ಮುಂಗಾರು ಹಂಗಾಮಿಗೆ ಅಗತ್ಯ ಬಿತ್ತನೆ ಬೀಜ ಪೂರೈಕೆಗೆ ಬದ್ಧ: ಕೃಷಿ ಸಚಿವ ಬಿ.ಸಿ.ಪಾಟೀಲ್

ಹಾವೇರಿ, ಮೇ 12: ಮುಂಗಾರು ಹಂಗಾಮಿಗೆ ರೈತರ ಕೃಷಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಕೃಷಿ ಇಲಾಖೆಗೆ ಸಿದ್ಧವಾಗಿದೆ. ಅಲ್ಲದೆ, ಮುಂಗಾರು ಹಂಗಾಮಿಗೆ ಅಗತ್ಯವಾದ ಬಿತ್ತನೆ ಬೀಜವನ್ನು ಪೂರೈಸಲು ಇಲಾಖೆ ಬದ್ಧವಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.
ಮಂಗಳವಾರ ಹಿರೇಕೆರೂರಿನಲ್ಲಿ ರಿಯಾಯಿತಿ ದರದಲ್ಲಿ ನೀಡಲಾಗುವ ಬಿತ್ತನೆ ಬೀಜಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2020-21ನೆ ಸಾಲಿನ ಮುಂಗಾರು ಹಂಗಾಮಿಗೆ ರೈತರಿಗೆ ಅಗತ್ಯವಾದ ಬಿತ್ತನೆ ಬೀಜವನ್ನು ರಿಯಾಯಿತಿ ದರದಲ್ಲಿ ನೀಡಲಾಗುತ್ತಿದೆ ಎಂದರು.
ಮೆಕ್ಕೆಜೋಳವನ್ನು ಸಾಮಾನ್ಯ ವರ್ಗದವರಿಗೆ 20 ರೂ., ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ರೈತರಿಗೆ 30 ರೂ.ರಿಯಾಯಿತಿ ದರದಲ್ಲಿ ಇಲಾಖೆ ನೀಡುತ್ತಿದೆ. ಕಳಪೆ ಬಿತ್ತನೆ ಬೀಜ ಮಾರಾಟ ಜಾಲವನ್ನು ಭೇದಿಸಲಾಗಿದ್ದು, ಅಧಿಕಾರಿಗಳು ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ರೈತರ ಬಿತ್ತನೆಗೆ ಅಗತ್ಯವಾದ ರಸಗೊಬ್ಬರ ಮತ್ತು ಬಿತ್ತನೆ ಬೀಜಕ್ಕೆ ಯಾವುದೆ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಬಿ.ಸಿ.ಪಾಟೀಲ್ ಹೇಳಿದರು.
ಜಂಟಿ ಕೃಷಿ ನಿರ್ದೇಶಕ ಮಂಜುನಾಥ್ ಮಾತನಾಡಿ, ಹಿರೇಕೆರೂರು ತಾಲೂಕಿನಲ್ಲಿ ಮುಸುಕಿನಜೋಳ ಪ್ರಮುಖ ಬೆಳೆಯಾಗಿದೆ. ಸಚಿವರ ನಿರ್ದೇಶನದಂತೆ ಕಳಪೆ ನಕಲಿ ಬೀಜ ಮಾರಾಟಗಾರರನ್ನು ನಾಶ ಮಾಡುವಲ್ಲಿ ಇಲಾಖೆ ಕಾರ್ಯಪ್ರವೃತ್ತವಾಗಿದ್ದು, ಹಿಂದಿನಂತೆಯೆ ನಕಲಿತನವನ್ನು ಭೇದಿಸುವ ಕೆಲಸ ಮುಂದುವರೆದಿದೆ ಎಂದರು.
ಮುಂಗಾರಿಗೆ ಒಟ್ಟು ಶೇ.82ರಷ್ಟು ಸಾಗುವಳಿ ಕ್ಷೇತ್ರದಲ್ಲಿ ಬಿತ್ತನೆಯಾಗಲಿದೆ. ಒಟ್ಟು ಮುಂಗಾರಿಗೆ 55,648 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿಯಿದೆ. ಇದರಲ್ಲಿ 45,660 ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೆಜೋಳ ಬಿತ್ತನೆ ಗುರಿಯಿದೆ. ಭತ್ತ 1,768 ಹೆಕ್ಟೇರ್, ಹತ್ತಿ 7,095 ಹೆಕ್ಟೇರ್ ಬಿತ್ತನೆ ಗುರಿಯಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ್ ಉಪಸ್ಥಿತರಿದ್ದರು.







