ಕಚೇರಿಯಲ್ಲಿ ‘ಸಕಾಲ’ ಬೋರ್ಡ್ ಕಡ್ಡಾಯ: ಎಡಿಸಿ
ಸಕಾಲ ಯೋಜನೆಯ ಸಮರ್ಪಕ ಅನುಷ್ಠಾನ ಪರಿಶೀಲನಾ ಸಭೆ

ಮಂಗಳೂರು, ಫೆ.3: ಸಾರ್ವಜನಿಕರಿಗೆ ಸಕಾಲ ಯೋಜನೆ ಬಗ್ಗೆ ಮಾಹಿತಿ ನೀಡಲು ಎಲ್ಲ ಸರಕಾರಿ ಕಚೇರಿಗಳಲ್ಲಿ ಸಕಾಲಕ್ಕೆ ಸಂಬಂಧಿಸಿದ ಸೂಚನಾಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ ಸೂಚನೆ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸೋಮವಾರ ನಡೆದ ಸಕಾಲದ ಸಮರ್ಪಕವಾದ ಅನುಷ್ಠಾನವನ್ನು ಪರಿಶೀಲಿಸಿ ಸಭೆಯಲ್ಲಿ ಮಾತನಾ ಡಿದ ಅವರು, ರಾಜ್ಯದಲ್ಲಿ ಸಕಾಲ ಅನುಷ್ಠಾನದಲ್ಲಿ ಜಿಲ್ಲೆಯು ಈಗಾಗಲೇ ಕಡಿಮೆ ಸ್ಥಾನ ಪಡೆದುಕೊಂಡಿದೆ. ಅಧಿಕಾರಿಗಳು ಈ ಸಕಾಲ ಯೋಜನೆಯ ಅಡಿಯಲ್ಲಿ ಬರುವ ಎಲ್ಲ ಸೇವೆಗಳನ್ನು ಸಾರ್ವಜನಿಕರಿಗೆ ನೀಡಬೇಕು. ಒಂದು ವೇಳೆ ಯಾವುದೇ ಅಧಿಕಾರಿಗಳು ಈ ಸೇವೆ ನೀಡಲು ನಿರಾಕರಿಸಿದರೆ ಅವರ ವಿರುದ್ಧ ಸರಕಾರವು ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದರು.
ಜಿಲ್ಲೆಯ ಕೆಲವೊಂದು ಭಾಗಗಳಲ್ಲಿ ಈ ಯೋಜನೆಯನ್ನು ಸಮರ್ಪಕವಾಗಿ ಜಾರಿ ಮಾಡದ ಅಧಿಕಾರಿಗಳ ವಿರುದ್ಧ ಅಸಮಧಾನ ವ್ಯಕ್ತಪಡಿಸಿದ ಅವರು, ಜಿಲ್ಲೆಯ ಎಲ್ಲ ಅಧಿಕಾರಿ ವರ್ಗವೂ ಈ ಕಾಯ್ದೆಯ ಸಂಪೂರ್ಣ ಮಾಹಿತಿಯನ್ನು ಹೊಂದಿರಬೇಕು. ಎಲ್ಲ ಇಲಾಖೆಗಳು ಸಕಾಲ ಯೋಜನೆಯ ಅಡಿಯಲ್ಲಿ ಅರ್ಜಿಗಳನ್ನು ಸ್ವೀಕರಿಸಬೇಕು. ಹಾಗೆಯೇ ನಿಗದಿತ ಸಮಯದಲ್ಲಿ ಸಾರ್ವಜನಿಕ ಸೇವೆಯನ್ನು ನೀಡಬೇಕು ಎಂದರು.
ಮುಂದಿನ ದಿನದಲ್ಲಿ ಜಿಲ್ಲೆಯು ಉತ್ತಮ ಸಾಧನೆಯನ್ನು ಮಾಡಬೇಕು. ನಾವು ಈ ಹಿಂದೆ ಮಾಡಿದ ತಪ್ಪನ್ನು ಪುನಃ ಮಾಡದೇ ಉತ್ತಮ ಸೇವೆ ನೀಡಿದಲ್ಲಿ ಜಿಲ್ಲೆಯು ಉನ್ನತ ಸ್ಥಾನ ಪಡೆಯಲು ಅವಕಾಶವಿದೆ ಎಂದರು. ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿ ಭಾಗವಹಿಸಿದ್ದರು.







