ನಂಬರ್ ಒನ್ ಹೂಡಿಕೆ ಸ್ನೇಹಿ ರಾಜ್ಯ ನಿರ್ಮಾಣಕ್ಕೆ ಸಂಕಲ್ಪ: ಪ್ರಹ್ಲಾದ್ ಜೋಶಿ

ಮುಂಬೈ, ಡಿ.24: ಕರ್ನಾಟಕವನ್ನು ದೇಶದ ನಂಬರ್ ಒನ್ ಉದ್ಯಮ ಹೂಡಿಕೆ ಸ್ನೇಹಿ ರಾಜ್ಯವನ್ನಾಗಿ ಮಾಡಲು ಕೇಂದ್ರ ಸರಕಾರ ಆದ್ಯತೆ ನೀಡುತ್ತಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ಮಂಗಳವಾರ ‘ಇನ್ವೆಸ್ಟ್ ಕರ್ನಾಟಕ ಹುಬ್ಬಳ್ಳಿ ಸಮಾವೇಶ-2020’ ಕುರಿತು ಮುಂಬೈನಲ್ಲಿ ನಡೆದ ರೋಡ್ ಶೋನಲ್ಲಿ ಮಾತನಾಡಿದ ಅವರು, ‘ಕರ್ನಾಟಕವು ಉದ್ಯಮ ಹೂಡಿಕೆಗೆ ಪ್ರಶಸ್ತವಾದ ರಾಜ್ಯವಾಗಿದೆ. ಈ ರಾಜ್ಯವು ಅಭಿವೃದ್ಧಿಯಲ್ಲಿ ಮುನ್ನುಗ್ಗುತ್ತಿದೆ ಎಂದರು.
ಕೈಗಾರಿಕಾ ಮೂಲಸೌಕರ್ಯ, ನೀತಿಗಳು, ಪದ್ಧತಿಗಳನ್ನು ಜಾಗತಿಕ ಮಟ್ಟದಲ್ಲಿ ಕೊಂಡೊಯ್ಯುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿದ್ದು, ಈ ಮೂಲಕ ಕರ್ನಾಟಕವನ್ನು ಜಾಗತಿಕ ಉತ್ಪಾದನಾ ಹಬ್ ಆಗಿ ಮಾಡಲು ಹೆಚ್ಚಿನ ಆದ್ಯತೆ ನೀಡುತ್ತಿದ್ದೇವೆ ಎಂದು ಅವರು ತಿಳಿಸಿದರು.
ಉತ್ತರ ಕರ್ನಾಟಕದಲ್ಲಿ ಉದ್ದಿಮೆಗಳ ಸ್ಥಾಪನೆಗೆ ಮತ್ತು ಉದ್ಯೋಗ ಸೃಷ್ಟಿಗೆ ಪೂರಕವಾದ ವಾತಾವರಣ ಸೃಷ್ಟಿಯಾಗಿದ್ದು, ಇಲ್ಲಿ ಬಂಡವಾಳ ಹೂಡಿಕೆಗೆ ಎಲ್ಲ ವಿಫುಲ ಅವಕಾಶಗಳಿವೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಹಾಗೂ ರಾಜ್ಯದ ಎರಡನೇ ಹಂತದ ನಗರಗಳು ಮತ್ತು ಉತ್ತರ ಕರ್ನಾಟಕದಲ್ಲಿ ಬಂಡವಾಳ ಆಕರ್ಷಣೆಗೆ ಮುಂಬೈನಲ್ಲಿ ರೋಡ್ ಶೋ ನಡೆಸುತ್ತಿದ್ದೇವೆ ಎಂದು ಅವರು ಹೇಳಿದರು.
ಇಂದು ಕರ್ನಾಟಕ 216 ಯುಎಸ್ ಬಿಲಿಯನ್ ಡಾಲರ್ನಷ್ಟು ಆರ್ಥಿಕತೆಯನ್ನು ಹೊಂದಿರುವ ರಾಜ್ಯವಾಗಿದ್ದು, ವಾರ್ಷಿಕ ಶೇ.9.6 ರಷ್ಟು ಪ್ರಗತಿ ಸಾಧಿಸುತ್ತಿದೆ. ಈ ಮೂಲಕ ಜಾಗತಿಕ ಮಟ್ಟದಲ್ಲಿ ಸ್ಪರ್ಧಾತ್ಮಕ ಬೆಲೆಯಲ್ಲಿ ಉತ್ಪಾದನಾ ವಾತಾವರಣವನ್ನು ಸೃಷ್ಟಿ ಮಾಡಿದೆ ಎಂದು ಪ್ರಹ್ಲಾದ್ ಜೋಶಿ ಮೆಚ್ಚುಗೆ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಅದರಲ್ಲೂ ವಿಶೇಷವಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಏರೋಸ್ಪೇಸ್ ಮತ್ತು ಡಿಫೆನ್ಸ್ ಇಕ್ವಿಪ್ಮೆಂಟ್, ಆಟೋ, ಆಟೋ ಬಿಡಿ ಭಾಗಗಳು ಎಲೆಕ್ಟ್ರಿಕಲ್ ವಾಹನಗಳು, ಇಂಡಸ್ಟ್ರಿ 4.0, ಮೂವಿಂಗ್ ಕನ್ಸೂಮರ್ ಗೂಡ್ಸ್, ಇನ್ನೋವೇಶನ್ ಸ್ಟಾರ್ಟಪ್, ಮಾಹಿತಿ ತಂತ್ರಜ್ಞಾನ ಸೇರಿದಂತೆ ಹತ್ತು ಹಲವಾರು ಉದ್ದಿಮೆಗಳನ್ನು ಸ್ಥಾಪನೆ ಮಾಡಲು ಸರಕಾರಗಳು ಎಲ್ಲಾ ರೀತಿಯ ಸವಲತ್ತುಗಳನ್ನು ನೀಡುತ್ತಿವೆ ಎಂದು ಅವರು ವಿವರಿಸಿದರು.
ಭಾರೀ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಮಾತನಾಡಿ, ದೇಶಕ್ಕೆ ಹರಿದು ಬರುತ್ತಿರುವ ವಿದೇಶಿ ನೇರ ಬಂಡವಾಳದಲ್ಲಿ ಕರ್ನಾಟಕ ರಾಜ್ಯದ್ದು ಸಿಂಹಪಾಲಾಗಿದೆ. ವಿದೇಶಿ ನೇರ ಬಂಡವಾಳ ಆಕರ್ಷಣೆಯಲ್ಲಿ ರಾಜ್ಯಕ್ಕೆ ದೇಶದಲ್ಲಿ 3ನೇ ಸ್ಥಾನವಿದೆ. ಹುಬ್ಬಳ್ಳಿಯು ಉತ್ತರ ಕರ್ನಾಟಕ ಭಾಗದ ಕೈಗಾರಿಕೋದ್ಯಮ ತಾಣವಾಗಿದೆ. ಇಲ್ಲಿ ಮುಂಬೈ-ಬೆಂಗಳೂರು ಕೈಗಾರಿಕಾ ಕಾರಿಡಾರ್ ಹಾದು ಹೋಗಿದೆ ಎಂದರು.
ಹುಬ್ಬಳ್ಳಿ ಧಾರವಾಡ ಪ್ರದೇಶದಲ್ಲಿ 9 ಕೈಗಾರಿಕಾ ಪ್ರದೇಶಗಳನ್ನು, 4 ಇಂಡಸ್ಟ್ರಿಯಲ್ ಎಸ್ಟೇಟ್ಗಳನ್ನು ಅಭಿವೃದ್ಧಿ ಮಾಡಲಾಗುತ್ತಿದೆ. ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಿಗೆ ಸರಕು ಸರಂಜಾಮುಗಳನ್ನು ಸಾಗಿಸಲು ರೈಲು, ರಸ್ತೆ ಮಾರ್ಗಗಳನ್ನು ಅಭಿವೃದ್ಧಿಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡದಲ್ಲಿ ಉದ್ದಿಮೆದಾರರು ಹೂಡಿಕೆ ಮಾಡಲು ಅನುಕೂಲವಾಗುವಂತಹ ಎಲ್ಲ ರೀತಿಯ ಸೌಲಭ್ಯಗಳನ್ನು ರಾಜ್ಯ ಸರಕಾರ ಒದಗಿಸಿಕೊಡಲಿದೆ ಎಂದು ಅವರು ಭರವಸೆ ನೀಡಿದರು.
ರೋಡ್ ಶೋನಲ್ಲಿ ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ ಸೇರಿದಂತೆ ಪ್ರಮುಖ ಅಧಿಕಾರಿಗಳು, ನೂರಕ್ಕೂ ಹೆಚ್ಚು ಕೈಗಾರಿಕೋದ್ಯಮಿಗಳು ಭಾಗವಹಿಸಿದ್ದರು.







