'ಪಾಕಿಸ್ತಾನ ಝಿಂದಾಬಾದ್' ಘೋಷಣೆ ಪ್ರಕರಣ: ಮೂವರು ಕಾಶ್ಮೀರಿ ವಿದ್ಯಾರ್ಥಿಗಳ ಜಾಮೀನು ಅರ್ಜಿ ವಜಾ

ಹುಬ್ಬಳ್ಳಿ, ಮಾ.9: ನಗರದ ಪ್ರತಿಷ್ಠಿತ ಕೆಎಲ್ಇ ಕಾಲೇಜಿನಲ್ಲಿ ಪಾಕಿಸ್ತಾನ ಝಿಂದಾಬಾದ್ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಕಾಶ್ಮೀರ ವಿದ್ಯಾರ್ಥಿಗಳ ಜಾಮೀನು ಅರ್ಜಿಯನ್ನು ಹುಬ್ಬಳ್ಳಿಯ 5ನೆ ಅಪರ ಜಿಲ್ಲಾ ನ್ಯಾಯಾಲಯ ವಜಾಗೊಳಿಸಿದೆ.
ನ್ಯಾಯಾಧೀಶ ಕೆ.ಎನ್.ಗಂಗಾಧರ ಅವರು ಈ ಹಿಂದೆ ವಿಚಾರಣೆ ನಡೆಸಿ ಮಾ.9ಕ್ಕೆ ತೀರ್ಪು ಕಾಯ್ದಿರಿಸಿ ಆದೇಶ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸೋಮವಾರ ಎಲ್ಲ ರೀತಿಯ ಪರಿಶೀಲನೆ ನಡೆಸಿ, ಕಾಶ್ಮೀರಿ ವಿದ್ಯಾರ್ಥಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದಾರೆ.
ಮಾ.5ರಂದು ಕಾಶ್ಮೀರದ ಮೂವರು ವಿದ್ಯಾರ್ಥಿಗಳ ದೇಶದ್ರೋಹ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪರ ವಾದ ಮಂಡಿಸಲು ಹುಬ್ಬಳ್ಳಿಯ ವಕೀಲರು ಹಿಂದೇಟು ಹಾಕಿದ್ದರು. ನಂತರ ಬೆಂಗಳೂರಿನಿಂದ ಆಗಮಿಸಿದ ವಕೀಲರು ಆರೋಪಿಗಳ ಪರ ವಾದ ಮಂಡನೆ ಮಾಡಿದರು. ವಕೀಲೆ ಮೈತ್ರಿಯಾ ಕೃಷ್ಣನ್ ನೇತೃತ್ವದ ಹತ್ತು ಜನ ವಕೀಲರ ತಂಡದಿಂದ ವಾದ ಮಂಡನೆ ಮಾಡಲಾಗಿತ್ತು.
ಹಲವು ಪ್ರಕರಣಗಳ ಉದಾಹರಣೆ ಮೂಲಕ ಬೆಂಗಳೂರಿನ ವಕೀಲರ ತಂಡ ವಾದ ಮಂಡನೆ ಮಾಡಿತ್ತು. ವಾದ ಆಲಿಸಿದ ನ್ಯಾಯಪೀಠವು ಜಾಮೀನು ನೀಡಲು ನಿರಾಕರಿಸಿ ಆದೇಶ ಪ್ರಕಟಿಸಿತು.







