ರಾಜ್ಯದಲ್ಲಿ ಶೀಘ್ರದಲ್ಲೇ ಆರ್ಥಿಕ ಚಟುವಟಿಕೆಗಳು ಪ್ರಾರಂಭ: ಸಿಎಂ ಯಡಿಯೂರಪ್ಪ

ಬೆಂಗಳೂರು, ಮೇ.1: ಕೋರೋನ ವೈರಸ್ ಸೋಂಕಿನಿಂದ ದೇಶದಾದ್ಯಂತ ಆರ್ಥಿಕ ಚಟುವಟಿಕೆಗಳು ಬಹುತೇಕ ಸ್ತಬ್ಧವಾಗಿದ್ದವು. ಇದರಿಂದ ದುಡಿದು ತಿನ್ನುವ ಕಾರ್ಮಿಕ ಬಂಧುಗಳು ಹೆಚ್ಚಿನ ತೊಂದರೆ ಅನುಭವಿಸಬೇಕಾಯಿತು. ಇಂತಹ ಕಠಿಣ ಸಂದರ್ಭದಲ್ಲಿ ರಾಜ್ಯ ಸರಕಾರ ನಿಮ್ಮ ಬೆನ್ನಿಗೆ ನಿಂತಿದ್ದು, ಯಾರೂ ಆತಂಕಕ್ಕೊಳಗಾಗಬಾರದು' ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮನವಿ ಮಾಡಿದ್ದಾರೆ.
ಶುಕ್ರವಾರ ಟ್ವೀಟ್ ಮೂಲಕ ಮೇ 1ರ ಕಾರ್ಮಿಕರ ದಿನಾಚರಣೆ ಹಿನ್ನೆಲೆಯಲ್ಲಿ ಕಾರ್ಮಿಕರಿಗೆ ಶುಭ ಕೋರಿರುವ ಅವರು, 'ನಿಮ್ಮೆಲ್ಲರ ಸಹಕಾರದಿಂದ ಇತರ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಕೋವಿಡ್-19 ಸೋಂಕಿನ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಶೀಘ್ರದಲ್ಲಿಯೇ ರಾಜ್ಯದಲ್ಲಿಯೂ ಆರ್ಥಿಕ ಚಟುವಟಿಕೆಗಳು ಮತ್ತೆ ಪ್ರಾರಂಭವಾಗುವ ನಿರೀಕ್ಷೆ ಇದೆ. ಈ ನಿಟ್ಟಿನಲ್ಲಿ ಸರಕಾರ ಈಗಾಗಲೇ ವಾಣಿಜ್ಯೋದ್ಯಮಿಗಳೊಂದಿಗೆ ಸಭೆ ನಡೆಸಿದ್ದು, ಕಾರ್ಮಿಕರ ಹಿತ ಕಾಯುವ ಹಾಗೂ ವೇತನ ಪಾವತಿ ಮಾಡುವಂತೆ ಮನವಿ ಮಾಡಿದೆ. ಆದುದರಿಂದ ವಲಸೆ ಕಾರ್ಮಿಕರು ಆತಂಕಕ್ಕೆ ಒಳಗಾಗದೆ ಕೇಂದ್ರ ಸರಕಾರದ ಸೂಚನೆ ಬಂದೊಡನೆ ಕೈಗಾರಿಕೆ ಹಾಗೂ ವಾಣಿಜ್ಯ ಚಟುವಟಿಕೆ ಪುನರಾರಂಭ ಮಾಡಲು ಸಹಕರಿಸುವಂತೆ ಮನವಿ ಮಾಡುತ್ತೇನೆಂದು ಕೋರಿದ್ದಾರೆ.





