ಕೊರೋನ ಭೀತಿ: ಧಾರ್ಮಿಕ ಕೇಂದ್ರಗಳಲ್ಲಿ ಪ್ರಾರ್ಥನೆಗೆ ಶಾಸಕ ಕಾಮತ್ ಮನವಿ

ಮಂಗಳೂರು, ಮಾ.14: ಜಗತ್ತನ್ನು ಕಾಡುತ್ತಿರುವ ಮಹಾಮಾರಿ ಕೊರೋನ ಸೋಂಕು ಭೀತಿ ನಿವಾರಣೆಗಾಗಿ ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ್ ಕಾಮತ್ ಕದ್ರಿ ಮಂಜುನಾಥ ಸನ್ನಿಧಿಯಲ್ಲಿ ವಿಶೇಷ ಪೂಜೆ ನೆರವೇರಿಸಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಗತ್ತನ್ನು ಕಾಡುತ್ತಿರುವ ಕೊರೋನ ಸೋಂಕು ದೇಶದ ವಿವಿಧೆಡೆ ಹಬ್ಬುತ್ತಿರುವುದು ಆತಂಕ ಮೂಡಿಸಿದೆ. ಇತ್ತೀಚೆಗೆ ಕಲಬುರಗಿಯಲ್ಲಿ ಕೊರೋನ ಸೋಂಕಿನಿಂದ ವ್ಯಕ್ತಿ ಮೃತಪಟ್ಟಿರುವುದು ಕೂಡ ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ ಎಂದರು.
ದೇಶದಲ್ಲಿ ಉಂಟಾಗಿರುವ ಕೊರೋನ ಸೋಂಕು ಭೀತಿ ದೂರವಾಗುವ ನಿಟ್ಟಿನಲ್ಲಿ ಮಂಗಳೂರಿನ ಎಲ್ಲ ದೇವಸ್ಥಾನ, ದೈವಸ್ಥಾನ, ಮಠ-ಮಂದಿರ, ಚರ್ಚ್, ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ಆಡಳಿತ ಮಂಡಳಿ ಹಾಗೂ ನಾಗರಿಕರಲ್ಲಿ ಮನವಿ ಮಾಡಿಕೊಳ್ಳುತ್ತೇನೆ. ರಥಬೀದಿ ವೆಂಕಟರಮಣ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆದಿದೆ. ಆರೋಗ್ಯದಲ್ಲಿ ಸಮಸ್ಯೆ ಕಂಡು ಬಂದರೆ ತಕ್ಷಣವೇ ಆಸ್ಪತ್ರೆಗೆ ತೆರಳಿ, ಪರೀಕ್ಷಿಸಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಶಾಸಕರು ಮನವಿ ಮಾಡಿದರು.
ಈ ಸಂದರ್ಭ ಮಂಗಳೂರು ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿಯ ಅಧ್ಯಕ್ಷ ಪ್ರೇಮಾನಂದ ಶೆಟ್ಟಿ, ಪಾಲಿಕೆ ಸದಸ್ಯರಾದ ಶಕಿಲಾ ಕಾವಾ, ಮನೋಹರ್ ಶೆಟ್ಟಿ, ಬಿಜೆಪಿ ಮುಖಂಡರು ಹಾಗೂ ದೇವಾಲಯದ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.





