ರಾಜ್ಯದಲ್ಲಿ ಹೂಡಿಕೆಗೆ ಪೂರಕ ವಾತಾವರಣ: ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್
ಬೆಂಗಳೂರು, ಜ.31: ರಾಜ್ಯದಲ್ಲಿ ಬಂಡವಾಳ ಹೂಡಲು ಪೂರಕ ವಾತಾವರಣ ಇದ್ದು, ಇತರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಈ ವಿಷಯದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ ಎಂದು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ನುಡಿದರು.
ಶುಕ್ರವಾರ ನಗರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ಭಾರತೀಯ ಕೈಗಾರಿಕಾ ಸಂಘಟನೆ(ಸಿಐಐ) ಆಯೋಜಿಸಿದ್ದ, ಕೈಗಾರಿಕಾ ಹಬ್ ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಒಂದು ರಾಜ್ಯದಲ್ಲಿ ಬಂಡವಾಳ ಹೂಡಿಕೆ ಪ್ರಮಾಣ ಹೆಚ್ಚಾಗಬೇಕಾದರೆ ಅಲ್ಲಿನ ಕೈಗಾರಿಕಾ ನೀತಿ ಉತ್ತಮವಾಗಿರಬೇಕು. ರಾಜ್ಯ ಸರಕಾರ ಬಂಡವಾಳ ಹೂಡಲು ಅನುಕೂಲವಾಗುವ ರೀತಿ ನೀತಿ ಜಾರಿಗೊಳಿಸಿದೆ ಎಂದರು.
ಇತ್ತೀಚಿಗೆ ದಾವೋಸ್ನಲ್ಲಿ ಜರುಗಿದ ವರ್ಲ್ಡ್ ಎಕನಾಮಿಕ್ ಫೋರಂ ಸಮಾವೇಶದ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಅವರು ನಲವತ್ತಕ್ಕಿಂತ ಅಧಿಕ ವಿದೇಶಿ ಹೂಡಿಕೆದಾರರೊಂದಿಗೆ ಚರ್ಚೆ ನಡೆಸಿದ್ದು, ಬಹಳಷ್ಟು ಮಂದಿ ರಾಜ್ಯದಲ್ಲಿ ಹೂಡಿಕೆ ಮಾಡಲು ಮುಂದಾಗಿದ್ದಾರೆ ಎಂದು ಮಾಹಿತಿ ನೀಡಿದರು.
ಸಿಐಐ ಕರ್ನಾಟಕ ಅಧ್ಯಕ್ಷ ಅಮನ್ ಚೌಧರಿ ಮಾತನಾಡಿ, ಕೈಗಾರಿಕೆಗಳ ಸ್ಥಾಪನೆಯಿಂದ ಉದ್ಯೋಗ ಅವಕಾಶ ಲಭ್ಯವಾಗಲಿದೆ. ನಿರುದ್ಯೋಗ ಸಮಸ್ಯೆ ನಿವಾರಣೆಯಾಗಲಿದೆ ಎಂದು ಅಭಿಪ್ರಾಯಪಟ್ಟರು.
ದೇಶದ ಆರ್ಥಿಕ ಸ್ಥಿತಿ ಸುಧಾರಣೆಗೆ ಆಮದು ಪ್ರಮಾಣ ಕಡಿಮೆ ಮಾಡಿ ರಪ್ತು ಪ್ರಮಾಣ ಹೆಚ್ಚಿಸುವುದು ಮುಖ್ಯ. ಈ ನಿಟ್ಟಿನಲ್ಲಿ ಸ್ಥಳೀಯ ಮಟ್ಟದಲ್ಲಿ ಉತ್ಪಾದಿಸಿದ ವಸ್ತುಗಳನ್ನು ಹೇಗೆ, ಎಲ್ಲಿ ರಫ್ತು ಮಾಡಬೇಕೆಂಬ ಬಗ್ಗೆ ಮಾಹಿತಿ ನೀಡಲಾಗುತ್ತಿದೆ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ವೋಲ್ವೋ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕ ಕಮಲ್ ಬಾಲಿ, ಸಿಐಐ ಕರ್ನಾಟಕ ಉಪಾಧ್ಯಕ್ಷ ಸಂದೀಪ್ ಸಿಂಗ್, ಕೆ.ರಮೇಶ್ ಸೇರಿದಂತೆ ಪ್ರಮುಖರಿದ್ದರು.







