ತೀವ್ರ ಉಸಿರಾಟ ತೊಂದರೆ ಇರುವ ರೋಗಿಗಳಿದ್ದಲ್ಲಿ ಮಾಹಿತಿ ನೀಡಿ: ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ, ಎ.18: ಜಿಲ್ಲೆಯ ಯಾವುದೇ ಖಾಸಗಿ ಕ್ಲಿನಿಕ್ ಮತ್ತು ಆಸ್ಪತ್ರೆಗಳಿಗೆ ತೀವ್ರ ಉಸಿರಾಟ ತೊಂದರೆ, ಜ್ವರ ಮತ್ತು ಶೀತ ಕೆಮ್ಮು ಇರುವ ರೋಗಿಗಳು ಕಂಡುಬಂದಲ್ಲಿ ಅವರ ವಿವರಗಳನ್ನು ಜಿಲ್ಲಾಡಳಿತಕ್ಕೆ ನೀಡುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆ ಮತ್ತು ಕ್ಲಿನಿಕ್ಗಳ ವೈದ್ಯರುಗಳಿಗೆ ಸೂಚನೆ ನೀಡಿದ್ದಾರೆ.
ಶನಿವಾರ, ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನೋವೆಲ್ ಕೊರೋನ ವೈರಸ್ (ಕೋವಿಡ್ -19) ನಿಯಂತ್ರಣ ಕುರಿತಂತೆ ರಚಿಸಲಾಗಿರುವ ಜಿಲ್ಲಾ ತಜ್ಞರ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತಿದ್ದರು.
ಪ್ರಸ್ತುತ ಜಿಲ್ಲೆಯಲ್ಲಿ ದಾಖಲಾಗಿದ್ದ ಮೂವರು ಕೊರೋನಾ ರೋಗಿಗಳು ಆಸ್ಪತ್ರೆಯಿಂದ ಗುಣಮುಖರಾಗಿ ತೆರಳಿದ್ದು, ಜಿಲ್ಲೆಯ ಒಳಗೆ ಇನ್ನು ಕೊರೋನ ಕಾಣಿಸಿಕೊಳ್ಳುವ ಸಾಧ್ಯತೆ ಕಡಿಮೆ ಇದೆ. ಆದ್ದರಿಂದ ಜಿಲ್ಲೆಯ ಗಡಿಗಳನ್ನು ಈಗಾಗಲೇ ಸೀಲ್ ಮಾಡಿದ್ದು, ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುತ್ತಿದೆ. ತುರ್ತು ವೈದ್ಯಕೀಯ ಪ್ರಕರಣಗಳಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ ಎಂದರು.
ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಖಾಸಗಿ ಕ್ಲಿನಿಕ್ ಮತ್ತು ಆಸ್ಪತ್ರೆಗಳಿಗೆ ತೀವ್ರ ಉಸಿರಾಟ ತೊಂದರೆ ಮತ್ತು ಶೀತ ಕೆಮ್ಮು ಇರುವ ರೋಗಿಗಳು ಚಿಕಿತ್ಸೆಗಾಗಿ ಬಂದಲ್ಲಿ, ಅವರ ವಿಳಾಸ ಮತ್ತು ಮೊಬೈಲ್ ಸಂಖ್ಯೆಯನ್ನು ದಾಖಲಿಸಿಕೊಂಡು ಜಿಲ್ಲಾಡಳಿತಕ್ಕೆ ನೀಡುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.
ಜಿಲ್ಲೆಯಲ್ಲಿ ಒಂದು ವೇಳೆ ಪಾಸಿಟಿವ್ ಪ್ರಕರಣ ಕಂಡುಬಂದಲ್ಲಿ, ರೋಗಿ ಯನ್ನು ಸಾವಿನಿಂದ ಪಾರು ಮಾಡುವುದು ತಜ್ಞರ ಸಮಿತಿಯ ಪ್ರಮುಖ ಕರ್ತವ್ಯವಾಗಿದ್ದು, ಈ ನಿಟ್ಟಿನಲ್ಲಿ ಪಾಸಿಟಿವ್ ಕಂಡುಬಂದ ತಕ್ಷಣದಿಂದ ಎಲ್ಲಾ ಅತ್ಯಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.
ಜಿಲ್ಲೆಯೊಳಗೆ ವೈದ್ಯಕೀಯ ಪ್ರವೇಶ ತುರ್ತು ಚಿಕಿತ್ಸೆಗಾಗಿ ಬರುವ ಹೊರ ಜಿಲ್ಲೆಯ ರೋಗಿಗಳು, ತಮಗೆ ಕೋವಿಡ್-19ನ ಲಕ್ಷಣಗಳು ಇಲ್ಲ ಎಂಬುದರ ಬಗ್ಗೆ ಆಯಾ ಜಿಲ್ಲೆಯ ಡಿಹೆಚ್ಓ ಅಥವಾ ಟಿಹೆಚ್ಓ ಮೂಲಕ ದೃಢಪತ್ರ ಪಡೆದುಕೊಂಡು ಬರುವ ಕುರಿತಂತೆ ತಜ್ಞರ ಸಮಿತಿ ತೀರ್ಮಾನಿಸಿತು. ಈ ಕುರಿತಂತೆಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯುವುದಾಗಿ ಜಿಲ್ಲಾಧಿಕಾರಿ ತಿಳಿಸಿದರು.
ಜಿಲ್ಲೆಗೆ ಆಗಮಿಸುವ ಹೊರ ಜಿಲ್ಲೆಗಳ ರೋಗಿಗಳಿಗೆ ಅನಿವಾರ್ಯವಾಗಿ ತುರ್ತು ಚಿಕಿತ್ಸೆ ಅಗತ್ಯವಿದ್ದರೆ ಮಾತ್ರ ಉಡುಪಿ ಜಿಲ್ಲೆಯ ಸಂಬಂದಪಟ್ಟ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ಆಗಮಿಸಲು ಸೂಚನೆ ನೀಡುವಂತೆ ಹಾಗೂ ತೀವ್ರವಲ್ಲದ ಚಿಕಿತ್ಸೆಗೆ ಜಿಲ್ಲೆಗೆ ಆಗಮಿಸಲು ಅನುಮತಿ ನೀಡದಂತೆ ತಜ್ಞರ ಸಮಿತಿ ತೀರ್ಮಾನಿಸಿತು.
ಮಣಿಪಾಲದದಲ್ಲಿ ಲಾಕ್ಡೌನ್ ಆದಾಗಿನಿಂದ 1000 ಮಂದಿ ಹೊರ ಜಿಲ್ಲೆಯ ರೋಗಿಗಳಿಗೆ ಮಾತ್ರ ಚಿಕಿತ್ಸೆಗೆ ಬರಲು ಅನುಮತಿ ನೀಡಿದ್ದು, ಇತರೆ ಸಮಯದಲ್ಲಿ ಮಣಿಪಾಲಕ್ಕೆ ಆಗಮಿಸುವ ರೋಗಿಗಳ ಸಂಖ್ಯೆ ಸುಮಾರು 15 ರಿಂದ 20 ಸಾವಿರ ಇರುತ್ತಿತ್ತು ಎಂದು ಕೆಎಂಸಿ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ಮಾಹಿತಿ ನೀಡಿದರು.
ಹೊರ ಜಿಲ್ಲೆಗಳ ರೋಗಿಗಳೊಂದಿಗೆ ಚಿಕಿತ್ಸೆಗೆ ಆಗಮಿಸಲು, ರೋಗಿಯ ಜೊತೆಗೆ ಬರುವ ಸಹಾಯಕರ ಸಂಖ್ಯೆಯನ್ನು ನಿಯಮಿತಗೊಳಿಸುವ ಬಗ್ಗೆ ಚರ್ಚೆ ನಡೆಯಿತು. ರೋಗಿಯು ಚಿಕಿತ್ಸೆಗೆ ಬರಲು ಅನುಮತಿ ನೀಡಿದಲ್ಲಿ ಆತನ ವಿವರಗಳನ್ನು ನೀಡಿದಲ್ಲಿ, ಚೆಕ್ಪೋಸ್ಟ್ನಲ್ಲಿ ತಪಾಸಣೆ ಮಾಡಲು ಸಹಾಯ ವಾಗುತ್ತದೆ ಎಂದು ಜಿ.ಜಗದೀಶ್ ತಿಳಿಸಿದರು.
ಸಭೆಯಲ್ಲಿ ಜಿಪಂ ಸಿಇಓ ಪ್ರೀತಿ ಗೆಹ್ಲೋಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಡಿಹೆಚ್ಓ ಡಾ.ಸುಧೀರ್ಚಂದ್ರ ಸೂಡಾ, ಜಿಲ್ಲಾ ಸರ್ಜನ್ ಡಾ. ಮಧುಸೂಧನ್ ನಾಯಕ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ವಾಸುದೇವ ಉಪಾಧ್ಯಾಯ, ಜಿಲ್ಲಾ ಕೋವಿಡ್ ನೋಡೆಲ್ ಅಧಿಕಾರಿ ಡಾ. ಪ್ರಶಾಂತ್ ಭಟ್, ಆದರ್ಶ ಆಸ್ಪತ್ರೆಯ ನಿರ್ದೇಶಕ ಡಾ. ಚಂದ್ರಶೇಖರ್, ಕೆಎಂಸಿಯ ತಜ್ಞ ವೈದ್ಯರು ಉಪಸ್ಥಿತರಿದ್ದರು.







