ಕೇಂದ್ರದ ಸಹಕಾರದೊಂದಿಗೆ ಕರ್ನಾಟಕ ನ್ಯಾನೋ ಪಾರ್ಕ್ ಅಭಿವೃದ್ಧಿ: ಯಡಿಯೂರಪ್ಪ

ಬೆಂಗಳೂರು, ಮಾ.2: ಕೇಂದ್ರ ಸರಕಾರದ ಸಹಕಾರದೊಂದಿಗೆ ಕರ್ನಾಟಕದಲ್ಲಿ ನ್ಯಾನೋ ಪಾರ್ಕ್ ಅಭಿವೃದ್ಧಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ಹೇಳಿದ್ದಾರೆ.
ಸೋಮವಾರ ನಗರದ ಖಾಸಗಿ ಹೊಟೇಲ್ನಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ವಿಷನ್ ಗ್ರೂಪ್ ಆಫ್ ನ್ಯಾನೋ ಟೆಕ್ನಾಲಜಿ ವತಿಯಿಂದ ಆಯೋಜಿಸಿದ್ದ 11ನೇ ಬೆಂಗಳೂರು ಇಂಡಿಯಾ ನ್ಯಾನೋ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ರಾಜ್ಯದಲ್ಲಿ ನ್ಯಾನೋ ತಂತ್ರಜ್ಞಾನದ ಅಭಿವೃದ್ಧಿಗಾಗಿ ಬೇಕಾದ ಎಲ್ಲ ರೀತಿಯ ಸಹಕಾರ, ಸೌಲಭ್ಯವನ್ನು ಸರಕಾರ ಕಲ್ಪಿಸಲಿದೆ. ಆ ಮೂಲಕ ದೊಡ್ಡ ಮಟ್ಟದಲ್ಲಿ ಈ ತಂತ್ರಜ್ಞಾನದ ಬೆಳವಣಿಗೆಗೆ ಅವಕಾಶ ನೀಡಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.
ನಗರೀಕರಣ, ಹೆಚ್ಚಾಗುತ್ತಿರುವ ಜನಸಂಖ್ಯೆ, ಬದಲಾಗುತ್ತಿರುವ ಜೀವನಶೈಲಿ, ಭವಿಷ್ಯದಲ್ಲಿನ ಆಹಾರ ಭದ್ರತೆ, ಇಂಧನ ಭದ್ರತೆ, ಶುದ್ಧ ಕುಡಿಯುವ ನೀರು, ತ್ಯಾಜ್ಯ ನಿರ್ವಹಣೆ ಮತ್ತಿತರ ಕ್ಷೇತ್ರಗಳಲ್ಲಿ ಅನೇಕ ಸವಾಲುಗಳು ಎದುರಾಗುತ್ತಿವೆ. ಇವುಗಳನ್ನು ಎದುರಿಸಲು ನ್ಯಾನೋ ತಂತ್ರಜ್ಞಾನ ಅಗತ್ಯವಿದೆ ಎಂದರು.
ಹಲವಾರು ಸಮಸ್ಯೆಗಳ ವಿರುದ್ಧ ನಿರ್ಣಾಯಕ ಕ್ರಮಗಳನ್ನು ಕೈಗೊಳ್ಳಲು ಸರಕಾರ ಪ್ರಯತ್ನಿಸುತ್ತಿದೆ. ಈ ನಿಟ್ಟಿನಲ್ಲಿ ನ್ಯಾನೋ ಆಧಾರಿತ ಆವಿಷ್ಕಾರಗಳನ್ನು ಅಭಿವೃದ್ಧಿಪಡಿಸಿ ಸವಾಲುಗಳಿಗೆ ಪರಿಹಾರ ದೊರಕಿಸಿಕೊಡಲು ವಿಜ್ಞಾನಿಗಳು ಸಹಕಾರ ನೀಡಬೇಕು ಎಂದು ಯಡಿಯೂರಪ್ಪ ಮನವಿ ಮಾಡಿದರು.
ರಾಜ್ಯದಲ್ಲಿ ಶೇ. 12 ರಷ್ಟು ಜಿಎಸ್ಟಿ ಬೆಳವಣಿಗೆ ಸಾಧಿಸಿದೆ ಹಾಗೂ ದೇಶದಲ್ಲಿ ಅತಿಹೆಚ್ಚು ಪ್ರಗತಿ ಸಾಧಿಸಿರುವ ರಾಜ್ಯಗಳಲ್ಲಿ ಕರ್ನಾಟಕ ನಾಲ್ಕನೇ ಸ್ಥಾನದಲ್ಲಿದೆ. ಮುಂದಿನ ದಿನಗಳಲ್ಲಿ ಆಧುನಿಕ ತಂತ್ರಜ್ಞಾನ ಬಳಸಿಕೊಂಡೇ ಮತ್ತಷ್ಟು ಹೆಚ್ಚಿನ ಸಂಖ್ಯೆಯಲ್ಲಿ ತೆರಿಗೆ ಸಂಗ್ರಹ ಮಾಡುವ ಮೂಲಕ, ಆದಾಯ ಹೆಚ್ಚಿಸುವ ಕಡೆಗೆ ಗಮನ ನೀಡಲಾಗುವುದು ಎಂದು ಹೇಳಿದರು.
ಭಾರತ ರತ್ನ ಪುರಸ್ಕೃತ ವಿಜ್ಞಾನಿ ಸಿ.ಎನ್.ಆರ್.ರಾವ್ ಮಾತನಾಡಿ, ನ್ಯಾನೋ ತಂತ್ರಜ್ಞಾನ ಭವಿಷ್ಯದ ತಂತ್ರಜ್ಞಾನವಾಗಲಿದೆ. ಸಣ್ಣ ಅಣುನಂತಿರುವ ಈ ತಂತ್ರಜ್ಞಾನ ಜಾಗತಿಕವಾಗಿ ದೊಡ್ಡ ಪ್ರಮಾಣದಲ್ಲಿ ಪಸರಿಸಲಿದೆ ಎಂದು ನುಡಿದರು.
ನ್ಯಾನೋ ತಂತ್ರಜ್ಞಾನ ಕೃಷಿ, ವೈದ್ಯಕೀಯ ಸೇರಿದಂತೆ ಹಲವಾರು ಕ್ಷೇತ್ರಗಳಿಗೆ ಪ್ರವೇಶಿಸಿದೆ. ಮುಂದಿನ ದಿನಗಳಲ್ಲಿ ಇದೇ ತಂತ್ರಜ್ಞಾನವನ್ನು ಆಧರಿಸಿ ತಯಾರಿಸಿದ ಔಷಧಿಗಳನ್ನು ಹಲವಾರು ಮಾರಣಾಂತಿಕ ರೋಗಗಳ ಗುಣಮುಖಕ್ಕೆ ಬಳಕೆ ಮಾಡಲಾಗುವುದು ಎಂದು ಅವರು ತಿಳಿಸಿದರು.
ನ್ಯಾನೋ ತಂತ್ರಜ್ಞಾನ ದಿನನಿತ್ಯದ ಜೀವನದಲ್ಲಿ ಹಲವಾರು ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಭರವಸೆ ಇದೆ. ಬರುವ ದಿನಗಳಲ್ಲಿ ಈ ತಂತ್ರಜ್ಞಾನ ಕ್ಷೇತ್ರದಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆಯಾಗುವ ನಿರೀಕ್ಷೆಯಿದೆ. ಕರ್ನಾಟಕ ಈಗಾಗಲೇ ದೇಶದಲ್ಲಿ ತಂತ್ರಜ್ಞಾನ ವಲಯ, ಬಂಡವಾಳ ಹೂಡಿಕೆ ಮತ್ತು ರಫ್ತಿನಲ್ಲೂ ಮುಂಚೂಣಿಯಲ್ಲಿದೆ ಎಂದರು.
ಇದೇ ಸಂದರ್ಭದಲ್ಲಿ ತಂತ್ರಜ್ಞಾನ ಕ್ಷೇತ್ರದಲ್ಲಿ ಗಣನೀಯವಾಗಿ ಸಾಧನೆ ಮಾಡಿದವರಿಗೆ ಪ್ರೊ.ಸಿ.ಎನ್.ಆರ್. ರಾವ್ ಬೆಂಗಳೂರು, ಇಂಡಿಯಾ ನ್ಯಾನೋ ವಿಜ್ಞಾನ ಪ್ರಶಸ್ತಿಯನ್ನು ಎಸ್.ಆರ್.ಪಿ.ಎಸ್. ಅನಿಲ್ ಕುಮಾರ್ ಅವರಿಗೆ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವಥ್ ನಾರಾಯಣ, ಶಾಸಕ ರಿಝ್ವಾನ್ ಅರ್ಶದ್, ರಾಜ್ಯ ಸರಕಾರದ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಡಾ.ವಿ.ವಿರಮಣರೆಡ್ಡಿ, ಸೇರಿದಂತೆ ಹಲವರಿದ್ದರು.







