ಕೇರಳ ಗಡಿಭಾಗದಲ್ಲಿ ಕಟ್ಟೆಚ್ಚರ ವಹಿಸಿ: ಶಾಸಕ ಕಾಮತ್
ಕೊರೋನ ಭೀತಿ
ಮಂಗಳೂರು, ಮಾ.17: ಜಗತ್ತನ್ನೇ ಆತಂಕಕ್ಕೆ ಈಡು ಮಾಡಿರುವ ಕೊರೋನ ಸೋಂಕಿನ ಭೀತಿಯು ದೇಶಕ್ಕೂ ತಟ್ಟಿದೆ. ಸೋಂಕು ಹರಡದಂತೆ ಎಚ್ಚರ ವಹಿಸಲು ಜಿಲ್ಲಾಡಳಿತಕ್ಕೆ ಶಾಸಕ ವೇದವ್ಯಾಸ ಕಾಮತ್ ಸೂಚನೆ ನೀಡಿದ್ದಾರೆ.
ಕೇರಳ ರಾಜ್ಯದಿಂದ ಬರುವ ವಾಹನಗಳನ್ನು ತಲಪಾಡಿ ಗಡಿಭಾಗದಲ್ಲಿ ತಪಾಸಣೆ ನಡೆಸಬೇಕು. ಮಂಗಳೂರು ರೈಲು ನಿಲ್ದಾಣ, ಮಂಗಳೂರಿನ ಖಾಸಗಿ ಹಾಗೂ ಸರಕಾರಿ ಬಸ್ ನಿಲ್ದಾಣದಲ್ಲಿ ಕೂಡ ವಿಶೇಷ ಕಟ್ಟೆಚ್ಚರ ವಹಿಸಬೇಕು ಎಂದು ಶಾಸಕರು ತಿಳಿಸಿದ್ದಾರೆ.
ಈವರೆಗೂ ಕೊರೋನ ವೈರಸ್ ಕುರಿತು ಮಂಗಳೂರಿನಲ್ಲಿ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲವಾದರೂ ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿ ಹೆಚ್ಚಿನ ಜಾಗೃತಿ ಮೂಡಿಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದ್ದಾರೆ.
ಜ್ವರ, ನೆಗಡಿ, ಕೆಮ್ಮು ಮುಂತಾದ ಲಕ್ಷಣಗಳು ಕಂಡು ಬಂದರೆ ಸಮೀಪದ ಆರೋಗ್ಯ ಕೇಂದ್ರಗಳಲ್ಲಿ ಆರೋಗ್ಯ ತಪಾಸಣೆ ನಡೆಸಬೇಕು. ಆರೋಗ್ಯದ ಕುರಿತು ನಿರ್ಲಕ್ಷ ವಹಿಸಬಾರದು ಎಂದು ಶಾಸಕರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆಗೆ ಪ್ರತಿನಿತ್ಯ ಸಾವಿರಾರು ಜನರು ಆಗಮಿಸುವುದರಿಂದ ಪಾಲಿಕೆಯಲ್ಲಿ ಹೆಲ್ಪ್ ಡೆಸ್ಕ್ ತೆರೆಯುವಂತೆಯೂ ಸಲಹೆ ನೀಡಿದ್ದಾರೆ.





