ಮಹದಾಯಿ ಸಮಸ್ಯೆ ಇತ್ಯರ್ಥಕ್ಕೆ ಕ್ರಮ: ಸಚಿವ ಜಗದೀಶ್ ಶೆಟ್ಟರ್
ಹುಬ್ಬಳ್ಳಿ, ಜ.5: ಮಹದಾಯಿ ನೀರು ಹಂಚಿಕೆಗೆ ಸಂಬಂಧಿಸಿದ ಸಮಸ್ಯೆಯನ್ನು ಇತ್ಯರ್ಥ ಪಡಿಸುವಲ್ಲಿ ಬಿಜೆಪಿ ವತಿಯಿಂದ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಚವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ರವಿವಾರ ನಗರದಲ್ಲಿ ಕಳಸಾ-ಬಂಡೂರಿ ಯೋಜನೆ ಜಾರಿ ವಿಚಾರದ ಬಗ್ಗೆ ಪಕ್ಷಾತೀತವಾಗಿ ಮಲಪ್ರಭಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ಜನಪ್ರತಿನಿಧಿಗಳ ಸಭೆ ನಡೆಯಿತು. ಈ ವೇಳೆ ಮಾತನಾಡಿದ ಅವರು, ಕಾವೇರಿ ನೀರು ಹಂಚಕೆ ಸಮಸ್ಯೆ ಬಂದಾಗ ಆ ಭಾಗದ ಮುಖಂಡರು ಒಂದಾಗಿ ಬಗೆ ಹರಿಸಿಕೊಳ್ಳುತ್ತಾರೆ. ಅದೇ ರೀತಿಯಲ್ಲಿ ಮಹದಾಯಿ ನೀರು ಹಂಚಿಕೆಯಲ್ಲೂ ಪಕ್ಷಭೇದ ಮರೆತು ಒಂದಾಗಿ ಸಮಸ್ಯೆ ಇತ್ಯರ್ಥಕ್ಕೆ ಮುಂದಾಗಿದ್ದೇವೆಂದು ತಿಳಿಸಿದರು.
ಇಂದು ಮಹಾದಾಯಿ ಸಮಸ್ಯೆಗೆ ಸಂಬಂಧಿಸಿದಂತೆ ಸರ್ವಪಕ್ಷಗಳ ಸಭೆ ನಡೆದಿರುವುದು ಒಳ್ಳೆಯ ಬೆಳವಣಿಗೆ. ಇದು ಇಲ್ಲಿಗೆ ಮುಗಿಯುವುದಿಲ್ಲ. ಮುಂದಿನ ಸಭೆಯಲ್ಲಿ ಮತ್ತಷ್ಟು ಹಿರಿಯರನ್ನು ಸಭೆಗೆ ಆಹ್ವಾನಿಸಿ ಒಂದು ಸೂಕ್ತ ತೀರ್ಮಾನಕ್ಕೆ ಬರಲಾಗುವುದು ಎಂದು ಅವರು ಹೇಳಿದರು.
ಪರಿಷತ್ನ ವಿಪಕ್ಷ ನಾಯಕ ಎಸ್.ಆರ್.ಪಾಟೀಲ್ ಮಾತನಾಡಿ, ಮಹದಾಯಿ ಯೋಜನೆಗೆ ಸಂಬಂಧ ಎಲ್ಲರ ಸಹಕಾರ ಸಿಕ್ಕಿದೆ. ಇನ್ನು ಮುಂದೆ ಯೋಜನೆ ಜರಿಗಾಗಿ ಒಗ್ಗಟ್ಟಿನಿಂದ ಹೋರಾಟ ಮಾಡುತ್ತೇವೆ. ಮುಂದಿನ ಸಭೆಯಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದರು.
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮಾತನಾಡಿ, ಮಹದಾಯಿ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕದಿಂದ ಏನೆಲ್ಲಾ ಮಾಡಬೇಕೊ ಅದೆಲ್ಲವನ್ನು ಮಾಡಲಾಗುತ್ತಿದೆ. ರಾಜ್ಯದ ಹಿತಾಸಕ್ತಿಗಳನ್ನು ಯಾವುದೇ ಕಾರಣಕ್ಕೂ ಬಿಟ್ಟು ಕೊಡುವುದಿಲ್ಲವೆಂದು ತಿಳಿಸಿದರು.