ಕೊರೋನ ವೈರಸ್: ಸರಕಾರದ ನಿರ್ಬಂಧಗಳನ್ನು ಕಡ್ಡಾಯವಾಗಿ ಪಾಲಿಸಿ ; ಜಿಲ್ಲಾಧಿಕಾರಿ ಜಿ.ಜಗದೀಶ್ ಕರೆ

ಉಡುಪಿ, ಮಾ.14: ಕೊರೋನಾ ವೈರಸ್ ನಿಯಂತ್ರಣ ಕುರಿತಂತೆ ರಾಜ್ಯ ಸರಕಾರ ಸಾರ್ವಜನಿಕ ಸ್ಥಳಗಳಲ್ಲಿ ವಿಧಿಸಿರುವ ನಿರ್ಬಂಧಗಳನ್ನು ಸಂಬಂಧ ಪಟ್ಟ ಸಂಸ್ಥೆಗಳು ಮತ್ತು ಸಾರ್ವಜನಿಕರು ಜಿಲ್ಲೆಯಲ್ಲಿ ಕಟುನಿಟ್ಟಾಗಿ ಪಾಲಿಸುವ ಮೂಲಕ ಜಿಲ್ಲೆಯಲ್ಲಿ ಕೊರೋನ ನಿಯಂತ್ರಣಕ್ಕೆ ಸಹಕರಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.
ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಜಿ. ಜಗದೀಶ್, ಜಿಲ್ಲೆಗೆ ವಿದೇಶಗಳಿಂದ ಆಗಮಿಸುವವರು ರೋಗ ಲಕ್ಷಣ ಇಲ್ಲದಿದ್ದರೂ ಸಹ 14 ದಿನಗಳ ಕಾಲ ಮನೆಯಲ್ಲಿಯೇ ಇರುವಂತೆ ತಿಳಿಸಿದ ಅವರು, ಜಾತ್ರೆ ಮುಂತಾದ ಕಾರ್ಯಕ್ರಮದಲ್ಲಿ ಧಾರ್ಮಿಕ ವಿಧಿ ವಿಧಾನ ಮಾತ್ರ ನಡೆಸುವಂತೆ ಹಾಗೂ ಈಗಾಗಲೇ ನಿಶ್ಚಯವಾಗಿರುವ ಮದುವೆ, ನಿಶ್ವಿತಾರ್ಥ ಮುಂತಾದ ಸಮಾರಂಭಗಳನ್ನು ಹೆಚ್ಚು ಜನ ಸೇರಲು ಅವಕಾಶ ನೀಡದೇ, ಹತ್ತಿರದ ಸಂಬಂಧಿಗಳೊಂದಿಗೆ ಮಾ್ರ ಆಚರಿಸುವಂತೆ ಸಲಹೆ ನೀಡಿದರು.
ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳ ಸಿಬ್ಬಂದಿಗೆ ಈಗಾಗಲೇ ಕಾರ್ಯಾಗಾರ ನಡೆಸಿ ಸ್ಪಷ್ಟ ಸೂಚನೆಗಳನ್ನು ನೀಡಲಾಗಿದೆ. ಕೊರೋನ ರೋಗ ಲಕ್ಷಣ ಇರುವ ರೋಗಿಗಳನ್ನು ನಿರ್ಲಕ್ಷಿಸಿದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ ಅವರು, ಪ್ರತಿ ಆಸ್ಪತ್ರೆಯಲ್ಲಿ ಎರಡು ಐಸೋಲೇಟೆಡ್ ಕೊಠಡಿಗಳನ್ನು ಮೀಸಲಿಡುವಂತೆ ಸೂಚಿಸಲಾಗಿದೆ ಎಂದರು.
ಕ್ರಮದ ಎಚ್ಚರಿಕೆ: ಸೋಶಿಯಲ್ ಮೀಡಿಯಾಗಳ ಮೂಲಕ ಜಿಲ್ಲೆಯಲ್ಲಿ ಕರೋನ ಕುರಿತಂತೆ ಸುಳ್ಳು ಸುದ್ದಿಗಳನ್ನು ಹಬ್ಬಿಸುವವರ ವಿರುದ್ದ ಕಾಯ್ದೆಯಲ್ಲಿ ಸೂಚಿಸಿರುವಂತೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದರು.
ಜಿಲ್ಲೆಯಲ್ಲಿ ಪ್ರಸ್ತುತ ಇಂದು ಒಬ್ಬ ಕೊರೋನ ಶಂಕಿತರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ವೈದ್ಯಕೀಯ ವರದಿಯನ್ನು ಶಿವಮೊಗ್ಗಕ್ಕೆ ಕಳುಹಿಸ ಲಾಗಿದ್ದು, ವರದಿ ನಿರೀಕ್ಷೆಯಲ್ಲಿದ್ದೇವೆ. ಇದುವರೆಗೆ ಜಿಲ್ಲೆಯಿಂದ ಕಳುಹಿಸಿದ ಎಲ್ಲಾ ವರದಿಗಳು ನೆಗೆಟಿವ್ ಆಗಿವೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಮಾಹಿತಿ ನೀಡಿದರು. ಜಿಲ್ಲೆಯ ಡಿಎಚ್ಓ ಡಾ.ಸುಧೀರ್ ಚಂದ್ರ ಸೂಡ ಉಪಸ್ಥಿತರಿದ್ದರು.







