ಫೆ.7ರಿಂದ 39ನೇ ಎಬಿವಿಪಿ ರಾಜ್ಯ ಸಮ್ಮೇಳನ

ಮಂಗಳೂರು, ಫೆ.5: ಸುಮಾರು 20 ವರ್ಷಗಳ ಬಳಿಕ ಮಂಗಳೂರು ನಗರದಲ್ಲಿ 39ನೇ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ನ (ಎಬಿವಿಪಿ) ರಾಜ್ಯ ಸಮ್ಮೇಳನ ಜರುಗಲಿದೆ. ನಗರದ ಪುರಭವನದಲ್ಲಿ ಫೆ.7ರ ಅಪರಾಹ್ನ 4 ಗಂಟೆಗೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಸಮ್ಮೇಳನವನ್ನು ಉದ್ಘಾಟಿಸಲಿದ್ದು, ಫೆ.9ರಂದು ಸಮ್ಮೇಳನ ಸಮಾರೋಪಗೊಳ್ಳಲಿದೆ ಎಂದು ಸ್ವಾಗತ ಸಮಿತಿಯ ಅಧ್ಯಕ್ಷ ಕೆ.ಸಿ. ನಾಯಕ್ ತಿಳಿಸಿದ್ದಾರೆ.
ನಗರದ ಖಾಸಗಿ ಹೊಟೇಲ್ನಲ್ಲಿ ಬುಧವಾರ ಸಂಜೆ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉದ್ಘಾಟನಾ ಸಮಾರಂಭದಲ್ಲಿ ಎಬಿವಿಪಿ ಮಾಜಿ ರಾಷ್ಟ್ರಾಧ್ಯಕ್ಷ, ನಾಗಲ್ಯಾಂಡ್ ಮಾಜಿ ರಾಜ್ಯಪಾಲ ಪಿ.ಬಿ.ಆಚಾರ್ಯ ಅಧ್ಯಕ್ಷತೆ ವಹಿಸುವರು. ಎಬಿವಿಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಆಶಿಷ್ ಚೌಹಾಣ್ ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಎಸ್. ಯಡಪಡಿತ್ತಾಯ ಮುಖ್ಯಅತಿಥಿಗಳಾಗಿ ಭಾಗವಹಿಸುವರು. ಅಪರಾಹ್ನ 3:30ಕ್ಕೆ ಕರ್ನಾಟಕ ಜಾನಪದ ಅಕಾಡಮಿಯ ಅಧ್ಯಕ್ಷೆ ಮಂಜಮ್ಮ ಜೋಗತಿ ಪ್ರದರ್ಶಿನಿಯನ್ನು ಉದ್ಘಾಟಿಸುವರು ಎಂದು ಸ್ವಾಗತ ಸಮಿತಿ ಅಧ್ಯಕ್ಷರು ಹೇಳಿದರು.
ರಾಜ್ಯ ಸಮ್ಮೇಳನದಲ್ಲಿ ಸುಮಾರು 1,500 ವಿದ್ಯಾರ್ಥಿ-ಅಧ್ಯಾಪಕ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ವಿದ್ಯಾರ್ಥಿಗಳು, ಅಧ್ಯಾಪಕರು, ಶಿಕ್ಷಣ ತಜ್ಞರು, ಶೈಕ್ಷಣಿಕ ಆಡಳಿತಗಾರರು ಸಮ್ಮೇಳನದಲ್ಲಿ ಪಾಲ್ಗೊಂಡು ಶೈಕ್ಷಣಿಕ ಕ್ಷೇತ್ರದಲ್ಲಿನ ಸಾಮಾಜಿಕ ಸಮಸ್ಯೆ, ಸವಾಲುಗಳ ಕುರಿತು ಚರ್ಚಿಸಿ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಲಿದ್ದಾರೆ ಎಂದು ಕೆ.ಸಿ.ನಾಯಕ್ ವಿವರಿಸಿದರು.
ಸಮ್ಮೇಳನದ ಭಾಗವಾಗಿ ಫೆ.8ರಂದು ಪೂರ್ವಾಹ್ನ 11 ಗಂಟೆಗೆ ‘ವರ್ತಮಾನ ಭಾರತ’ ಎಂಬ ವಿಷಯದ ಕುರಿತಾಗಿ ಎಬಿವಿಪಿ ನಿಕಟಪೂರ್ವ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸುನೀಲ್ ಭಾಷಣ ಮಾಡುವರು. ಫೆ.9ರ ಪೂರ್ವಾಹ್ನ 9 ಗಂಟೆಗೆ ಎಬಿವಿಪಿ ನಿಕಟಪೂರ್ವ ಸಹ ಸಂಘಟನಾ ಕಾರ್ಯದರ್ಶಿ ಕೆ.ಎನ್. ರಘುನಂದನ್ ‘ನಮ್ಮ ಕಾರ್ಯಪದ್ಧತಿ-ಸ್ವರೂಪ ಮತ್ತು ಔಚಿತ್ಯ’ ವಿಷಯವಾಗಿ ವಿಶೇಷ ಉಪನ್ಯಾಸ ನೀಡುವರು ಎಂದು ಕೆ.ಸಿ.ನಾಯಕ್ ನುಡಿದರು.
ಫೆ.9ರ ಪೂರ್ವಾಹ್ನ 11 ಗಂಟೆಗೆ ‘ಶಿಕ್ಷಣ, ರಾಷ್ಟ್ರ ಮತ್ತು ಸಂಸ್ಕೃತಿ’ ಕುರಿತಾಗಿ ಅವಲೋಕನ ನಡೆಯಲಿದೆ. ಎಬಿವಿಪಿ ಮಾಜಿ ರಾಜ್ಯಾಧ್ಯಕ್ಷ ಚ.ನ.ಶಂಕರ ರಾವ್, ಕನ್ನಡ ಸಾಹಿತ್ಯ ಅಕಾಡಮಿ ಅಧ್ಯಕ್ಷ ಡಾ.ಬಿ.ವಿ. ವಸಂತಕುಮಾರ್ ಮತ್ತು ಎಬಿವಿಪಿ ರಾಜ್ಯ ಉಪಾಧ್ಯಕ್ಷ ರೋಹಿಣಾಕ್ಷ ಶಿರ್ಲಾಲು ಅವಲೋಕನದಲ್ಲಿ ಭಾಗವಹಿಸುವರು ಎಂದು ಅವರು ಹೇಳಿದರು.
ಫೆ.8ರ ಸಂಜೆ 5 ಗಂಟೆಗೆ ಆಯಾ ಪ್ರದೇಶಗಳ ಸಾಂಸ್ಕೃತಿಕ ವಿಶಿಷ್ಟತೆ-ಭವ್ಯತೆ ಸಾರುವ ಶೋಭಾಯಾತ್ರೆ ಮತ್ತು ಸಾರ್ವಜನಿಕ ಸಭೆ ನಡೆಯಲಿದೆ. ನಗರದ ಕಾರ್ಸ್ಟ್ರೀಟ್ನಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಎಬಿವಿಪಿ ರಾಜ್ಯ ಕಾರ್ಯದರ್ಶಿ ಹರ್ಷನಾರಾಯಣ ಪ್ರಧಾನ ಭಾಷಣ ಮಾಡಲಿರುವರು. ಎಬಿವಿಪಿ ರಾಜ್ಯ ನಾಯಕರು ಸಭೆಯನ್ನು ಉದ್ದೇಶಿಸಿ ಮಾತನಾಡಲಿರುವರು ಎಂದು ಕೆ.ಸಿ.ನಾಯಕ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ಲೆಕ್ಕಪರಿಶೋಧಕ ಶಾಂತಾರಾಮ ಶೆಟ್ಟಿ, ಕೋಶಾಧಿಕಾರಿ ರವಿ ಮಂಡ್ಯ, ಎಬಿವಿಪಿ ಮಂಗಳೂರು ನಗರ ಅಧ್ಯಕ್ಷೆ ಭಾರತಿ ಸಂಜಯ ಪ್ರಭು ಮತ್ತು ನಗರ ಕಾರ್ಯದರ್ಶಿ ಮಣಿಕಂಠ ಕಳಸ ಉಪಸ್ಥಿತರಿದ್ದರು.
ಹಾಜಬ್ಬರಿಗೆ ಸನ್ಮಾನ
ಉದ್ಘಾಟನಾ ಸಮಾರಂಭದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ ಅವರನ್ನು ಸನ್ಮಾನಿಸಲಾಗುವುದು. ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ ಸನ್ಮಾನವನ್ನು ನೆರವೇರಿಸಲಿದ್ದಾರೆ.







