ಪರಿಶಿಷ್ಟ ಜಾತಿಯ ನಕಲಿ ಪ್ರಮಾಣ ಪತ್ರ ಬಳಸುವವರನ್ನು ಕೆಲಸದಿಂದ ವಜಾ ಮಾಡಿ: ರಾಮ್ಶಂಕರ್ ಕಥೇರಿಯಾ

ಬೆಂಗಳೂರು, ಫೆ.14: ಪರಿಶಿಷ್ಟ ಜಾತಿಯ ನಕಲಿ ಪ್ರಮಾಣ ಪತ್ರ ಬಳಸುವವರ ವಿರುದ್ಧ ಎಫ್ಐಆರ್ ದಾಖಲಿಸಿ, ಕೆಲಸದಿಂದ ವಜಾ ಮಾಡಬೇಕು ಎಂದು ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗದ ಅಧ್ಯಕ್ಷ ರಾಮ್ಶಂಕರ್ ಕಥೇರಿಯಾ ಸೂಚನೆ ನೀಡಿದ್ದಾರೆ.
ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನಕಲಿ ಜಾತಿ ಪ್ರಮಾಣ ಪತ್ರಗಳ ಬಳಕೆ ಕುರಿತು ಗಂಭೀರ ಕ್ರಮ ಕೈಗೊಳ್ಳಬೇಕು. ಈ ಸಂಬಂಧ ಪರಿಶೀಲನೆಗೆ ರಾಜ್ಯ ಮಟ್ಟದಲ್ಲಿ ಸಮಿತಿ ರಚಿಸಬೇಕು ಎಂದರು.
ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳಿಗೆ ಬಜೆಟ್ ಹಂಚಿಕೆ ಬೇರೆ ರಾಜ್ಯಗಳಿಗೆ ಹೋಲಿಸಿದರೆ ಉತ್ತಮವಾಗಿದೆ. ಕರ್ನಾಟಕದಲ್ಲಿನ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್ನಲ್ಲಿ ಹಂಚಿಕೆಯಾಗಿದೆ. ರಾಜ್ಯದಲ್ಲಿ ಶೇ 17.15ರಷ್ಟು ಪರಿಶಿಷ್ಟ ಜಾತಿ ಜನಸಂಖ್ಯೆ ಇದ್ದು, ಶೇಕಡ 17 ರಷ್ಟು ಬಜೆಟ್ ಮೀಸಲಿರಿಸಲಾಗಿದೆ. ಇದೊಂದು ಸಂತಸದ ವಿಚಾರ ಎಂದು ಅವರು ಹೇಳಿದರು.
ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗಾಗಿ ಹಾಸ್ಟೆಲ್ ವ್ಯವಸ್ಥೆ, ವಿದ್ಯಾರ್ಥಿ ವೇತನ ವಿತರಣೆ ಹಾಗೂ ಸಮುದಾಯ ಭವನ ನಿರ್ಮಾಣದಲ್ಲೂ ಕರ್ನಾಟಕದ ಸ್ಥಿತಿ ಉತ್ತಮವಾಗಿದೆ. ಆದರೆ, ಬ್ಯಾಂಕ್ ಸಾಲ ಮತ್ತು ಹೊಸ ಸ್ವಂತ ಉದ್ಯೋಗಗಳ ಆರಂಭಿಸುವ ವಿಚಾರದಲ್ಲಿ ಮಾತ್ರ ಕರ್ನಾಟಕದ ಪರಿಶಿಷ್ಟ ಜಾತಿಗಳ ಯುವಕರು ಸದುಪಯೋಗಪಡಿಸಿಕೊಳ್ಳುವಲ್ಲಿ ಹಿಂದೆ ಬಿದ್ದಿದ್ದಾರೆ ಎಂದು ರಾಮ್ಶಂಕರ್ ಕಥೇರಿಯಾ ತಿಳಿಸಿದರು.
ಕೇಂದ್ರ ಸರಕಾರದ ಯೋಜನೆಗಳಾದ ಮುದ್ರಾ ಲೋನ್, ಸ್ಪಾರ್ಟ್ ಅಪ್ ಸಾಲ ವಿಚಾರದಲ್ಲಿ ಪರಿಶಿಷ್ಟರಿಗೆ ಸೌಲಭ್ಯ ನಿರೀಕ್ಷಿತ ಮಟ್ಟದಲ್ಲಿ ಸಿಕ್ಕಿಲ್ಲ. ಈ ಸಂಬಂಧ ತಕ್ಷಣವೇ ಬ್ಯಾಂಕ್ ಮುಖ್ಯಸ್ಥರ ಸಭೆ ಕರೆದು ಸೂಚನೆ ನೀಡುವಂತೆ ಮುಖ್ಯಕಾರ್ಯದರ್ಶಿಗೆ ತಿಳಿಸಿದ್ದೇನೆ ಎಂದು ಅವರು ಹೇಳಿದರು.
ರಾಜ್ಯದಲ್ಲಿ ಮುದ್ರಾ ಯೋಜನೆಯಡಿ ಒಟ್ಟು 11 ಸಾವಿರ ಅರ್ಜಿ ಸಲ್ಲಿಕೆಯಾಗಿದ್ದು, ಕೇವಲ 88 ಮಂದಿ ಮಾತ್ರ ಸಾಲ ಪಡೆದುಕೊಂಡಿದ್ದಾರೆ. ಇದು ಪ್ರಧಾನಿಯವರ ಮಹತ್ವಾಕಾಂಕ್ಷೆ ಯೋಜನೆಯಾಗಿದ್ದು ಹೆಚ್ಚು ಗಮನ ಕೊಡುವಂತೆ ಸೂಚಿಸಲಾಗಿದೆ ಎಂದು ರಾಮ್ಶಂಕರ್ ಕಥೇರಿಯಾ ತಿಳಿಸಿದರು.
ರಾಜ್ಯದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ, ಉಜ್ವಲ ಯೋಜನೆಯಲ್ಲಿ ಪರಿಶಿಷ್ಟರಿಗೆ ಅವಕಾಶಗಳು ಸಿಕ್ಕಿರುವುದು ತೃಪ್ತಿಕರವಾಗಿದೆ. ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಪರಿಶಿಷ್ಟರ ಮೇಲಿನ ಕೊಲೆ ಮತ್ತು ಅತ್ಯಾಚಾರ ಪ್ರಕರಣದ ಅಂಕಿ ಆಂಶ ಪರಿಶೀಲಿಸಲಾಯಿತು. ದೇಶದ ಅಂಕಿ ಅಂಶಕ್ಕೆ ಹೋಲಿಸಿದರೆ ಕರ್ನಾಟಕದ ಸ್ಥಿತಿ ಉತ್ತಮವಾಗಿದೆ ಎಂದು ಅವರು ಹೇಳಿದರು.
ರಾಜ್ಯದಲ್ಲಿರುವ ಪರಿಶಿಷ್ಟ ಜಾತಿಗೆ ಸೇರಿದ ಜನರ ಸಮಸ್ಯೆಗಳು ಹಾಗೂ ಅವರಿಗೆ ಕೇಂದ್ರ ಹಾಗೂ ರಾಜ್ಯ ಸರಕಾರದಿಂದ ನ್ಯಾಯಯುತವಾಗಿ ದೊರೆಯಬೇಕಾದ ಸವಲತ್ತು, ಸೌಲಭ್ಯಗಳ ಕುರಿತು ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗವು ಎರಡು ದಿನಗಳ ಕಾಲ ರಾಜ್ಯಕ್ಕೆ ಭೇಟಿ ನೀಡಿ, ವಿವಿಧ ಸಂಘಟನೆಗಳ ಮುಖಂಡರು ಹಾಗೂ ಸರಕಾರದ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿತು.
ಪತ್ರಿಕಾಗೋಷ್ಠಿಯಲ್ಲಿ ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗದ ಸದಸ್ಯರು, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್ ಭಾಸ್ಕರ್ ಸೇರಿದಂತೆ ಕೇಂದ್ರ ಹಾಗೂ ರಾಜ್ಯ ಸರಕಾರದ ಉನ್ನತ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.







