ವಿಕಲಚೇತನರಿಗೆ ಅವಕಾಶ ಸೃಷ್ಠಿಸಿ: ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ, ಮಾ.10: ವಿಕಲಚೇತನರಿಗೆ ಅನುಕಂಪ ತೋರುವ ಬದಲು, ಅವರಿಗೆ ಉದ್ಯೋಗ ಮಾಡಲು ಅವಕಾಶಗಳನ್ನು ಸೃಷ್ಠಿಸಿ, ಆ ಮೂಲಕ ಅವರ ಸಾಮರ್ಥ್ಯವನ್ನು ಪ್ರದರ್ಶಿಸಲು ಅವಕಾಶಗಳನ್ನು ನೀಡಿ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ.
ಮಂಗಳವಾರ, ಮಣಿಪಾಲ ಕೈಗಾರಿಕಾ ಪ್ರದೇಶದಲ್ಲಿರುವ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಸಭಾಭವನದಲ್ಲಿ ಜಿಲ್ಲಾಡಳಿತ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಜಿಲ್ಲಾ ಸಣ್ಣ ಕೈಗಾರಿಕಾ ಸಂಘ, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಕೌಶಲ್ಯಾಭಿವೃದ್ಧಿ, ಉದ್ದಿಮೆ ಶೀಲತೆ ಹಾಗೂ ಜೀವನೋಪಾಯ ಇಲಾಖೆ ಉಡುಪಿ ಮತ್ತು ಯೂತ್ ಪಾರ್ ಜಾಬ್ಸ್ ಮಂಗಳೂರು ಇವರ ಸಹಯೋಗ ದಲ್ಲಿ ಆಯೋಜಿಸಿದ್ದ, ಅಂಗವಿಕಲತೆ, ಉದ್ಯೋಗ ಮತ್ತು ಪುನ:ಶ್ಚೇತನ ಅರಿವು ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡುತಿದ್ದರು.
ವಿಕಲಚೇತನರು ದೈಹಿಕವಾಗಿ ಅಸಮರ್ಥರಿರಬಹುದು, ಆದರೆ ಅವರಲ್ಲಿ ಸಾಮಾನ್ಯ ಜನರಿಗಿಂತ ಹೆಚ್ಚಿನ ಆತ್ಮ ವಿಶ್ವಾಸವಿದ್ದು , ತಮಗೆ ನೀಡಿದ ಕೆಲಸದಲ್ಲಿ ಅತ್ಯಂತ ಪರಿಶ್ರಮದಿಂದ ದುಡಿಯಬಲ್ಲರು. ಜಿಲ್ಲೆಯ ವಿಕಲಚೇತನರಿಗೆ ಉದ್ಯೋಗ ಒದಗಿಸಿ, ಅವರು ಸ್ವಾಭಿಮಾನದ ಬದುಕು ನಡೆಸಲು ಜಿಲ್ಲಾಡಳಿತ ಎಲ್ಲಾ ರೀತಿಯ ಸಹಾಯ ಮತ್ತು ಅಗತ್ಯ ಸಹಕಾರ ನೀಡಲಿದೆ. ಸಮಾಜ ಸಹ ವಿಕಲಚೇತನರಿಗೆ ಬೆಂಬಲವಾಗಿ ನಿಲ್ಲಬೇಕು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು.
ಜಿಲ್ಲೆಯಲ್ಲಿ ಈಗಾಗಲೇ ವಿಕಲಚೇತನರಿಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಏಳು ತಾಲೂಕುಗಳಲ್ಲಿ ಶಿಬಿರಗಳನ್ನು ಏರ್ಪಡಿಸಿ, ಉದ್ಯೋಗ ಮಾಡಲು ಅರ್ಹರಿರುವ 100ಕ್ಕೂ ಅಧಿಕ ಮಂದಿಯನ್ನು ನೊಂದಾಯಿಸಿಕೊಳ್ಳಲಾಗಿದೆ. ಜಿಲ್ಲೆಯ ಕೈಗಾರಿಕೋದ್ಯಮಿಗಳು ಈ ವಿಕಲಚೇತನರ ಸಾಮರ್ಥ್ಯಕ್ಕೆ ಅನುಗುಣ ವಾಗಿ ತಮ್ಮ ಸಂಸ್ಥೆಯಲ್ಲಿ ಲ್ಯವಿರುವ ಉದ್ಯೋಗ ನೀಡುವಂತೆ ತಿಳಿಸಿದ ಜಿಲ್ಲಾಧಿಕಾರಿ, ತಮ್ಮ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸಲು ಈ ವಿಕಲಚೇತನರಿಗೆ ಇತರೆ ಹೆಚ್ಚಿನ ಕೌಶಲ್ಯದ ಅಗತ್ಯವಿದ್ದಲ್ಲಿ ವಿಕಲಚೇತನರಿಗೆ ಆ ಕೌಶಲ್ಯದ ತರಬೇತಿಯನ್ನೂ ಸಹ ಜಿಲ್ಲಾಡಳಿತ ಮೂಲಕ ನೀಡಲಾಗುವುದು ಎಂದು ತಿಳಿಸಿದರು.
ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ವಿಕಲಚೇತನರಿಗಾಗಿಯೇ ಪ್ರತ್ಯೇಕ ಉದ್ಯೋಗಮೇಳ ಆಯೋಜಿಸಲಾಗುವುದು ಎಂದು ತಿಳಿಸಿದ ಜಿಲ್ಲಾಧಿಕಾರಿ, ಜಿಲ್ಲೆಯ ಕೈಗಾರಿಕೋದ್ಯಮಿಗಳ ಸಭೆ ನಡೆಸಿ ಅವರ ಬೇಡಿಕೆಗನುಗುಣವಾಗಿ ಕೈಗಾರಿಕೆಗಳಲ್ಲಿ ವಿಕಲಚೇತನರು ಕಾರ್ಯನಿರ್ವಹಿಸಲು ಹೆಚ್ಚಿನ ಕೌಶಲ್ಯ ತರಬೇತಿಯ ಅಗತ್ಯವಿದ್ದಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ದಿ ಇಲಾಖೆ ಮೂಲಕ ತರಬೇತಿ ನೀಡಿ, ಸಂಬಂಧಪಟ್ಟ ಕೈಗಾರಿಕೆಗಳಲ್ಲಿ ಉದ್ಯೋಗ ನಿರ್ವಹಿಲು ನಿಯೋಜಿಸಲಾಗುವುದು ಎಂದರು.
ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಐ.ಆರ್. ಫೆರ್ನಾಂಡಿಸ್ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಚೇಂಬರ್ ಆಪ್ ಕಾಮರ್ಸ್ನ ಅಧ್ಯಕ್ಷ ಕೃಷ್ಣ ರಾವ್ ಕೊಡಂಚ, ಯೂತ್ ಪಾರ್ ಜಾಬ್ಸ್ ಸಂಸ್ಥೆಯ ಮುಖ್ಯಸ್ಥೆ ಮೀರಾ ಶೆಣೈ, ಕೌಶಲ್ಯಾಭಿವೃದ್ಧಿ, ಉದ್ದಿಮೆಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಕೌಶಲ್ಯಾಭಿವೃದ್ಧಿ ಅಧಿಕಾರಿ ಭಾಸ್ಕರ್ ಎ.ಅಮೀನ್, ರಿತೇಶ್ ಶೆಟ್ಟಿ ಉಪಸ್ಥಿತರಿದ್ದರು.
ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಗೋಕುಲ್ದಾಸ್ ನಾಯಕ್ ಸ್ವಾಗತಿಸಿದರು. ಜಿಲ್ಲಾ ವಿಕಲಚೇತನರ ಸಬಲೀಕರಣ ಅಧಿಕಾರಿ ಚಂದ್ರ ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ರೂಪಲಕ್ಷ್ಮಿ ವಂದಿಸಿ ಸುಬ್ರಮಣಿ ಕಾರ್ಯಕ್ರಮ ನಿರೂಪಿಸಿದರು.







