ಮಂಗಳೂರಿನ ಸರ್ವತೋಮುಖ ಅಭಿವೃದ್ದಿಗೆ ಎಲ್ಲಾ ಇಲಾಖೆಗಳ ಸಹಕಾರ ಅಗತ್ಯ: ಶಾಸಕ ವೇದವ್ಯಾಸ ಕಾಮತ್
ಮಂಗಳೂರು, ಜ.20: ನಗರದ ಸರ್ವತೋಮುಖ ಅಭಿವೃದ್ದಿಗೆ ಎಲ್ಲಾ ಇಲಾಖೆಗಳ ಸಹಕಾರ ಬೇಕಾಗಿದೆ ಎಂದು ಶಾಸಕ ಡಿ ವೇದವ್ಯಾಸ ಕಾಮತ್ ಹೇಳಿದರು.
ಮಂಗಳೂರು ನಗರ ಪ್ರಾಧಿಕಾರ ಸಭಾಂಗಣದಲ್ಲಿ ಸ್ಮಾರ್ಟ್ ಸಿಟಿ ಲಿ. ಶನಿವಾರ ಹಮ್ಮಿಕೊಂಡಿದ್ದ ನಗರ ಮಟ್ಟದ ಸಲಹಾ ಸಮಿತಿ ಸಭೆ (ಸಿಟಿ ಲೆವೆಲ್ ಅಡ್ವೈಸರಿ ಫಾರಮ್)ಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಮಂಗಳೂರು ಸ್ಮಾರ್ಟ್ಸಿಟಿ ಯೋಜನೆಯು ಯಶಸ್ವಿಯಾಗಬೇಕಾದರೆ ಎಲ್ಲ ಇಲಾಖೆಗಳು ಕೈಜೋಡಿಸಿ ಕೆಲಸ ಮಾಡಬೇಕು. ಜೊತೆಗೆ ಯಾವುದೇ ಯೋಜನೆಯನ್ನು ಕಾರ್ಯರೂಪಕ್ಕೆ ತರುವಾಗ ಜನಸಾಮಾನ್ಯರು ಸದುಪಯೋಗಪಡಿಸಿಕೊಳ್ಳುವಂತೆ ಯೋಗ್ಯವಾದ ರೀತಿಯಲ್ಲಿ ಕಾರ್ಯರೂಪಕ್ಕೆ ತರಲು ಅಧಿಕಾರಿಗಳು ಮುಂದಾಗಬೇಕು ಎಂದರು.
ಸ್ಮಾರ್ಟ್ಸಿಟಿ ಲಿ. ವ್ಯವಸ್ಥಾಪಕ ನಿರ್ದೇಶಕ ಮುಹಮ್ಮದ್ ನಜೀರ್ ಮಾತನಾಡಿ ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿ ಪ್ರದೇಶ ಆಧಾರಿತ ಅಭಿವೃದ್ಧಿಯ ಮೂಲಕ ನಗರಾಭಿವೃದ್ಧಿ, ಮರು ಸುಧಾರಣೆ, ಹಸಿರು ಪ್ರದೇಶದ ಅಭಿವೃದ್ಧಿ ಹೀಗೆ ವಿಂಗಡಣೆ ಮಾಡುವ ಮೂಲಕ ಅಭಿವೃದ್ಧಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪಾನ್ ಸಿಟಿ ಉತ್ತೇಜನದ ಮೂಲಕ ಮಾಹಿತಿ ತಂತ್ರಜ್ಞಾನ ಅಳವಡಿಕೆ ಜೊತೆಗೆ ನಗರದ ಜನರಿಗೆ ಮೂಲ ಸೌಕರ್ಯ ಸೇವೆಗಳನ್ನು ಒದಗಿಸುವಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದರು.
ಈಗಾಗಲೇ ಈ ಯೋಜನೆಯ ಅನ್ವಯ 1.91 ಕೋ.ರೂ. ವೆಚ್ಚದಲ್ಲಿ ಎಲ್ಇಡಿ. ಲೈಟ್ ಆಳವಡಿಸಲಾಗಿದೆ. 0.75 ಕೋ.ರೂ. ವೆಚ್ಚದಲ್ಲಿ ಹಂಪನಕಟ್ಟೆಯ ಕ್ಲಾಕ್ ಟವರ್ ನಿರ್ಮಾಣಗೊಂಡಿದೆ. 6.16 ಕೋ.ರೂ. ವೆಚ್ಚದಲ್ಲಿ ನೆಹರೂ ಮೈದಾನದಿಂದ ಹಂಪನಕಟ್ಟೆ ಕ್ಲಾಕ್ ಟವರ್, ಎ.ಬಿ. ಶೆಟ್ಟಿ ವೃತ್ತದವರೆಗೆ ಸ್ಮಾರ್ಟ್ ರಸ್ತೆಯು ಕಾಮಗಾರಿಯಲ್ಲಿದೆ. ಮಾಹಿತಿ ಸಂವಹನ ಮತ್ತು ತಂತ್ರಜ್ಞಾನ (ಐ.ಸಿ.ಟಿ)ಯಿಂದ ಕಸಬಾ-ಬೆಂಗ್ರೆ ಪ್ರಾಥಮಿಕ ಶಾಲೆ ಮತ್ತು ಬೆಂಗ್ರೆ ಪ್ರೌಢಶಾಲೆಗಳಿಗೆ ಇ-ಸ್ಮಾರ್ಟ್ ಸ್ಕೂಲ್, ಮಾಸ್ಟರ್ ಪ್ಲಾನ್ ಮೂಲಕ ರೈಲು ನಿಲ್ದಾಣ, ಮಿಲಾಗ್ರೀಸ್ ಚರ್ಚ್, ವೆನ್ಲಾಕ್ ಆಸ್ಪತ್ರೆಯವರೆಗೆ ರಸ್ತೆ ಅಗಲೀಕರಣ ಮತ್ತು ಹಳೆಯ ಬಸ್ ನಿಲ್ದಾಣಗಳ ಅಭಿವೃದ್ಧಿ, ಹಂಪನಕಟ್ಟೆಯ ಹತ್ತಿರ ಮಲ್ಟಿ ಲೆವೆಲ್ ಕಾರ್ ಪಾರ್ಕಿಂಗ್ ವ್ಯವಸ್ಥೆ, ಕಾರ್ಸ್ಟ್ರೀಟ್ ಮತ್ತು ಶ್ರೀ ವೆಂಕಟರಮಣ ದೇವಸ್ಥಾನ ಪ್ರದೇಶದ ಮರು ಸುಧಾರಣೆ, ವೆನ್ಲಾಕ್ ಆಸ್ಪತ್ರೆ ಹಾಗೂ ಲೇಡಿಗೋಶನ್ ಆಸ್ಪತ್ರೆಯ ಮಾಸ್ಟರ್ ಪ್ಲಾನ್ ಯೋಜನೆಯ ಮೂಲಕ ಉನ್ನತೀಕರಣ, ಮಂಗಳಾ ಸ್ಟೇಡಿಯಂ ಅಭಿವೃದ್ಧಿ, ಉರ್ವ ಮಾರ್ಕೆಟ್ ಹತ್ತಿರ ಕಬ್ಬಡ್ಡಿ ಹಾಗೂ ಶೆಟಲ್ ಬ್ಯಾಡ್ಮಿಟನ್ ಕ್ರೀಡೆಗೆ ಒಳಾಂಗಣ ಕ್ರೀಡಾಂಗಣ ನಿರ್ಮಾಣವಾಗಲಿದೆ ಎಂದು ನಝೀರ್ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್, ಶಾಸಕ ಡಾ. ವೈ. ಭರತ್ ಶೆಟ್ಟಿ, ಪಾಲಿಕೆಯ ಆಯುಕ್ತ ಅಜಿತ್ ಕುಮಾರ್ ಹೆಗ್ಡೆ ಶಾನಾಡಿ, ಸ್ಮಾರ್ಟ್ಸಿಟಿ ಲಿ. ಸ್ವತಂತ್ರ ನಿರ್ದೇಶಕಿ ಅಂಬಾ ಶೆಟ್ಟಿ ಮತ್ತಿತರು ಉಪಸ್ಥಿತರಿದ್ದರು.