ನಿರ್ಭಯ ಅತ್ಯಾಚಾರ ಪ್ರಕರಣ: ವಿನಯ್ ಶರ್ಮಾನ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದ ಸುಪ್ರೀಂ
ಹೊಸದಿಲ್ಲಿ, ಫೆ.14: ನಿರ್ಭಯಾ ಅತ್ಯಾಚಾರ ಮತ್ತು ಹತ್ಯಾ ಪ್ರಕರಣದಲ್ಲಿ ಮರಣದಂಡನೆಗೆ ಗುರಿಯಾಗಿರುವ ಅಪರಾಧಿ ವಿನಯ್ ಕುಮಾರ್ ಶರ್ಮಾ ಕ್ಷಮಾದಾನ ಅರ್ಜಿಯ ಬಗ್ಗೆ ರಾಷ್ಟ್ರಪತಿಗಳ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ನ್ಯಾಯಮೂರ್ತಿಗಳಾದ ಆರ್ ಬಾನುಮತಿ, ಅಶೋಕ್ ಭೂಷಣ್ ಮತ್ತು ಎ ಎಸ್ ಬೋಪಣ್ಣ ಅವರ ನ್ಯಾಯಪೀಠವು ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದೆ
ವಿನಯ್ ಕುಮಾರ್ ಶರ್ಮಾನನ್ನು ಅಕ್ರಮ ಬಂಧನದಲ್ಲಿರಿಸಲಾಗಿದೆ ಮತ್ತು ತಿಹಾರ್ ಜೈಲು ಅಧಿಕಾರಿಗಳು ಆತನಿಗೆ ಚಿತ್ರಹಿಂಸೆ ನೀಡಿದೆ ಎಂದು ಆತನ ಪರ ವಕೀಲ ಎ.ಪಿ.ಸಿಂಗ್ ವಾದಿಸಿದ್ದರು.
ಶರ್ಮಾ ಮಾನಸಿಕವಾಗಿ ಅಸ್ವಸ್ಥ ಎಂಬ ವಾದವನ್ನು ಸುಪ್ರೀಂ ಕೋರ್ಟ್ ನ್ಯಾಯಾಲಯ ತಿರಸ್ಕರಿಸಿದ್ದು, ಮಾನಸಿಕವಾಗಿ ಆರೋಗ್ಯವಾಗಿದ್ದಾನೆಂದು ವೈದ್ಯಕೀಯ ವರದಿಯು ಹೇಳುತ್ತದೆ ಎಂದು ನ್ಯಾಯಾಲಯ ತಿಳಿಸಿದೆ.
ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಮುಖೇಶ್ ಕುಮಾರ್ ಸಿಂಗ್ (32), ಪವನ್ ಗುಪ್ತಾ (25), ವಿನಯ್ ಕುಮಾರ್ ಶರ್ಮಾ (26) ಮತ್ತು ಅಕ್ಷಯ್ ಕುಮಾರ್ (31) ಎಂಬವರನ್ನು ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ.