ಮಂಗಳೂರು: ಜ.4ರಂದು ದ.ಕ., ಉಡುಪಿ ಜಿಲ್ಲೆಗಳ ವಿವಿಧ ಸಂಘಟನೆಗಳಿಂದ ಸಿಎಎ, ಎನ್ಆರ್ ಸಿ ವಿರುದ್ಧ ಬೃಹತ್ ಅಸಹಕಾರ ಚಳವಳಿ
ಮಂಗಳೂರು : ದ.ಕ., ಉಡುಪಿ ಮುಸ್ಲಿಮ್ ಸೆಂಟ್ರಲ್ ಕಮಿಟಿ ನೇತೃತ್ವದಲ್ಲಿ ಜಿಲ್ಲೆಗಳ ವಿವಿಧ ಸಂಘಟನೆಗಳಿಂದ ಸಿಎಎ, ಎನ್ಆರ್ ಸಿ ವಿರುದ್ಧ ಜ. 4ರಂದು ಮಂಗಳೂರಿನಲ್ಲಿ ಶಾಂತ ರೀತಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ.
ಈ ಬಗ್ಗೆ ವಿವಿಧ ಮುಸ್ಲಿಂ ಸಂಘಟನೆಗಳ ಪ್ರತಿನಿಧಿಗಳ ನಿಯೋಗ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರಾದ ದಯಾನಂದ ಹಾಗೂ ಮಂಗಳೂರು ಪೊಲೀಸ್ ಆಯುಕ್ತ ಪಿ.ಎಸ್. ಹರ್ಷ ಅವರನ್ನು ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಭೇಟಿಯಾಗಿ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಇತ್ತೀಚೆಗೆ ಮಂಗಳೂರಿನಲ್ಲಿ ಪ್ರತಿಭಟನೆ ವೇಳೆ ನಡೆದ ಅಹಿತಕರ ಘಟನೆಗಳ ಬಗ್ಗೆ ಪೊಲೀಸ್ ಅಧಿಕಾರಿಗಳ ಗಮನ ಸೆಳೆಯಲಾಯಿತು. ಪ್ರತಿಭಟನೆಯಲ್ಲಿ ಗೋಲಿಬಾರ್ ನಿಂದ ಅಮಾಯಕರು ಕೊಲೆಯಾಗಿರುವುದಕ್ಕೆ ಪೊಲೀಸರ ವೈಫಲ್ಯವೇ ಕಾರಣವೆಂದು ಅಧಿಕಾರಿಗಳಿಗೆ ತಿಳಿಸಿದರು. ಗೋಲಿಬಾರ್ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು, ನಿರಪರಾಧಿಗಳನ್ನು ಬಂಧಿಸಿ ತೊಂದರೆ ಕೊಡಬಾರದು, ಘಟನೆಯ ಬಗ್ಗೆ ಕೂಲಂಕುಷ ತನಿಖೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಮನವಿ ಮಾಡಲಾಯಿತು.
ಅನಗತ್ಯವಾದ ಮತ್ತು ಗೊಂದಲದಿಂದ ಕೂಡಿದ ಯಾವುದೇ ಸಂದೇಶಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಬಾರ ದೆಂದೂ ಪ್ರತಿಭಟನೆ ಹೆಸರಿನಲ್ಲಿ ಶಾಂತಿ ಕದಡುವ ಯಾವುದೇ ಚಟುವಟಿಕೆಗಳಲ್ಲಿ ಯಾರೂ ತೊಡಗಿಸಿಕೊಳ್ಳಬಾರದೆಂದೂ ಸಾರ್ವಜನಿಕರಲ್ಲಿ ಅವರು ಮನವಿ ಮಾಡಿದರು.
ನಿಯೋಗದಲ್ಲಿ ಮಾಜಿ ಸಚಿವ ಯು.ಟಿ.ಖಾದರ್, ಮಾಜಿ ಶಾಸಕ ಬಿ.ಎ. ಮೊಯ್ದಿನ್ ಬಾವ, ಮಂಗಳೂರು ಕೇಂದ್ರ ಜುಮಾ ಮಸೀದಿ ಅಧ್ಯಕ್ಷ ಹಾಜಿ ಯೆನೆಪೋಯ ಅಬ್ದುಲ್ಲಾ ಕುಂಞಿ, ಕರ್ನಾಟಕ ಮುಸ್ಲಿಂ ಜಮಾಅತ್ ದ.ಕ. ಜಿಲ್ಲಾ ಕಾರ್ಯಾಧ್ಯಕ್ಷ ಹಾಜಿ ಎಸ್.ಎಂ. ರಶೀದ್, ಮುಸ್ಲಿಂ ಸೆಂಟ್ರಲ್ ಕಮಿಟಿ ಉಪಾಧ್ಯಕ್ಷ ಹಾಜಿ ಇಬ್ರಾಹಿಂ ಕೋಡಿಜಾಲ್, ಪ್ರಧಾನ ಕಾರ್ಯದರ್ಶಿ ಹನೀಫ್ ಹಾಜಿ, ಇಸ್ಲಾಮಿಕ್ ಕಲ್ಚರಲ್ ಸೆಂಟರ್ ಪ್ರಧಾನ ಕಾರ್ಯದರ್ಶಿ ಹಾಜಿ ಬಿ.ಎಂ. ಮುನ್ನಾರ್ ಅಲಿ, ಎಸ್.ವೈ.ಎಸ್, ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಎಂ.ಎಸ್.ಎಂ. ಝೈನಿ ಕಾಮಿಲ್, ಹಿದಾಯ ಫೌಂಡೇಶನ್ ಸ್ಥಾಪಕಾಧ್ಯಕ್ಷ ಎಚ್.ಕೆ. ಖಾಸಿಂ ಅಹ್ಮದ್, ಸದಸ್ಯ ಅಬ್ದುಲ್ ಜಲೀಲ್, ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷ ಮೊಹಮ್ಮದ್ ಮೋನು, ದ.ಕ. ವಕ್ಫ್ ಸಲಹಾ ಸಮಿತಿ ಸದಸ್ಯ ನ್ಯಾಯವಾದಿ ನೂರುದ್ದೀನ್ ಸಾಲ್ಮರ, ಮದ್ರಸ ಮ್ಯಾನೇಜ್ಮೆಂಟ್ ಗುರುಪುರ ವಲಯಾಧ್ಯಕ್ಷ ನೌಷಾದ್ ಸುರಲ್ಪಾಡಿ, ಸಾಮಾಜಿಕ ಕಾರ್ಯಕರ್ತ ಸುಹೈಲ್ ಖಾನ್ ಮುಂತಾದವರು ಉಪಸ್ಥಿತರಿದ್ದರು.