ಕಲಬುರಗಿ: ಪೌರತ್ವ ತಿದ್ದುಪಡಿ ಕಾಯ್ದೆ, ಮಂಗಳೂರು ಗೋಲಿಬಾರ್ ಪ್ರಕರಣ ಖಂಡಿಸಿ ಮಹಿಳೆಯರ ಪ್ರತಿಭಟನೆ

ಕಲಬುರಗಿ, ಡಿ.26: ಪೌರತ್ವ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ, ಗೋಲಿಬಾರ್ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕು ಹಾಗೂ ಮಂಗಳೂರು ಪೊಲೀಸ್ ಆಯುಕ್ತ ಹರ್ಷರನ್ನು ಅಮಾನತು ಮಾಡಬೇಕೆಂದು ಆಗ್ರಹಿಸಿ ವಿವಿಧ ಮಹಿಳಾ ಪರ ಸಂಘಟನೆಗಳಿಂದ ನಗರದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಗಿತ್ತು.
ಅಖಿಲ ಭಾರತೀಯ ಜನವಾದಿ ಮಹಿಳಾ ಸಂಘಟನೆ ಸೇರಿದಂತೆ ಮತ್ತು ವಿವಿಧ ಮಹಿಳಾ ಸಂಘಟನೆಯ ಕಾರ್ಯಕರ್ತರು ನಗರದ ನ್ಯಾಷನಲ್ ಕಾಲೇಜಿನಿಂದ ಜಗತ್ ಸರ್ಕಲ್ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿವರೆಗೆ ರ್ಯಾಲಿ ನಡೆಸಿ, ಪೊಲೀಸರು ನಡೆಸಿದ ಗೋಲಿಬಾರ್ನಲ್ಲಿ ಅಮಾಯಕರು ಸಾವನ್ನಪ್ಪಿದ್ದಾರೆ. ಹಲವರಿಗೆ ಗಂಭೀರ ಗಾಯಗಳಾಗಿವೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ನ್ಯಾಯ ದೊರಕಿಸಿಕೊಡಬೇಕೆಂದು ಒತ್ತಾಯಿಸಿದರು.
ಜನವಾದಿ ಮಹಿಳಾ ಸಂಘಟನೆಯ ಕೆ.ನೀಲಾ ಮಾತನಾಡಿ, ಪೌರತ್ವ ಕಾಯ್ದೆ ಮೂಲಕ ಬಿಜೆಪಿ ಮೋದಿ ಮತ್ತು ಅಮಿಶ್ ಶಾ ಸರಕಾರ ಒಡೆದು ಆಳುವ ನೀತಿ ಅನುಸರಿಸುತ್ತಿದ್ದಾರೆ. ಪೌರತ್ವ ಕಾಯ್ದೆ ಸಂವಿಧಾನದ ವಿರುದ್ಧವಾಗಿದ್ದು, ಇದನ್ನು ಪ್ರತಿಯೊಬ್ಬ ಭಾರತೀಯ ನಾಗರಿಕರು ವಿರೋಧಿಸಬೇಕಾಗಿದೆ ಎಂದರು.
ಸರಕಾರ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್ಆರ್ಸಿ ರದ್ದು ಪಡಿಸುವವರೆಗೆ ನಮ್ಮ ಹೋರಾಟ ನಿಲ್ಲದು. ಕೇಂದ್ರ ಸರಕಾರ ಜನತೆಯ ಅಭಿಪ್ರಾಯವನ್ನು ಆಲಿಸುವ ಮೂಲಕ ಜನವಿರೋಧಿ ಕಾಯ್ದೆಯನ್ನು ರದ್ದು ಪಡಿಸಬೇಕೆಂದು ಅವರು ಒತ್ತಾಯಿಸಿದರು.
ಈ ವೇಳೆ ರಾಬಿಯಾ ಬೇಗಂ, ಸೇರಿದಂತೆ ನೂರಾರು ಮಂದಿ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಮಹಿಳೆಯರು ಭಾಗವಹಿಸಿದ್ದರು.












