ಡಿಸಿಎಂ ಹುದ್ದೆ ಹೆಚ್ಚಳದ ಬಗ್ಗೆ ಪಕ್ಷದಲ್ಲಿ ಚರ್ಚೆಯಾಗಿಲ್ಲ: ಕಾರಜೋಳ
ಉಡುಪಿ, ಜ.19: ಮುಖ್ಯಮಂತ್ರಿ ಯಡಿಯೂರಪ್ಪ ವಿದೇಶ ಪ್ರವಾಸದಲ್ಲಿದ್ದು, ಅವರು ಬಂದ ನಂತರ ಸಚಿವ ಸಂಪುಟ ವಿಸ್ತರಣೆ ಆಗುವ ಸಾಧ್ಯತೆ ಇದೆ ಎಂದು ರಾಜ್ಯ ಉಪಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ, ಸಮಾಜ ಕಲ್ಯಾಣ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.
ಉಡುಪಿ ಶ್ರೀಕೃಷ್ಣ ಮಠಕ್ಕೆ ರವಿವಾರ ಭೇಟಿ ನೀಡಿ ದೇವರ ದರ್ಶನ ಪಡೆದು ಪರ್ಯಾಯ ಅದಮಾರು ಶ್ರೀಈಶಪ್ರಿಯ ತೀರ್ಥ ಸ್ವಾಮೀಜಿಯನ್ನು ಗೌರವಿಸಿ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡುತಿದ್ದರು.
ಈಗ ಇರುವ ಮೂರು ಉಪಮುಖ್ಯಮಂತ್ರಿ ಹುದ್ದೆ ಹೆಚ್ಚಳ ಮಾಡುವ ಕುರಿತು ಹೊರಗಡೆ ಚರ್ಚೆ ಆಗುತ್ತಿದೆಯೇ ಹೊರತು ಪಕ್ಷ ಮತ್ತು ಸರಕಾರದಲ್ಲಿ ಯಾವುದೇ ಚರ್ಚೆ ನಡೆಯುತ್ತಿಲ್ಲ. ಯಾವುದೇ ವಿಚಾರದಲ್ಲಿಯೂ ಪಕ್ಷ ತೆಗೆದು ಕೊಳ್ಳುವ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರಬೇಕು. ಹಾಗೇ ನಾವು ಎಲ್ಲ ಪಕ್ಷದ ನಿರ್ಧಾರಕ್ಕೆ ಬದ್ಧರಾಗಿದ್ದೇವೆ ಎಂದರು.
ಉಪಚುನಾವಣೆಯಲ್ಲಿ ಗೆದ್ದ ಎಲ್ಲ ಶಾಸಕರುಗಳಿಗೆ ಅಥವಾ ಕೇವಲ ಏಳು ಮಂದಿ ಶಾಸಕರುಗಳಿಗೆ ಮಾತ್ರವೇ ಸಚಿವ ಸ್ಥಾನ ನೀಡಲಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ಯಾವುದೇ ನಿರ್ಣಯ ಆಗಿಲ್ಲ. ಆ ಕುರಿತು ಹೈಕಮಾಂಡ್ ಹಾಗೂ ಮುಖ್ಯಮಂತ್ರಿಗಳು ಚರ್ಚೆ ಮಾಡಿ ಯೋಗ್ಯ ವಾದ ನಿರ್ಧಾರವನ್ನು ಮಾಡಲಿದ್ದಾರೆ ಎಂದು ತಿಳಿಸಿದರು.
ಬಿಜೆಪಿ ಸರಕಾರ ರಚನೆಯಾಗಲು ಈ ಶಾಸಕರುಗಳೇ ಕಾರಣವಾಗಿರುವುದು ಎಲ್ಲರ ಗಮನದಲ್ಲಿದೆ. ಅದನ್ನು ಗಮನದಲ್ಲಿಟ್ಟು ಕೊಂಡೇ ನಿರ್ಣಯಗಳನ್ನು ಮಾಡಲಾಗುತ್ತದೆ ಎಂದು ಸಚಿವರು ಹೇಳಿದರು. ಈ ಸಂದರ್ಭದಲ್ಲಿ ಉಡುಪಿ ಶಾಸಕ ಕೆ.ರಘುಪತಿ ಭಟ್ ಮೊದಲಾದವರು ಉಪಸ್ಥಿತರಿದ್ದರು.