ಕೃಷಿ ಉತ್ಪನ್ನಗಳ ಸಾಗಾಟಕ್ಕೆ ವಿನಾಯಿತಿ ನೀಡಲು ಸಾಧ್ಯವೇ?: ಕೇಂದ್ರಕ್ಕೆ ಹೈಕೋರ್ಟ್ ಪ್ರಶ್ನೆ

ಬೆಂಗಳೂರು, ಎ.30: ಲಾಕ್ಡೌನ್ನಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ, ಇವರಿಗೆ ಆರ್ಥಿಕ ಶಕ್ತಿ ನೀಡಲು ಕೃಷಿ ಉತ್ಪನ್ನಗಳ ಸಾಗಾಟಕ್ಕೆ ಟೋಲ್ ವಿನಾಯಿತಿ ನೀಡಲು ಸಾಧ್ಯವೇ ಎಂದು ಹೈಕೋರ್ಟ್ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವನ್ನು ಕೇಳಿದೆ.
ಈ ಕುರಿತು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.
ರೈತರು ತಮ್ಮ ಉತ್ಪನ್ನಗಳ ಸಾಗಾಟಕ್ಕೆ ಟೋಲ್ ವಿನಾಯಿತಿ ನೀಡಲು ಸಾಧ್ಯವೇ ಎಂಬ ಬಗ್ಗೆ ಮೇ 5ರೊಳಗೆ ಉತ್ತರಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪರ ವಕೀಲರಿಗೆ ನ್ಯಾಯಪೀಠವು ಸೂಚನೆ ನೀಡಿತು.
ಇನ್ನು ಟೋಲ್ ವಿಚಾರದಲ್ಲಿ ರೈತರಿಗೆ ನೆರವಾಗಲು ಕಾನೂನು ಸೇವೆಗಳ ಪ್ರಾಧಿಕಾರವೂ ಸರಕಾರಕ್ಕೆ ವಿನಾಯಿತಿ ನೀಡಲು ಸಾಧ್ಯವೇ ಎಂದು ಕೇಳಿ ಪತ್ರ ಕಳಿಸಿದೆ. ವಿಚಾರಣೆಯನ್ನು ನ್ಯಾಯಪೀಠವು ಮೇ 5ಕ್ಕೆ ಮುಂದೂಡಿದೆ.
Next Story





