ದಿಲ್ಲಿ ಹಿಂಸಾಚಾರದಲ್ಲಿ ಪೊಲೀಸರ ಮೌನಕ್ಕೆ ಖಂಡನೆ: ಜಮಾಅತೆ ಇಸ್ಲಾಮಿ ಹಿಂದ್
ಹೊಸದಿಲ್ಲಿ : ರಾಷ್ಟ್ರದ ರಾಜಧಾನಿ ಮತ್ತಿತರ ಕಡೆ ಹದಗೆಡುತ್ತಿರುವ ಕಾನೂನು ಸುವ್ಯವಸ್ಥೆ ಮತ್ತು ಪ್ರತಿಭಟನಕಾರರ ಮೇಲಿನ ಪೊಲೀಸ್ ದೌರ್ಜನ್ಯಕ್ಕೆ ಜಮಾಅತೆ ಇಸ್ಲಾಮಿ ಹಿಂದ್ ತೀವ್ರ ಕಳವಳ ವ್ಯಕ್ತಪಡಿಸಿದೆ.
ಈಶಾನ್ಯ ದೆಹಲಿಯ ಮೌಜ್ಪುರ ಪ್ರದೇಶದಲ್ಲಿ ಸಿಎಎ ಪರ ಮತ್ತು ವಿರೋಧಿ ಪ್ರತಿಭಟನಾಕಾರರ ನಡುವಿನ ಘರ್ಷಣೆಯ ಬಗ್ಗೆ ಜಮಾಅತ್ ಖೇದ ವ್ಯಕ್ತಪಡಿಸಿದೆ. ಇದರಲ್ಲಿ ಸಿಎಎ ಪರ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸುತ್ತಿರುವುದು ಮತ್ತು ಹಿಂಸಾಚಾರಕ್ಕೆ ಪ್ರಚೋದಿಸುತ್ತಿರುವುದು ಕಣ್ಣಿಗೆ ಕಾಣುತ್ತಿದ್ದರೂ ದೆಹಲಿ ಪೊಲೀಸರು ಮೂಕ ಪ್ರೇಕ್ಷಕರಾಗಿದ್ದರು. ಸೋಮವಾರ ರಾತ್ರಿ ಹೌಜ್ರಾಣಿಯಲ್ಲಿ ಶಾಂತಿಯುತ ಮೆರವಣಿಗೆ ನಡೆಸುತ್ತಿದ್ದ ಸಿಎಎ ವಿರೋಧಿ ಪ್ರತಿಭಟನಾಕಾರ ಮೇಲೆ ದೆಹಲಿ ಪೊಲೀಸರು ಲಾಠಿ ಚಾಜ್ ಮಾಡಿ ಅನೇಕರನ್ನು ಗಾಯಗೊಳಿಸಿದ್ದಾರೆ. ಈ ಮಧ್ಯೆ ಬಿಜೆಪಿ ಮುಖಂಡರು ಪೊಲೀಸರನ್ನು ಬೆದರಿಸಿದ ಕೃತ್ಯವನ್ನು ಕೂಡ ಜಮಾಅತ್ ಖಂಡಿಸಿದೆ.
ಬಿಜೆಪಿ ಮುಖಂಡರು ಪ್ರಚೋದನಕಾರಿ ಹೇಳಿಕೆಯನ್ನು ಹಿರಿಯ ಪೊಲೀಸ್ ಅಧಿಕಾರಿಯ ಸಮ್ಮುಖದಲ್ಲೇ ನೀಡಲಾಗಿದ್ದರೂ ಅವರ ವಿರುದ್ಧ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಜಮಾಅತೆ ಇಸ್ಲಾಮಿ ಹಿಂದ್ ಉಪಾಧ್ಯಕ್ಷ ಮುಹಮ್ಮದ್ ಸಲೀಮ್ ಎಂಜಿನಿಯರ್ ಹೇಳಿದ್ದಾರೆ.
ಸಿಎಎ ವಿರುದ್ಧ ಪ್ರತಿಭಟನೆ ನಡೆಸುತ್ತಿರುವವರ ಸಹಿತ ಎಲ್ಲಾ ನಾಗರಿಕರಿಗೆ ಸುರಕ್ಷತೆಯನ್ನು ಭಾರತ ಸರಕಾರ ಮತ್ತು ದೆಹಲಿ ಪೊಲೀಸರು ಖಾತ್ರಿಪಡಿಸಬೇಕು. ಪೊಲೀಸರು ಪೂರ್ವಾಗ್ರಹ ಪೀಡಿತ ರೀತಿಯಲ್ಲಿ ವರ್ತಿಸಬಾರದು ಮತ್ತು ಕಾನೂನನ್ನು ಕೈಗೆತ್ತಿ ಕೊಳ್ಳಲು ಅವಕಾಶ ನೀಡಬಾರದು ಎಂದು ಜ.ಇ.ಹಿಂದ್ ಆಗ್ರಹಿಸಿದೆ.