ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ಸಲಕರಣೆ ವಿತರಣೆ
ಉಡುಪಿ, ಫೆ.8: ಉಡುಪಿ ಜಿಲ್ಲಾ ಗ್ರಾಮಾಂತರ ಕೈಗಾರಿಕೆ ಇಲಾಖೆ ವತಿ ಯಿಂದ ಗುರುವಾರ ಕುಂದಾಪುರ ತಾಲೂಕು ಪಂಚಾಯತ್ನಲ್ಲಿ ಗ್ರಾಮೀಣ ಕುಶಲಕರ್ಮಿಗಳಿಗೆ ವಿವಿಧ ಕಸಬುಗಳ ಉಪಕರಣಗಳನ್ನು ಉಚಿತವಾಗಿ ವಿತರಿಸಲಾಯಿತು.
ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಕಾರ್ಯಕ್ರಮ ಉದ್ಘಾಟಿಸಿ, ವಿವಿಧ ಕಸುಬುಗಳ ಕುಶಲಕರ್ಮಿಗಳಿಗೆ ಉಪಕರಣಗಳನ್ನು ವಿತರಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಉಡುಪಿ ಜಿಪಂನ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಸುಮಿತ್ ಶೆಟ್ಟಿ ಕೌಡೂರು ಉಪಕರಣ ವಿತರಿಸಿ ಕುಶಲಕರ್ಮಿಗಳು ಪಡೆದ ಉಪಕರಣಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದರು.
ಕುಂದಾಪುರ ತಾಪಂ ಅಧ್ಯಕ್ಷೆ ಶ್ಯಾಮಲಾ ಕುಂದರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಉಡುಪಿ ಜಿಪಂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ಶೋಭಾ ಜಿ.ಪುತ್ರನ್, ಜಿಪಂ ಸದಸ್ಯರಾದ ಶ್ರೀಲತಾ ಸುರೇಶ್ ಶೆಟ್ಟಿ, ರೋಹಿತ್ಕುಮಾರ್ ಶೆಟ್ಟಿ, ಬಾಬು ಹೆಗ್ಡೆ, ಸುರೇಶ ಬಟ್ವಾಡಿ, ಗೌರಿ ದೇವಾಡಿಗ, ಶಂಕರಪೂಜಾರಿ, ಜ್ಯೋತಿ ಎಂ ಹಾಗೂ ತಾಪಂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ರೂಪಾ ಬಿ. ಪೈ, ಕುಂದಾಪುರ ತಾಪಂ ಕಾರ್ಯ ನಿರ್ವಹಣಾಧಿಕಾರಿ ಕೇಶವ ಶೆಟ್ಟಿಗಾರ್ ಉಪಸ್ಥಿತರಿದ್ದರು.
ಉಡುಪಿ ಜಿಪಂ ಗ್ರಾಮಾಂತರ ಕೈಗಾರಿಕೆ ಇಲಾಖೆಯ ಉಪನಿರ್ದೇಶಕ ಜಿ. ವಾಮನ ನಾಯ್ಕ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಇಲಾಖಾ ಕಾರ್ಯಕ್ರಮಗಳ ಮಾಹಿತಿ ನೀಡಿದರು. ಅರುಣ್ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಕುಂದಾಪುರ ತಾಲೂಕಿನ ಸುಮಾರು 190 ಜನರಿಗೆ ಉಪಕರಣಗಳನ್ನು ವಿತರಿಸಲಾಯಿತು.







