ಪ್ರಧಾನಿಯಿಂದ ರಾಜ್ಯದ ಮೂವರು ರೈತರಿಗೆ ಕೃಷಿ ಕರ್ಮಣ್ಯೆ ಪ್ರಶಸ್ತಿ ಪ್ರದಾನ: ಬಿಎಸ್ವೈ
ಜ.2ರಂದು ತುಮಕೂರಿನಲ್ಲಿ ರಾಷ್ಟ್ರಮಟ್ಟದ ರೈತ ಕಾರ್ಯಕ್ರಮ

ತುಮಕೂರು, ಡಿ.31: ಜ.2 ರಂದು ತುಮಕೂರು ನಗರದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ರೈತ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ರಾಜ್ಯದ ಮೂವರು ಪ್ರಗತಿಪರ ರೈತರಿಗೆ ಕೃಷಿ ಕರ್ಮಣ್ಯೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವಿವಿಧ ರಾಜ್ಯಗಳ 28 ರೈತರಿಗೆ ಪ್ರಶಸ್ತಿ ಪ್ರದಾನ ಹಾಗೂ ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ್ ಯೋಜನೆಯ ಫಲಾನುಭವಿಗಳಿಗೆ ಪ್ರಮಾಣಪತ್ರ ವಿತರಿಸಲಿದ್ದಾರೆ ಎಂದು ತಿಳಿಸಿದ ಅವರು, ಕಾರ್ಯಕ್ರಮದಲ್ಲಿ ಒಂದೂವರೆ ಲಕ್ಷಕ್ಕೂ ಹೆಚ್ಚು ರೈತರು ಭಾಗವಹಿಸಲಿದ್ದಾರೆ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಅಗತ್ಯ ಸಿದ್ಧತೆ ಮಾಡಲಿದ್ದೇವೆ ಎಂದು ಹೇಳಿದರು.
ಅಂದು ಮಧ್ಯಾಹ್ನ 2.15ಕ್ಕೆ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಲಿರುವ ಅವರು, ಡಾ.ಶಿವಕುಮಾರಸ್ವಾಮೀಜಿಗಳ ಗದ್ದುಗೆಗೆ ಪೂಜೆ ಸಲ್ಲಿಸಿದ ನಂತರ ಶ್ರೀಗಳ ವಸ್ತು ಪ್ರದರ್ಶನ ಭವನಕ್ಕೆ ಚಾಲನೆ ನೀಡಲಿದ್ದು, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಮಠದ ಕಾರ್ಯಕ್ರಮದ ನಂತರ ಜೂನಿಯರ್ ಕಾಲೇಜು ಮೈದಾನಕ್ಕೆ ಆಗಮಿಸುವ ಅವರು, ಸಂಜೆ ಐದರವರೆಗೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಮಣಿಪುರ್, ಜಾರ್ಖಂಡ್ ರಾಜ್ಯಗಳ ಮುಖ್ಯಮಂತ್ರಿಗಳು, ಉತ್ತರಾಖಂಡ ರಾಜ್ಯಪಾಲರು ಸೇರಿದಂತೆ ವಿವಿಧ ರಾಜ್ಯಗಳ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಈ ವೇಳೆ ಸಚಿವರಾದ ಮಾಧುಸ್ವಾಮಿ, ವಿ.ಸೋಮಣ್ಣ, ಸಂಸದ ಜಿ.ಎಸ್.ಬಸವರಾಜು, ಶಾಸಕರಾದ ಜ್ಯೋತಿಗಣೇಶ್, ಬಿ.ಸಿ.ನಾಗೇಶ್, ಮಸಾಲೆಜಯರಾಂ, ಮಾಜಿ ಶಾಸಕ ಸುರೇಶ್ಗೌಡ, ಮಾಜಿ ಎಂಎಲ್ಸಿ ಹುಲಿನಾಯ್ಕರ್, ಮುಖಂಡರಾದ ಹಾಲನೂರು ಲೇಪಾಕ್ಷಿ, ದಿಲೀಪ್ ಕುಮಾರ್ ಸೇರಿದಂತೆ ಇತರರಿದ್ದರು.







