ಕೊರೋನ ವೈರಸ್: ಪ್ರವಾಸಿ ತಾಣ, ಹೋಟೆಲ್ಗಳಲ್ಲಿ ಹೆಚ್ಚಿನ ನಿಗಾವಹಿಸಿ; ಕೊಡಗು ಜಿಲ್ಲಾಧಿಕಾರಿ ಸೂಚನೆ

ಮಡಿಕೇರಿ, ಮಾ.10: ಕೊರೋನ ವೈರಸ್ ಬಗ್ಗೆ ಜಿಲ್ಲೆಯ ಪ್ರವಾಸಿ ತಾಣಗಳು, ಬಸ್ ನಿಲ್ದಾಣಗಳು, ರೆಸಾರ್ಟ್ಗಳು, ಹೋಂ ಸ್ಟೇಗಳು ಹಾಗೂ ಹೋಟೆಲ್ಗಳಲ್ಲಿ ಹೆಚ್ಚಿನ ನಿಗಾವಹಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸಲಹೆ ಮಾಡಿದ್ದಾರೆ.
ಕೊರೋನ ವೈರಸ್ ಸಂಬಂಧ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಇಲಾಖೆ ಅಧಿಕಾರಿಗಳೊಂದಿಗೆ ಮಂಗಳವಾರ ಸಭೆ ನಡೆಸಿದರು.
ಕೊರೋನ ವೈರಸ್ ಬೆಂಗಳೂರಿನಲ್ಲೂ ಕಂಡುಬಂದಿರುವ ಹಿನ್ನೆಲೆ ಜಿಲ್ಲೆಯಲ್ಲಿಯೂ ಸಹ ಇನ್ನಷ್ಟು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕಿದೆ. ಆ ನಿಟ್ಟಿನಲ್ಲಿ ಪ್ರವಾಸಿ ತಾಣಗಳು ಹಾಗೂ ಜನದಟ್ಟಣೆ ಪ್ರದೇಶಗಳಲ್ಲಿ ಹೆಚ್ಚಿನ ನಿಗಾವಹಿಸಬೇಕಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳನ್ನು ದಾಸ್ತಾನು ಮಾಡಿಕೊಳ್ಳಬೇಕು. ಕೊರೋನ ವೈರಸ್ ಸಂಬಂಧಿಸಿದಂತೆ ಪ್ರವಾಸಿ ತಾಣಗಳಲ್ಲಿ ಜಾಗೃತಿ ಮೂಡಿಸಬೇಕು ಎಂದು ಅನೀಸ್ ಕಣ್ಮಣಿ ಜಾಯ್ ಅವರು ಹೇಳಿದರು.
ಈಗಾಗಲೇ ಜಿಲ್ಲೆಯ ಕರಿಕೆ, ಕುಟ್ಟ ಹಾಗೂ ಮಾಕುಟ್ಟ ಗಡಿ ಪ್ರದೇಶಗಳಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ. ಅದೇ ರೀತಿ ಜಿಲ್ಲೆಯ ವಿವಿಧ ಜನದಟ್ಟಣೆ ಸ್ಥಳಗಳಲ್ಲಿಯೂ ಈ ಬಗ್ಗೆ ಮುತುವರ್ಜಿ ವಹಿಸಬೇಕಿದೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಮಾತನಾಡಿ, ಜಿಲ್ಲೆಯಲ್ಲಿ ಇದುವರೆಗೆ ಕೊರೋನ ವೈರಸ್ ಕಂಡು ಬಂದಿಲ್ಲ. ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿ ದಾಸ್ತಾನು ಮಾಡಿಕೊಳ್ಳಲಾಗಿದೆ. ಹಾಗೆಯೇ ಪೋಸ್ಟರ್, ಬ್ಯಾನರ್, ಪ್ರವಾಸಿ ತಾಣಗಳು, ಗಡಿ ಪ್ರದೇಶ ಸೇರಿದಂತೆ ಜಿಲ್ಲೆಯ ಜನದಟ್ಟಣೆ ಪ್ರದೇಶಗಳಲ್ಲಿ ಮಾಹಿತಿ ಶಿಕ್ಷಣ ಕಾರ್ಯಕ್ರಮಗಳು ನಡೆಯುತ್ತಿವೆ ಎಂದು ಅವರು ಮಾಹಿತಿ ನೀಡಿದರು.
ವಿದೇಶದಿಂದ ಬರುವವರ ಬಗ್ಗೆ ಜಿಲ್ಲಾ ಸರ್ವೇಕ್ಷಣಾಧಿಕಾರಿ ಅವರಿಗೆ (9449843263) ಕಡ್ಡಾಯವಾಗಿ ಮಾಹಿತಿ ನೀಡುವಂತಾಗಬೇಕು ಎಂದು ಅವರು ಕೋರಿದರು. ಹಾಗೆಯೇ 104 ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ. ಜಿಲ್ಲೆಯ ಎಲ್ಲಾ ಹಂತದ ಆಸ್ಪತ್ರೆಗಳಲ್ಲಿ ಪ್ರತ್ಯೇಕ ಕೊಠಡಿ ತೆರೆಯಲಾಗಿದೆ ಎಂದು ಅವರು ಹೇಳಿದರು.
ವೈದ್ಯಕೀಯ ಕಾಲೇಜಿನ ಅಧೀಕ್ಷಕರಾದ ಲೋಕೇಶ್ ಅವರು ಜಿಲ್ಲಾ ವೈದ್ಯಕೀಯ ಕಾಲೇಜಿನ ಆಸ್ಪತ್ರೆಯಲ್ಲಿ ಹತ್ತು ಹಾಸಿಗೆ ಒಳಗೊಂಡ ಪ್ರತ್ಯೇಕ ಕೊಠಡಿ ತೆರೆಯಲಾಗಿದೆ. ಅಗತ್ಯ ಔಷಧಿ ಲಭ್ಯವಿದೆ ಎಂದು ಅವರು ತಿಳಿಸಿದರು.
ಮಾ.17 ರಿಂದ ರಜೆ
ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಚ್ಚಾಡೋ ಅವರು ಒಂದರಿಂದ ಐದನೇ ತರಗತಿ ವಿದ್ಯಾರ್ಥಿಗಳಿಗೆ ಮಾ.17 ರಿಂದ ರಜೆ ಹಾಗೆಯೇ 6 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಮಾ.24 ರಿಂದ ಬೇಸಿಗೆ ರಜೆ ಇದೆ ಎಂದು ಅವರು ತಿಳಿಸಿದರು.
ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಕಾರ್ಯಪ್ಪ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಶಿವಕುಮಾರ್, ಆರ್ಸಿಎಚ್ ಅಧಿಕಾರಿ ಡಾ.ಗೋಪಿನಾಥ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್ ಇತರರು ಹಾಜರಿದ್ದರು.







