾಗಿದೆ.
ಅಲಿಗಢ, ಹೈದರಾಬಾದ್ ಮತ್ತು ಕೋಲ್ಕತ್ತಾದ ವಿಶ್ವವಿದ್ಯಾಲಯಗಳಲ್ಲಿ ರಾತ್ರಿಯಿಡೀ ಪ್ರತಿಭಟನೆ ಮುಂದುವರಿದಿತ್ತು. ಉತ್ತರ ಭಾರತದಲ್ಲಿ ಹೋರಾಟ ಭುಗಿಲೆದ್ದಿದೆ. ದಿಲ್ಲಿಯಲ್ಲಿ ಶಾಲಾ ಕಾಲೇಜುಗಳು ಮುಚ್ಚಲ್ಪಟ್ಟಿದೆ.
ರವಿವಾರ ಸಂಜೆ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ಬಳಿಯ ನ್ಯೂ ಫ್ರೆಂಡ್ಸ್ ಕಾಲೋನಿಯಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ನಾಲ್ಕು ಸಾರ್ವಜನಿಕ ಬಸ್ಸುಗಳು ಮತ್ತು ಎರಡು ಪೊಲೀಸ್ ವಾಹನಗಳು ಬೆಂಕಿ ಹಚ್ಚಲಾಗಿದೆ.
ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ನಡೆಸಿದ ಕ್ರಮದಿಂದಾಗಿ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 60 ಮಂದಿ ಗಾಯಗೊಂಡಿದ್ದಾರೆ. ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಶೆಲ್ ಗಳನ್ನು ಸಿಡಿಸಿ, ಲಾಠಿ ಪ್ರಹಾರ ನಡೆಸಿ ಪ್ರತಿಭಟನೆಕಾರರನ್ನು ನಿಯಂತ್ರಿಸಲು ಯತ್ನಿಸಿದರು. ಆದರೆ ಪ್ರತಿಭಟನೆಕಾರರ ಮೇಲೆ ಗುಂಡು ಹಾರಿಸಿರುವುದನ್ನು ಪೊಲೀಸರು ನಿರಾಕರಿಸಿದ್ದಾರೆ. ಆದರೆ ವಿಶ್ವವಿದ್ಯಾಲಯದ ಸ್ನಾನಗೃಹದಲ್ಲಿ ಗಾಯಗೊಂಡ ವಿದ್ಯಾರ್ಥಿಗಳು ಮತ್ತು ಅವರ ರಕ್ತಸ್ರಾವದ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ .
ಯಾವುದೇ ಸಾವುನೋವುಗಳ ವರದಿಗಳನ್ನು ದಿಲ್ಲಿ ಪೊಲೀಸರು ನಿರಾಕರಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಮುಂದುವರಿದಿದೆ. ಮತ್ತು ಪ್ರತಿಭಟನೆಯ ಕೇಂದ್ರಬಿಂದುವಾಗಿರುವ ಅಸ್ಸಾಂನಲ್ಲಿ ಪರಿಸ್ಥಿತಿ ಮುಂದುವರಿದಿದೆ. . ಪಶ್ಚಿಮ ಬಂಗಾಳ ಮತ್ತು ಈಶಾನ್ಯದಿಂದ ಅಗ್ನಿಸ್ಪರ್ಶ ಮತ್ತು ಲೂಟಿ ಘಟನೆಗಳು ವರದಿಯಾಗಿವೆ.
ತಿರುವನಂತಪುರದಲ್ಲಿ ಮುಖ್ಯ ಮಂತ್ರಿ ಪಿಣರಾಯಿ ವಿಜಯ್ ನೇತೃತ್ವದಲ್ಲಿ ಪ್ರತಿಭಟನೆ ಆರಂಭಗೊಂಡಿದೆ. ಹೈದರಾಬಾದ್ ನಲ್ಲಿ ಸೆಂಟ್ರೆಲ್ ವಿವಿ ಮತ್ತು ಉರ್ದು ವಿವಿ ಬಳಿ ವಿದ್ಯಾರ್ಥಿಗಳು ನಿನ್ನೆ ರಾತ್ರಿಯಿಂದಲೇ ಪ್ರತಿಭಟನೆ ನಡೆಸುತ್ತಿದ್ದಾರೆ.