ರಾಜ್ಯದ ಬಿಜೆಪಿ ಸಂಸದರು ತಮ್ಮ ಸ್ಥಾನದಲ್ಲಿ ಮುಂದುವರಿಯಲು ಅನರ್ಹರು: ಡಿ.ಕೆ.ಶಿವಕುಮಾರ್ ವಾಗ್ದಾಳಿ

ಬೆಂಗಳೂರು, ಮೇ 3: ನಾವು ನಿನ್ನೆ ಕೊಟ್ಟ ಮಾತಿನಂತೆ ಪ್ರಯಾಣಿಕರ ಉಚಿತ ಸಾರಿಗೆ ವ್ಯವಸ್ಥೆಗೆ ಅನುಕೂಲವಾಗಲು ಕೆಪಿಸಿಸಿ ವತಿಯಿಂದ ಒಂದು ಕೋಟಿ ರೂ. ಚೆಕ್ ಅನ್ನು ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ನೀಡುತ್ತಿದ್ದೇವೆ. ಚೆಕ್ ಕೊಡುತ್ತೇವೆ ಅಂದರೂ ಅವರು ಅದನ್ನು ತೆಗೆದುಕೊಳ್ಳಲು ತಯಾರಿಲ್ಲ. ಆದರೂ, ಅವರಿಗೆ ಈ ಚೆಕ್ ಕಳುಹಿಸಿ ಕೊಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.
ರವಿವಾರ ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ತಮ್ಮ ಊರುಗಳಿಗೆ ತೆರಳಲು ಪರದಾಡುತ್ತಿರುವ ಸಾವಿರಾರು ಕಾರ್ಮಿಕರನ್ನು ಕಾಂಗ್ರೆಸ್ ಮುಖಂಡರ ನಿಯೋಗದೊಂದಿಗೆ ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಕಿವಿ ಹಿಂಡಿದ ನಂತರ ಇದೀಗ ರಾಜ್ಯ ಸರಕಾರ ಮೂರು ದಿನಗಳ ಕಾಲ ಉಚಿತ ಸಾರಿಗೆ ವ್ಯವಸ್ಥೆ ಮಾಡುವುದಾಗಿ ಪ್ರಕಟಿಸಿದೆ. ಇದನ್ನು ಕನಿಷ್ಠ ಆರು ದಿನಗಳಿಗೆ ವಿಸ್ತರಿಸಬೇಕು ಎಂದು ಒತ್ತಾಯಿಸಿದರು.
ಕಾರ್ಮಿಕರು, ಶ್ರಮಿಕರು ಈ ನಾಡನ್ನು ಕಟ್ಟುತ್ತಿದ್ದಾರೆ. ನೀವು ಒಂದು ವಾರ ನಿಮ್ಮ ಕುಟುಂಬಸ್ಥರ ಜೊತೆ ಇದ್ದು, ನಂತರ ವಾಪಸ್ ಬಂದು ನಿಮ್ಮ ಕಾರ್ಯಗಳಲ್ಲಿ ತೊಡಗಿಕೊಳ್ಳಬೇಕು. ನಿಮಗೆ ಏನೆ ಕಷ್ಟ ಬಂದರೂ ನಾವು ನಿಮ್ಮನ್ನು ರಕ್ಷಿಸುತ್ತೇವೆ. ನಮ್ಮ ಪ್ರಾಣ ಕೊಟ್ಟಾದರೂ ಸರಿ ನಿಮ್ಮನ್ನು ಕಾಪಾಡುತ್ತೇವೆ ಎಂದು ಶಿವಕುಮಾರ್ ಹೇಳಿದರು.
ಈ ರಾಜ್ಯದಿಂದ ಲೋಕಸಭೆಗೆ ಬಿಜೆಪಿಯ 26 ಸಂಸದರನ್ನು ಆಯ್ಕೆ ಮಾಡಿ ಕಳುಹಿಸಿದ್ದರೂ ಅವರು ಈ ಜನರ ಸಂಕಷ್ಟಕ್ಕೆ ಸ್ಪಂದಿಸಿಲ್ಲ. ಒಂದೇ ಒಂದು ಉಚಿತ ರೈಲು ವ್ಯವಸ್ಥೆ ಮಾಡದಿರುವುದು ನಾಚಿಕೆಗೇಡಿನ ವಿಚಾರ ಎಂದ ಅವರು, ಈ 26 ಜನ ಬಿಜೆಪಿ ಸಂಸದರು ಆ ಸ್ಥಾನದಲ್ಲಿ ಮುಂದುವರೆಯಲು ಅನರ್ಹರು. ಜನರ ಕಷ್ಟ ಆಲಿಸದ ಸರಕಾರ, ಸಚಿವರು ಹಾಗೂ ಬಿಜೆಪಿ ಶಾಸಕರು ಮಲಗಿದ್ದಾರೆ ಎಂದರೆ ಅಪಾರ್ಥ ಮಾಡಿಕೊಂಡು ನಮ್ಮನ್ನೆ ಪ್ರಶ್ನಿಸುತ್ತಾರೆ ಎಂದರು.
ಕಾರ್ಮಿಕರು ಗಂಟು, ಮೂಟೆ ಕಟ್ಟಿಕೊಂಡು ತಮ್ಮ ಊರಿಗೆ ಹೋಗಲು ಪರದಾಡುತ್ತಿರುವುದನ್ನು ನಮ್ಮ ಕೈಯಲ್ಲಿ ನೋಡಲು ಆಗಲಿಲ್ಲ. ಹೀಗಾಗಿ ನಾವು ನಮ್ಮ ಕರ್ತವ್ಯ ಮಾಡುತ್ತಿದ್ದೇವೆ. ನಾನು ನನ್ನ ಕೈಯಿಂದ ಈ ದುಡ್ಡು ಕೊಡುತ್ತಿಲ್ಲ. ನಮ್ಮ ಶಾಸಕರು, ಮಾಜಿ ಶಾಸಕರು, ನಾಯಕರು, ಕಾರ್ಯಕರ್ತರು ದೇಣಿಗೆ ನೀಡಿದ್ದಾರೆ. ಅದನ್ನು ನಾನು ನೀಡುತ್ತಿದ್ದೇನೆ ಎಂದು ಶಿವಕುಮಾರ್ ತಿಳಿಸಿದರು.
ಇವತ್ತು ಬೆಳಗ್ಗೆಯಿಂದ ಈ ಕ್ಷೇತ್ರದ ಶಾಸಕ ದಿನೇಶ್ ಗುಂಡೂರಾವ್ ಹಾಗೂ ಇತರೆ ಸಂಘ ಸಂಸ್ಥೆಗಳು ಈ ಪ್ರಯಾಣಿಕರಿಗೆ ಆಹಾರ ಪ್ಯಾಕೆಟ್ ನೀಡಿ, ಅವರನ್ನು ಕಳುಹಿಸಿ ಕೊಡುತ್ತಿದ್ದಾರೆ. ಅವರಿಗೆ ನಾನು ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಅವರು ಹೇಳಿದರು.
ಮುಖ್ಯಮಂತ್ರಿಗಳೆ ಈ ಸಮಸ್ಯೆಗಳನ್ನು ಬಗೆಹರಿಸಲು ವಿದ್ಯೆ, ಬುದ್ಧಿವಂತಿಕೆ ಇಲ್ಲದಿದ್ದರೂ ಪ್ರಜ್ಞಾವಂತಿಕೆ ಇದ್ದರೂ ಸಾಕು. ಮುಂದಿನ ಮೂರು ದಿನಗಳಲ್ಲ, ಒಂದು ವಾರ ಸಮಯ ನಿಗದಿಪಡಿಸಿ ತಮ್ಮ ಊರಿಗೆ ಹೋಗಲು ಬಯಸುವ ಕಾರ್ಮಿಕರನ್ನು ಕಳುಹಿಸಿಕೊಡಬೇಕು. ಇದನ್ನು ವ್ಯವಸ್ಥಿತವಾಗಿ ಮಾಡಿ, ಒಂದು ವೇಳೆ ನಿಮಗೆ ಸಾಧ್ಯವಾಗದಿದ್ದರೆ ಹೇಳಿ, ನಾವೆ ನಮ್ಮ ಕಾರ್ಯಕರ್ತರನ್ನು ಬಳಸಿಕೊಂಡು, ಮಾಧ್ಯಮಗಳಲ್ಲಿ ಜಾಹೀರಾತು ನೀಡಿ ನಾವೇ ಜನರಿಗೆ ತಿಳಿಸುವ ಕೆಲಸ ಮಾಡುತ್ತೇವೆ ಎಂದು ಶಿವಕುಮಾರ್ ತಿಳಿಸಿದರು.
ಈ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್, ಶಾಸಕ ದಿನೇಶ್ ಗುಂಡೂರಾವ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.










