ವಲಸೆ ಕಾರ್ಮಿಕರಿಗೆ ಸೂಕ್ತ ಸಾರಿಗೆ ವ್ಯವಸ್ಥೆ ಕಲ್ಪಿಸಲು ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು, ಮೇ 10: ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ಹೋಗಲು ಅನುಕೂಲವಾಗುವಂತೆ ಸೂಕ್ತ ಬಸ್ ಹಾಗೂ ರೈಲು ವ್ಯವಸ್ಥೆ ಮಾಡಬೇಕೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಪತ್ರ ಬರೆದಿರುವ ಅವರು, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಕಡೆಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು ಲೌಕ್ಡೌನ್ ಜಾರಿಯಾದ ಬಳಿಕ ತಮ್ಮ ಊರುಗಳಿಗೆ ಹೋಗಲಾಗದೆ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಸರಕಾರವು ಕಾರ್ಮಿಕರನ್ನು ಮಾನವೀಯವಾಗಿ ನಡೆಸಿಕೊಳ್ಳುತ್ತಿಲ್ಲವೆಂದು ಬೇಸರ ವ್ಯಕ್ತಪಡಿಸಿದ್ದಾರೆ.
ವಲಸೆ ಕಾರ್ಮಿಕರು ಅನ್ನ, ಆಹಾರ ಇಲ್ಲದೆ ಹೆಣಗಾಡುತ್ತಿದ್ದಾರೆ. ಸರಕಾರಗಳು ಸೂಕ್ತ ಸಾರಿಗೆ ವ್ಯವಸ್ಥೆ ಕಲ್ಪಿಸದ ಪರಿಣಾಮವಾಗಿ ಊರುಗಳಿಗೆ ನಡೆದು ಹೋಗುವ ಮಾರ್ಗದಲ್ಲಿ ಸುಸ್ತಾಗಿ ರೈಲು ಹಳಿಗಳ ಮೇಲೆ ಮಲಗಿ ಕೆಲವು ಕಾರ್ಮಿಕರು ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಇನ್ನು ಹಲವೆಡೆ ಹಸಿವಿನಿಂದ ಸತ್ತಿರುವ ಉದಾಹರಣೆಗಳು ನಮ್ಮ ಕಣ್ಣು ಮುಂದೆ ಇವೆ ಎಂದು ಅವರು ತಿಳಿಸಿದ್ದಾರೆ.
ಪ್ರತಿದಿನ ವಲಸೆ ಕಾರ್ಮಿಕರ ಸಾವು ನೋವುಗಳು ಕಾಣುತ್ತಿದ್ದರೂ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಮನಸ್ಸು ಕರಗಿದಂತೆ ಕಾಣುತ್ತಿಲ್ಲ. ಹೀಗಾಗಿ ವಿರೋಧ ಪಕ್ಷದ ನಾಯಕನಾಗಿ ನಾನು ಹೇಳುವುದೇನೆಂದರೆ, ಕೂಡಲೇ ರಾಜ್ಯದಲ್ಲಿರುವ ಕಾರ್ಮಿಕರನ್ನು ಅವರ ಊರುಗಳಿಗೆ ಕಳುಹಿಸಿಕೊಡಲು ಹಾಗೂ ಹೊರ ರಾಜ್ಯಗಳಲ್ಲಿರುವ ಕನ್ನಡಿಗರನ್ನು ಇಲ್ಲಿಗೆ ಕರೆತರಲು ಸೂಕ್ತವಾದ ಸಾರಿಗೆ ವ್ಯವಸ್ಥೆ ಮಾಡಬೇಕೆಂದು ಆಗ್ರಹಿಸಿದ್ದಾರೆ.
ಈಗಾಗಲೇ ಕೇಂದ್ರ ಸರಕಾರ ಕಾರ್ಮಿಕರ ಪ್ರಯಾಣ ವೆಚ್ಚವನ್ನು ಶೇ.85ರಷ್ಟು ಭರಿಸುವುದಾಗಿ ಹೇಳಿದೆ. ಉಳಿದ ವೆಚ್ಚವನ್ನು ರಾಜ್ಯ ಸರಕಾರ ಭರಿಸುವ ಮೂಲಕ ಕಾರ್ಮಿಕರ ಪ್ರಯಾಣಕ್ಕೆ ಅನುಕೂಲ ಮಾಡಿಕೊಡಬೇಕು. ಇದಕ್ಕಾಗಿ ಮಾಡುವ ವೆಚ್ಚ ಸರಕಾರಕ್ಕೆ ಹೊರೆಯಾಗುವುದಿಲ್ಲ. ಈ ಸಂಬಂಧ ಬೆಂಗಳೂರಿನಿಂದ ಹೋಗುವ ಕಾರ್ಮಿಕರಿಗೆ ಅಕ್ಕಪಕ್ಕದ ಜಿಲ್ಲೆಗಳ ರೈಲ್ವೆ ನಿಲ್ದಾಣಕ್ಕೆ ಹೋಗಲು ಸೂಕ್ತ ಬಸ್ ವ್ಯವಸ್ಥೆ ಮಾಡಬೇಕು. ಹಾಗೂ ಆ ಕಾರ್ಮಿಕರು ಸುರಕ್ಷಿತವಾಗಿ ತಮ್ಮ ಊರುಗಳಿಗೆ ತಲುಪುವವರೆಗೆ ಊಟದ ವ್ಯವಸ್ಥೆ ಒದಗಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.
ರಾಜ್ಯದಿಂದ ಹೊರ ಹೋಗುವವರಿಗೆ ಮತ್ತು ಒಳಗೆ ಬರುವವರಿಗೆ ಕಡ್ಡಾಯವಾಗಿ ವೈದ್ಯಕೀಯ ತಪಾಸಣೆ ಮಾಡಿಸಲಿ. ಕಾರ್ಮಿಕರನ್ನು ಸೇವಾಸಿಂಧುಗೆ ಎನ್ರೋಲ್ ಮಾಡಿಸುವ ಪಾಲಿಕೆಯ ವಾರ್ಡ್ ಕಚೇರಿ, ಪೊಲೀಸ್ ಠಾಣೆಗಳಲ್ಲಿ ಕೌಂಟರ್ ಗಳನ್ನು ತೆರೆಯಲಿ. ಯಾವ ರಾಜ್ಯಕ್ಕೆ ಹೋಗಬೇಕು ಎಂಬುದರ ಬಗ್ಗೆ ಮಾಹಿತಿ ಪಡೆದುಕೊಳ್ಳುವ ವ್ಯವಸ್ಥೆಯಾಗಲಿ.
-ಸಿದ್ದರಾಮಯ್ಯ, ವಿರೋಧ ಪಕ್ಷದ ನಾಯಕ







