ಪ್ರವಾಹದಿಂದ ಹಾನಿ: ಕಾಮಗಾರಿ ಪೂರ್ಣಗೊಳಿಸಲು ಗಡುವು ನೀಡಿದ ಡಿಸಿಎಂ ಕಾರಜೋಳ

ಬಾಗಲಕೋಟೆ, ಫೆ.3: ಜಿಲ್ಲೆಯಲ್ಲಿ ಪ್ರವಾಹದಿಂದ ಹಾನಿಗೊಳಗಾದ ರಸ್ತೆ, ಸೇತುವೆ, ವಿದ್ಯುತ್ ಹಾಗೂ ಶಾಲಾ ಕೊಠಡಿ ಸೇರಿದಂತೆ ಇತರೆ ಕಾಮಗಾರಿಗಳನ್ನು ಫೆ.28 ರೊಳಗಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಸೂಚಿಸಿದ್ದಾರೆ.
ಸೋಮವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜರುಗಿದ ಜಿಲ್ಲೆಯ ನೆರೆ ಪ್ರವಾಹ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರವಾಹದಿಂದ ಹಾನಿಗೊಳಗಾದ ಕಾಮಗಾರಿಗಳಿಗೆ ಮಂಜೂರಾತಿ ನೀಡಲಾಗಿದೆ. ಕೆಲವೊಂದು ಕಾಮಗಾರಿಗಳು ಮಾತ್ರ ಪೂರ್ಣಗೊಂಡಿದ್ದು, ಬಾಕಿ ಕಾಮಗಾರಿಗಳು ಫೆ.28ಕ್ಕೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಪ್ರತಿಯೊಂದು ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ವ್ಯತ್ಯಾಸ ಕಂಡುಬಂದಲ್ಲಿ ಸೂಕ್ತ ಕ್ರಮಕೈಗೊಳ್ಳಲಾಗುವುದು ಗೋವಿಂದ ಕಾರಜೋಳ ಎಚ್ಚರಿಕೆ ನೀಡಿದರು.
ಸಭೆಯ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಆಗಸ್ಟ್ ತಿಂಗಳಲ್ಲಿ ಸಂಭವಿಸಿದ ಪ್ರವಾಹದಿಂದ ಒಟ್ಟು 12,013 ಮನೆಗಳು ಹಾನಿಗೊಳಾಗಿದ್ದು, ಅದರಲ್ಲಿ ಎ ಕೆಟಗರಿಯಲ್ಲಿ 576, ಬಿ ಕೆಟಗರಿಯಲ್ಲಿ 2638 ಹಾಗೂ ಸಿ ಕೆಟಗರಿಯಲ್ಲಿ 8801 ಮನೆಗಳು ಹಾನಿಗೊಳಗಾಗಿ ಒಟ್ಟು 200 ಕೋಟಿ ರೂ. ಹಾನಿಗೊಳಗಾಗಿದೆ ಎಂದರು. ಈ ಪೈಕಿ ಎ ಮತ್ತು ಬಿ ವರ್ಗದ ಮನೆಗಳು ಸೇರಿ ಒಟ್ಟು 1084 ಮನೆಗಳಿಗೆ ಒಟ್ಟು 100 ಕೋಟಿ ರೂ.ಪರಿಹಾರ ವಿತರಿಸಲಾಗಿದ್ದು, ಮನೆ ಕಟ್ಟಲು ಪ್ರಾರಂಭಿಸಿದ್ದಾರೆ. ಉಳಿದ ಸಿ ವರ್ಗದ ಮನೆಗಳನ್ನು ಕಟ್ಟಲು ಪ್ರಾರಂಭಿಸುವಂತೆ ಒತ್ತಾಯಿಸಲಾಗುತ್ತಿದೆ ಎಂದು ಅವರು ತಿಳಿಸಿದರು.
ರಸ್ತೆ ಹಾನಿ ದುರಸ್ತಿಗೆ 839 ಕಾಮಗಾರಿಗೆ 50 ಕೋಟಿ ರೂ.ಗಳಿಗೆ ಮಂಜೂರಾತಿ ನೀಡಲಾಗಿದೆ. 839 ಕಾಮಗಾರಿಗಳ ಪೈಕಿ 683 ಕಾಮಗಾರಿಗಳು ಪೂರ್ಣಗೊಂಡಿದ್ದು, 136 ಪ್ರಗತಿಯಲ್ಲಿವೆ. ಕೃಷಿ ಮತ್ತು ತೋಟಗಾರಿಕೆ ಸೇರಿದಂತೆ ಒಟ್ಟು 40,594 ಕುಟುಂಬಗಳ ಬೆಳೆ ನಾಶವಾಗಿದ್ದು, ಈ ಪೈಕಿ 30,408 ಕುಟುಂಬಗಳಿಗೆ 88 ಕೋಟಿ ರೂ.ರೈತರ ಖಾತೆಗಳಿಗೆ ಜಮಾ ಮಾಡಲಾಗಿದೆ ಎಂದು ಅವರು ತಿಳಿಸಿದರು.
ಜಿ.ಪಂ.ವ್ಯಾಪ್ತಿಯಲ್ಲಿ ಹಾನಿಗೊಳಗಾದ ಕಾಮಗಾರಿಗಳಿಗೆ 23 ಕೋಟಿ ರೂ. ವೆಚ್ಚದಲ್ಲಿ 338 ಕಾಮಗಾರಿಗಳಿಗೆ ಮಂಜೂರಾತಿ ನೀಡಲಾಗಿದೆ. ಸೇತುವೆ, ಸಿಡಿ ಕೆಲಸ ಹಾಗೂ ರಸ್ತೆ ಕಾಮಗಾರಿಗಳಿಗೆ 28 ಕೋಟಿ ವೆಚ್ಚದಲ್ಲಿ 202 ಕಾಮಗಾರಿಗಳಿಗೆ ಮಂಜೂರಾತಿ ನೀಡಿದ್ದು, ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದು ಗೋವಿಂದ ಕಾರಜೋಳ ಹೇಳಿದರು.
ಪ್ರಕೃತಿ ವಿಕೋಪ ನಿಧಿಯಿಂದ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ರಸ್ತೆ, ಸೇತುವೆ ಹಾಗೂ ಸಿಡಿ ಕೆಲಸಗಳು ಸೇರಿ ಒಟ್ಟು 46 ಕಾಮಗಾರಿಗಳಿಗೆ 51.46 ಕೋಟಿ ರೂ. ಮಂಜೂರಾತಿ ನೀಡಲಾಗಿದೆ. ಈ ಪೈಕಿ ಈಗಾಗಲೇ 15 ಕಾಮಗಾರಿಗಳು ಪೂರ್ಣಗೊಂಡಿದ್ದು, 27 ಪ್ರಗತಿಯಲ್ಲಿವೆ. ಒಂದು ಕಾಮಗಾರಿ ಮಾತ್ರ ಸರಕಾರ ಮಟ್ಟದಲ್ಲಿ ಉಳಿದಿರುವುದಾಗಿ ಅವರು ತಿಳಿಸಿದರು.
ಸಭೆಯಲ್ಲಿ ಶಾಸಕ ವೀರಣ್ಣ ಚರಂತಿಮಠ, ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಪ್ರೊಬೇಷನರಿ ಐಎಎಸ್ ಗರಿಮಾ ಪನ್ವಾರ್, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಜಿ.ಪಂ.ಉಪಕಾರ್ಯದರ್ಶಿ ಎ.ಜಿ.ತೋಟದ, ಉಪವಿಭಾಗಾಧಿಕಾರಿಗಳಾದ ಎಂ.ಗಂಗಪ್ಪ, ಸಿದ್ದು ಹುಲ್ಲೊಳ್ಳಿ, ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಗಣಪತಿ ಪಾಟೀಲ್ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಮುಧೋಳದಲ್ಲಿ ಕೌಶಲ್ಯ ತರಬೇತಿ ಕೇಂದ್ರ ಸಾರಿಗೆ ಮತ್ತು ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ರಾಜ್ಯದಲ್ಲಿ 4 ಹೊಸ ಕೌಶಲ್ಯ ತರಬೇತಿ ಕೇಂದ್ರ ಪ್ರಾರಂಭಿಸಲಾಗುತ್ತಿದ್ದು, ಈ ಪೈಕಿ ಬಾಗಲಕೋಟೆ ಜಿಲ್ಲೆಯ ಮುಧೋಳ ಹಾಗೂ ಅಥಣಿಯಲ್ಲಿ ಶೀಘ್ರದಲ್ಲಿಯೆ ಪ್ರಾರಂಭಿಸಲಾಗುತ್ತಿದೆ. ವಾಹನ ಚಾಲಕರ ಬೇಡಿಕೆ ಹೆಚ್ಚಿರುವುದರಿಂದ ಈ ತರಬೇತಿ ಕೇಂದ್ರದ ಮೂಲಕ ನಿರುದ್ಯೋಗಿಗಳಿಗೆ ವಾಹನಾ ಚಾಲನಾ ತರಬೇತಿ ನೀಡುವುದರ ಜೊತೆಗೆ ಅವರಿಗೆ ಲೈಸೆನ್ಸ್ ಉಚಿತವಾಗಿ ನೀಡಿ ಕೆಲಸ ಸಿಗುವಂತೆ ಮಾಡುವ ಉದ್ದೇಶ ಹೊಂದಲಾಗಿದೆ.
-ಗೋವಿಂದ ಕಾರಜೋಳ, ಉಪ ಮುಖ್ಯಮಂತ್ರಿ







