ಅಗತ್ಯ ವಸ್ತುಗಳು ಮನೆ ಬಾಗಿಲಿಗೆ: ಹೋಮ್ ಡೆಲಿವರಿ ಸಹಾಯವಾಣಿಗೆ ಸಿಎಂ ಚಾಲನೆ

ಬೆಂಗಳೂರು, ಎ.21: ಹೋಮ್ ಡೆಲಿವರಿ ಸಹಾಯವಾಣಿಗೆ ಕರೆ ಅಥವಾ ವಾಟ್ಸಾಪ್ ಮಾಡುವ ಮೂಲಕ ಅಗತ್ಯವಸ್ತುಗಳನ್ನು ಗ್ರಾಹಕರು ಮನೆಬಾಗಿಲಿಗೆ ತರಿಸಿಕೊಳ್ಳಬಹುದು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಮಂಗಳವಾರ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ದಿನಸಿ, ತರಕಾರಿ, ಔಷಧಿ, ಸಾಮಗ್ರಿಗಳನ್ನು ಮನೆಬಾಗಿಲಿಗೆ ತಲುಪಿಸುವ ಹೋಮ್ ಡೆಲಿವರಿ ಸಹಾಯವಾಣಿ-080-61914960ಗೆ ಚಾಲನೆ ನೀಡಿ ಅವರು ಮಾತನಾಡಿದರು.
ಅಗತ್ಯ ವಸ್ತುಗಳನ್ನು ಮನೆ ಬಾಗಿಲಿಗೆ ತಲುಪಿಸುವ ಕಾರ್ಯ ದೇಶದಲ್ಲೇ ಮೊದಲನೆಯದಾಗಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಹೋಮ್ ಡೆಲಿವರಿಗೆ ಅನುಕೂಲವಾಗುವಂತೆ ಡೆಲಿವರಿ ಸಹಾಯವಾಣಿಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.
ಕೊರೋನ ಲಾಕ್ಡೌನ್ ಸಂದರ್ಭದಲ್ಲಿ ನಾಗರಿಕರ ಸುರಕ್ಷತೆಗೆ ಇದು ಮಹತ್ವಪೂರ್ಣ ಹೆಜ್ಜೆಯಾಗಿದೆ. ಗ್ರಾಹಕರು ತಮಗೆ ಬೇಕಾದ ವಸ್ತುಗಳನ್ನು ಆರ್ಡರ್ ಮಾಡಿದರೆ ಸಮೀಪದ ಅಂಗಡಿಗೆ ಸಂದೇಶ ವರ್ಗಾವಣೆಯಾಗುವಂತೆ ನೋಡಿಕೊಳ್ಳಲಾಗುತ್ತದೆ. ಈ ಸೇವೆಯನ್ನು ಒದಗಿಸಲು 18,000 ದಿನಸಿ, ತರಕಾರಿ ಹಾಗೂ ಔಷಧಿ ಮಾರಾಟಗಾರರು ನೋಂದಾಯಿಸಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥ ನಾರಾಯಣ್, ಸಂಸದರಾದ ಪಿ.ಸಿ.ಮೋಹನ್, ತೇಜಸ್ವಿ ಸೂರ್ಯ, ರಾಜೀವ್ ಚಂದ್ರಶೇಖರ್, ಕಂದಾಯ ಸಚಿವ ಆರ್.ಅಶೋಕ್, ಬಿಬಿಎಂಪಿ ಮೇಯರ್ ಗೌತಮ್ ಕುಮಾರ್, ಆಯುಕ್ತ ಬಿ.ಹೆಚ್ ಅನಿಲ್ಕುಮಾರ್ ಉಪಸ್ಥಿತರಿದ್ದರು.







