ತಂತ್ರಜ್ಞಾನದಲ್ಲಿ ಕನ್ನಡ ಬಳಕೆಗೆ ಕ್ರಮ: ಡಾ.ಅಶ್ವಥ್ ನಾರಾಯಣ

ಬೆಂಗಳೂರು, ಡಿ.17: ತಂತ್ರಜ್ಞಾನದಲ್ಲಿ ಕನ್ನಡ ಬಳಕೆಗೆ ಕ್ರಮ ಕೈಗೊಳ್ಳುವುದರ ಮೂಲಕ ಭಾಷೆಯ ಬೆಳವಣಿಗೆಗೆ ಪೂರಕ ಕಾರ್ಯಕ್ರಮ ರೂಪಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ ಹೇಳಿದ್ದಾರೆ.
ಮಂಗಳವಾರ ಜ್ಞಾನಜ್ಯೋತಿ ಸಂಭಾಂಗಣದಲ್ಲಿ ಆಯೋಜಿಸಿದ್ದ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ವತಿಯಿಂದ ನವೋದ್ಯಮ, ಉದ್ಯಮಗಳ ಜತೆ ಸಂವಾದ ಮತ್ತು ಎಕ್ಸ್ ಪೊ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ತಂತ್ರಜ್ಞಾನದಲ್ಲಿ ಕನ್ನಡ ಬಳಕೆ ಮತ್ತು ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಕಲ್ಪಿಸುವುದು ನಮ್ಮ ಸರಕಾರದ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಪರಿಣಾಮಕಾರಿ ಕ್ರಮಗಳ ಮೂಲಕ ಪ್ರತಿಭೆಗೆ ತಕ್ಕಂತೆ ಕನ್ನಡಿಗರಿಗೆ ತಂತ್ರಜ್ಞಾನ ಕ್ಷೇತ್ರ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಉದ್ಯೋಗ ಕಲ್ಪಿಸುವ ಬಗ್ಗೆ ಗಮನಹರಿಸಲಾಗುವುದು ಎಂದರು.
ನಮ್ಮ ಸರಕಾರ 100 ದಿನಗಳನ್ನು ಯಶಸ್ವಿಯಾಗಿ ಪೂರೈಸಿ ಮುಂದಡಿ ಇಡುತ್ತಿದ್ದು, ಕರ್ನಾಟಕವನ್ನು ಜಾಗತಿಕ ಮಟ್ಟದಲ್ಲಿ ಮೊದಲ ಸ್ಥಾನಕ್ಕೆ ತರಲು ಬಿಎಸ್ವೈ ಅವರ ನೇತೃತ್ವದಲ್ಲಿ ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ಅದರಲ್ಲೂ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಸರಕಾರ ಸಾಕಷ್ಟು ಸಾಧನೆ ಮಾಡಿದ್ದು, ಈಗಾಗಲೇ ಕರ್ನಾಟಕ ಅನ್ವೇಷಣಾ ಪ್ರಾಧಿಕಾರ ರಚಿಸಲಾಗಿದೆ. ಹೊಸ ಆವಿಷ್ಕಾರಗಳಿಗೆ ಪ್ರೋತ್ಸಾಹ ನೀಡಲು ವಿಶೇಷ ಕಾನೂನು ಜಾರಿಗೆ ತರುವ ಮೂಲಕ ವಿಶ್ವದಲ್ಲೇ ಈ ರೀತಿಯ ಕಾನೂನು ರೂಪಿಸಿದ ಮೊದಲ ರಾಜ್ಯ ಎಂಬ ಕೀರ್ತಿಗೆ ನಮ್ಮ ಸರಕಾರ ಪಾತ್ರವಾಗಿದೆ ಎಂದು ಇಲಾಖೆಯ ಸಾಧನೆಗಳನ್ನು ವಿವರಿಸಿದರು.
ನವೋದ್ಯಮಕ್ಕೆ ಸಹಕಾರ: ನವೋದ್ಯಮಕ್ಕೆ ಅಗತ್ಯ ಸಹಕಾರ ನೀಡುತ್ತಿರುವ ಸರಕಾರ, ಯುವ ಉದ್ಯಮಿಗಳಿಗೆ ಅಗತ್ಯ ವೇದಿಕೆ ರೂಪಿಸುತ್ತಿದೆ. ನವೋದ್ಯಮ ಅಭಿವದ್ಧಿಗೆ ಉದ್ಯಮಿಗಳ ಸಹಕಾರದ ಅಗತ್ಯವಿದ್ದು, ಇದಕ್ಕೆ ಪೂರಕವಾಗಿ ನವೋದ್ಯಮ ಅಭಿವೃದ್ಧಿಗೆ ವಿಷನ್ ಗ್ರೂಪ್ ಆರಂಭಿಸಲಾಗಿದೆ. ಈ ವಿಷನ್ ಗ್ರೂಪ್ ಸಲಹೆ ಆಧರಿಸಿ ನವೋದ್ಯಮ ಅಭಿವದ್ಧಿಗೆ ಮತ್ತಷ್ಟು ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದು ತಿಳಿಸಿದರು.
ತಂತ್ರಜ್ಞಾನಕ್ಕೆ ಒತ್ತು: ಉತ್ತಮ, ಪಾರದರ್ಶಕ ಆಡಳಿತ ಮತ್ತು ಆಡಳಿತ ಸುಧಾರಣೆಗೆ ತಂತ್ರಜ್ಞಾನದ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಆಡಳಿತದಲ್ಲಿ ತಂತ್ರಜ್ಞಾನವನ್ನು ಹೆಚ್ಚಿನ ಪ್ರಮಾಣದಲ್ಲಿ ಕೈಗೊಳ್ಳುವ ಕೆಲಸ ಆಗಬೇಕಿದ್ದು, ಅದಕ್ಕೆ ತಕ್ಕಂತೆ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದು ಹೇಳಿದ ಉಪಮುಖ್ಯಮಂತ್ರಿ, ಅದಕ್ಕೆ ಪೂರಕವಾಗಿ ಮಾಹಿತಿ ತಂತ್ರಜ್ಞಾನ ನೀತಿಗಳನ್ನು ಶೀಘ್ರವೇ ಜಾರಿಗೊಳಿಸಲಾಗುವುದು. ಇದರ ಜತೆಗೆ ಡೀಪ್ಟೆಕ್ನಂತಹ ಉದಯೋನ್ಮುಖ ವಲಯ ರೂಪಿಸುವ ಬಗ್ಗೆಯೂ ತೀರ್ಮಾನಿಸಲಾಗಿದ್ದು, ಇದರಿಂದ ಯುವ ಜನರಿಗೆ ಹೆಚ್ಚು ಅನುಕೂಲವಾಗಲಿದೆ, ಎಂದರು.
ಬೆಂಗಳೂರು ನಂ 1: ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ನವೋದ್ಯಮದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದ್ದು, ಬೆಂಗಳೂರಿನಲ್ಲಿ ಗ್ಲೋಬಲ್ ಇನ್ ಹೌಸ್ ಡೆವಲಪ್ಮೆಂಟ್ ಆರಂಭಿಸಲಾಗುತ್ತಿದೆ. ವಿಶ್ವದ ಎಲ್ಲಾ ಕಂಪೆನಿಗಳ ಕಚೇರಿ ಬೆಂಗಳೂರಿನಲ್ಲಿ ಪ್ರಾರಂಭ ಮಾಡಿ ನಮ್ಮ ಉದ್ಯಮಗಳ ಅಭಿವದ್ಧಿಗೆ ಅನುಕೂಲವಾಗಲು ಕರ್ನಾಟಕ ತಂತ್ರಜ್ಞಾನ ಅಭಿವೃದ್ಧಿ ಮಂಡಳಿ ಆರಂಭಿಸಲಾಗಿದೆ, ಎಂದು ಹೇಳಿದರು.
ಶಿಕ್ಷಣಕ್ಕೆ ವಿಷನ್ ಗ್ರೂಪ್: ನಮ್ಮ ಶಿಕ್ಷಣ ಪದ್ಧತಿ ಇನ್ನೂ ಹಳೆಯ ಪದ್ಧತಿಯಲ್ಲೇ ಮುಂದುವರಿದಿದ್ದು, ಜಾಗತಿಕ ಬದಲಾವಣೆಗೆ ತಕ್ಕಂತೆ ಇದನ್ನು ಬದಲಾವಣೆ ಮಾಡುವ ಅಗತ್ಯವಿದೆ. ಅದಕ್ಕಾಗಿಯೇ ವಿಷನ್ ಗ್ರೂಪ್ ರಚಿಸಲಾಗಿದೆ. ವಿವಿಗಳಲ್ಲಿ ಗುಣಮಟ್ಟದ ಕೋರ್ಸ್ಗಳನ್ನು ಆರಂಭಿಸಲು ತಾಂತ್ರಿಕ ವಿವಿಗಳು ಆದ್ಯತೆ ನೀಡಬೇಕಾಗಿದೆ. ಇದಕ್ಕೆ ಸರಕಾರ ಎಲ್ಲಾ ರೀತಿಯ ಸಹಕಾರ ನೀಡಲಿದೆ, ಎಂದರು.
ಕಾರ್ಯಕ್ರಮದಲ್ಲಿ ಫ್ರಾನ್ಸ್ ದೇಶದ ಕಾನ್ಸುಲೇಟ್ ಜನರಲ್ ಮಾರ್ಜೋರಿ ವ್ಯಾನ್ ಬೆಲಿಜಮ್, ವಿಷನ್ ಗ್ರೂಪ್ ಅಧ್ಯಕ್ಷ ಪ್ರಶಾಂತ್ ಪ್ರಕಾಶ್, ವಿಟಿಯು ಕುಲಪತಿ ಕರಿಸಿದ್ದಪ್ಪಉಪಸ್ಥಿತರಿದ್ದರು.







