ಶಿವಮೊಗ್ಗ : ಅಬಕಾರಿ ಇಲಾಖೆ ಅಧಿಕಾರಿಗಳಿಂದ ಕಾರ್ಯಾಚರಣೆ ; ಮದ್ಯ ವಶ
ಶಿವಮೊಗ್ಗ : ಲಾಕ್ ಡೌನ್ ಸಂದರ್ಭ ಮದ್ಯ ಸಾಗಾಟ ಮಾಡುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಿದ ಪೊಲೀಸರು ಕಾರು ಹಾಗು ಮದ್ಯವನ್ನು ವಶಕ್ಕೆ ಪಡೆದ ಘಟನೆ ಸೊರಬ ತಾಲೂಕು ಆನವಟ್ಟಿಯಲ್ಲಿ ನಡೆದಿದೆ.
ಇಲ್ಲಿನ ವೈನ್ ಶಾಪ್ ಒಂದರಿಂದ ವ್ಯಕ್ತಿಯೋರ್ವ ಮದ್ಯವನ್ನು ಕಾರಿನಲ್ಲಿ ಕೊಂಡೊಯ್ಯುತ್ತಿದ್ದು, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಬಕಾರಿ ಪೊಲೀಸರು, ಕಾರು ಮತ್ತು ಮದ್ಯವನ್ನು ವಶಕ್ಕೆ ಪಡೆದಿದ್ದಾರೆ.
‘ದೇವರಾಜ್ ಎಂಬಾತ ಮದ್ಯವನ್ನು ಸಾಗಾಟ ಮಾಡುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಲಾಗಿದೆ. ದಾಳಿ ವೇಳೆ ಆತ ಪರಾರಿಯಾಗಿದ್ದಾನೆ. ಎಂದು ಪೊಲೀಸರು ತಿಳಿಸಿದ್ದಾರೆ.
ಲಾಕ್’ಡೌನ್ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧವಿದೆ. ಸರ್ಕಾರದ ಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲಿಸುವ ಸಲುವಾಗಿ ಅಬಕಾರಿ ಇಲಾಖೆ ಇನ್ಸ್’ಪೆಕ್ಟರ್, ಸಬ್’ಇನ್ಸ್’ಪೆಕ್ಟರ್’ಗಳ ನೇತೃತ್ವದಲ್ಲಿ ತಂಡಗಳನ್ನು ರಚಿಸಲಾಗಿದೆ. ಹಗಲು, ರಾತ್ರಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಉಪ ಆಯುಕ್ತ ಅಜಿತ್ ಕುಮಾರ್ ತಿಳಿಸಿದ್ದಾರೆ.
ಲಾಕ್ ಡೌನ್ ಆದೇಶ ಉಲ್ಲಂಘಿಸಿ ಸುತ್ತಾಡುತ್ತಿದ್ದ ಬೈಕ್’ಗಳ ಸೀಝ್ ಮುಂದುವರೆದಿದೆ. ಈವರೆಗೆ ಶಿವಮೊಗ್ಗ ಜಿಲ್ಲಾ ಪೊಲೀಸರು ವಶಕ್ಕೆ ಪಡೆದ ಬೈಕ್’ಗಳ ಸಂಖ್ಯೆ 600ಕ್ಕೆ ತಲುಪಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶನಿವಾರ 56 ಬೈಕ್’ಗಳನ್ನು ಜಿಲ್ಲೆಯ ವಿವಿಧೆಡೆ ಪೊಲೀಸ್ ಠಾಣೆಗಳಲ್ಲಿ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.