ಜೂನ್ 25ರಿಂದ ಎಸೆಸೆಲ್ಸಿ ಪರೀಕ್ಷೆ: ಸಚಿವ ಸುರೇಶ್ ಕುಮಾರ್

ಸಾಂದರ್ಭಿಕ ಚಿತ್ರ
ಬೆಂಗಳೂರು, ಮೇ 18: ರಾಜ್ಯದ ವಿದ್ಯಾರ್ಥಿಗಳು ಮತ್ತು ಪೋಷಕರು ಬಹುದಿನಗಳಿಂದ ನಿರೀಕ್ಷಿಸುತ್ತಿದ್ದ ಎಸೆಸೆಲ್ಸಿ ಪರೀಕ್ಷೆ ಮತ್ತು ಬಾಕಿ ಉಳಿದ ಪಿಯುಸಿ ಇಂಗ್ಲಿಷ್ ಪರೀಕ್ಷೆಗೆ ದಿನಾಂಕಗಳನ್ನು ಪ್ರಕಟಿಸಲಾಗಿದ್ದು, ಜೂ.25 ರಿಂದ ಜು.4 ರವರೆಗೆ ಎಸೆಸೆಲ್ಸಿ ಹಾಗೂ ಜೂ.18ರಂದು ಬಾಕಿಯುಳಿದಿರುವ ದ್ವಿತೀಯ ಪಿಯುಸಿ ಆಂಗ್ಲ ಪತ್ರಿಕೆಯ ಪರೀಕ್ಷೆ ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ.
ಎಸೆಸೆಲ್ಸಿ ಪರೀಕ್ಷೆಗಳು ಜೂನ್ 25ರಿಂದ ಜುಲೈ 4ರವರೆಗೆ ನಡೆಯಲಿದ್ದು, ಇಂಗ್ಲಿಷ್, ಗಣಿತ, ವಿಜ್ಞಾನ ಹಾಗೂ ಸಮಾಜ ವಿಜ್ಞಾನ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿ ವಿಷಯಕ್ಕೆ ಒಂದು ದಿನದ ಅಂತರವನ್ನು ನೀಡಿ 10 ದಿನಗಳ ಒಟ್ಟು ಅವಧಿಯಲ್ಲಿ ಪರೀಕ್ಷೆ ಮುಗಿಯಲಿವೆ. ಬಾಕಿ ಉಳಿದಿದ್ದ ಪಿಯುಸಿ ಇಂಗ್ಲಿಷ್ ಪರೀಕ್ಷೆ ಜೂನ್ 18 ರಂದು ನಡೆಯಲಿದೆ. ಎಲ್ಲ ಪರೀಕ್ಷೆಗಳು ಸುರಕ್ಷಿತ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಸಂಪೂರ್ಣ ಆರೋಗ್ಯಕರ ವಾತಾವರಣದಲ್ಲಿ ಪರೀಕ್ಷೆಗಳು ನಡೆಯಲಿವೆ.
ಈ ಬಾರಿ 8,48,196 ವಿದ್ಯಾರ್ಥಿಗಳು ಎಸೆಸೆಲ್ಸಿ ಪರೀಕ್ಷೆ ತೆಗೆದುಕೊಳ್ಳಲಿದ್ದು, ಅದಕ್ಕಾಗಿ 2879 ಪರೀಕ್ಷಾ ಕೇಂದ್ರಗಳಲ್ಲಿ ಸುಮಾರು 43,720 ಕೊಠಡಿಗಳನ್ನು ಸಿದ್ಧಪಡಿಸಲಾಗಿದೆ. ಆರೋಗ್ಯ ಇಲಾಖೆಯ ಸಲಹೆಯಂತೆ ವಿದ್ಯಾರ್ಥಿಗಳ ನಡುವೆ ಅಗತ್ಯ ದೈಹಿಕ ಅಂತರವನ್ನು ಕಾಯ್ದುಕೊಳ್ಳುವ ರೀತಿಯಲ್ಲಿ ಆಸನ ವ್ಯವಸ್ಥೆಯನ್ನು ಮಾಡಲಾಗುವುದು. ವಿದ್ಯಾರ್ಥಿಗಳು ಪರೀಕ್ಷಾ ಕೆಂದ್ರಗಳಿಗೆ ಬೆಳಗ್ಗೆ 9.30ಕ್ಕೆ ಹಾಜರಾಗಿ ಥರ್ಮಲ್ ಸ್ಕ್ಯಾನರ್ ಮೂಲಕ ವೈದ್ಯಕೀಯ ತಪಾಸಣೆಗೆ ಒಳಪಟ್ಟ ನಂತರವೇ 10.30ಕ್ಕೆ ಪ್ರಾರಂಭವಾಗುವ ಪರೀಕ್ಷೆಗೆ ಹಾಜರಾಗಲಿದ್ದು, ಇದಕ್ಕಾಗಿ ಆರೋಗ್ಯ ಇಲಾಖೆ ಎಲ್ಲ ರೀತಿಯ ನೆರವು ನೀಡಲಿದೆ ಎಂದು ಸಚಿವರು ವಿವರಿಸಿದರು.
ಪ್ರತಿ ವಿದ್ಯಾರ್ಥಿಯು ಮಾಸ್ಕ್ ಮತ್ತು ಸ್ಯಾನಿಟೈಜರ್ ಬಳಸಿ ಪರೀಕ್ಷೆ ಹಾಜರಾಗುವ ವ್ಯವಸ್ಥೆ ಮಾಡಲಾಗಿದ್ದು, ಮಾಸ್ಕ್ ಗಳನ್ನು ಇಲಾಖೆಯ ವತಿಯಿಂದಲೇ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಇತರೆ ಸಂಘ ಸಂಸ್ಥೆಗಳ ಮೂಲಕ ಉಚಿತವಾಗಿ ಪೂರೈಸಲಾಗುವುದು. ಸ್ಯಾನಿಟೈಜರ್ ವಿತರಣೆಗೆ ಸ್ಕೌಟ್ಸ್ ಮತ್ತುಗೈಡ್ಸ್ ಸ್ವಯಂ ಸೇವಕರನ್ನು ಬಳಸಿಕೊಳ್ಳಲಾಗುವುದು. ಸ್ಯಾನಿಟೈಜರ್ಗಳನ್ನು ವಿವಿಧ ಸ್ವಯಂ ಸೇವಾ ಸಂಸ್ಥೆಗಳ ವತಿಯಿಂದ ಉಚಿತವಾಗಿ ರಾಜ್ಯದ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಪೂರೈಸಲಾಗುವುದು ಎಂದು ಸುರೇಶ್ಕುಮಾರ್ ತಿಳಿಸಿದರು.
ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಯವರು ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಅನುಕೂಲವಾಗುವಂತೆ ಹಾಜರಿರಲು ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ ಕೇಂದ್ರಕ್ಕೆ ಆಗಮಿಸುವ ವಿದ್ಯಾರ್ಥಿಗಳಲ್ಲಿ ಆರೋಗ್ಯದ ಸಮಸ್ಯೆಗಳು ಇದ್ದಲ್ಲಿ ಅಂತಹವರನ್ನು ಪ್ರತ್ಯೇಕ ಕೊಠಡಿಗಳಲ್ಲಿ ಪರೀಕ್ಷೆ ಬರೆಸುವ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷೆ ಪ್ರಾರಂಭವಾಗುವ ಒಂದೆರೆಡು ದಿನಗಳ ಮುಂಚೆ ಎಲ್ಲಾ ಸ್ವಚ್ಛತಾ ಕ್ರಮಗಳ ಮೂಲಕ ಸ್ಯಾನಿಟೈಜ್ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.
ಬಹುತೇಕ ಜಿಲ್ಲೆಗಳಲ್ಲಿ ಸರಕಾರದ ಸಮಾಜ ಕಲ್ಯಾಣ ಇಲಾಖೆಯ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್ಗಳು, ವಸತಿ ಶಾಲೆಗಳು ಹಾಗೂ ಕೆಲವೊಂದು ಜಿಲ್ಲೆಗಳಲ್ಲಿ ಖಾಸಗಿ ಸಂಸ್ಥೆಗಳ ಹಾಸ್ಟೆಲ್ಗಳನ್ನು ಕ್ವಾರಂಟೈನ್ ಕೇಂದ್ರಗಳಾಗಿ ಉಪಯೋಗಿಸಿಕೊಳ್ಳಲಾಗುತ್ತಿದೆ. ಆದುದರಿಂದ ಈ ಹಾಸ್ಟೆಲ್ ವಾಸಿಗಳಾಗಿದ್ದ ಮಕ್ಕಳು ತಂತಮ್ಮ ಗ್ರಾಮಗಳಿಗೆ ಹೋಗಿರುವ ಹಿನ್ನೆಲೆಯಲ್ಲಿ ಈಗಾಗಲೇ ಆವರು ನೋಂದಾಯಿಸಿರುವ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಸಾಧ್ಯವಿಲ್ಲ. ಆದುದ್ದರಿಂದ ಅಂತಹ ವಿದ್ಯಾರ್ಥಿಗಳು ಹಾಗೂ ಪೋಷಕರು ತಾವು ಪ್ರಸ್ತುತ ತಂಗಿರುವ ಸ್ಥಳಕ್ಕೆ ಹತ್ತಿರವಿರುವ ಪರೀಕ್ಷಾ ಕೇಂದ್ರದ ಮೂಲಕ ಪರೀಕ್ಷೆಯನ್ನು ಬರೆಯಲು ಅವಕಾಶ ಕಲ್ಪಿಸಲಾಗಿದ್ದು, ಈ ಕುರಿತಂತೆ ಬೇರೆ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿಚ್ಛಿಸುವ ಅಂತಹ ವಿದ್ಯಾರ್ಥಿಗಳು ತಮ್ಮ ಶಾಲೆಯ ಮುಖ್ಯ ಶಿಕ್ಷಕರನ್ನು ಈ ತಿಂಗಳ 25 ರೊಳಗೆ ಸಂಪರ್ಕಿಸಿ ವಿವರಗಳನ್ನು ನೀಡಲು ಅವಕಾಶ ಕಲ್ಪಿಸಲಾಗಿದೆ. ಇದೇರೀತಿ ಯಾವುದಾದರೂ ವಲಸೆ ಕಾರ್ಮಿಕರ ಕುಟುಂಬಗಳ ಮಕ್ಕಳು ತಮ್ಮ ಸ್ವಂತ ಊರುಗಳಿಗೆ ತೆರಳಿದ್ದಲ್ಲಿ ಅಂತಹ ಮಕ್ಕಳಿಗೂ ಸಹ ಪರೀಕ್ಷಾಕೇಂದ್ರದ ಬದಲಾವಣೆಗೆ ಅವಕಾಶ ನೀಡಲಾಗಿದೆ ಎಂದು ಸುರೇಶ್ಕುಮಾರ್ ವಿವರಿಸಿದರು.
ರಾಜ್ಯದ ಗಡಿ ಜಿಲ್ಲೆಗಳಲ್ಲಿ ಬೇರೆ ರಾಜ್ಯಗಳಿಂದ ಬಂದು ಪರೀಕ್ಷೆಯನ್ನು ತೆಗೆದುಕೊಳ್ಳುವ ವಿದ್ಯಾರ್ಥಿಗಳಿಗೆ ಸೂಕ್ತ ವ್ಯವಸ್ಥೆ ಮಾಡಲಾಗುವುದು. ಹಾಗೆಯೇ ಚಂದನ ದೂರದರ್ಶನ ವಾಹಿನಿಯಲ್ಲಿ ಈಗಾಗಲೇ ಪ್ರಸಾರವಾಗುತ್ತಿರುವ ಪುನರ್ ಮನನ ತರಗತಿಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಈ ಕಾರ್ಯಕ್ರಮದ ಅಂತ್ಯದಲ್ಲಿ ಮಾದರಿ ಪ್ರಶ್ನೆ ಪತ್ರಿಕೆಗಳ ಬಗ್ಗೆ ವಿಶೇಷ ತರಗತಿಗಳನ್ನು 3 ದಿನದಅವಧಿಗೆ ರೂಪಿಸಿ ವಿದ್ಯಾರ್ಥಿಗಳನ್ನು ಪರೀಕ್ಷೆ ಬರೆಯುವ ಮನಸ್ಥಿತಿಗೆ ಸಜ್ಜುಗೊಳಿಸಲಾಗುವುದು ಎಂದೂ ಸಚಿವರು ತಿಳಿಸಿದರು.
ಕೊರೋನ ಹಿನ್ನೆಲೆಯಲ್ಲಿ ಎಸೆಸೆಲ್ಸಿ ಪರೀಕ್ಷೆ ನಡೆಸುವ ಸಂಬಂಧದಲ್ಲಿ ಹತ್ತಾರು ಬಾರಿ ಅಧಿಕಾರಿಗಳ ಸಭೆ ಈ ಕುರಿತು ಕೈಗೊಳ್ಳಬಹುದಾದ ಸಾಧ್ಯತೆಗಳ ಕುರಿತು ಚರ್ಚಿಸಲಾಗಿದೆ. ಹಾಗೆಯೇ ರಾಜ್ಯದ ಸಾವಿರಾರು ವಿದ್ಯಾರ್ಥಿಗಳೊಂದಿಗೆ ಖುದ್ದಾಗಿ ಹಾಗೂ ಫೋನ್ ಮೂಲಕ ಚರ್ಚಿಸಲಾಗಿದೆ. ಶಿಕ್ಷಣ ತಜ್ಞರಾದ ಶಿಕ್ಷಣ ತಜ್ಞರಾದ ಡಾ. ಗುರುರಾಜ ಕರ್ಜಗಿ, ಡಾ. ಎಂ.ಕೆ. ಶ್ರೀಧರ್, ಹಿಂದಿನ ಮುಖ್ಯ ಕಾರ್ಯದರ್ಶಿ ಎಸ್.ವಿ. ರಂಗನಾಥ್ ಹಿರಿಯ ಸಾಹಿತಿಗಳಾದ ಬರಗೂರು ರಾಮಚಂದ್ರಪ್ಪ, ಎಸ್.ಜಿ. ಸಿದ್ಧರಾಮಯ್ಯ, ಹಿಂದಿನ ಶಿಕ್ಷಣ ಸಚಿವರುಗಳಾದ ಬಿ.ಕೆ. ಚಂದ್ರಶೇಖರ್, ಬಸವರಾಜ ಹೊರಟ್ಟಿ, ಮಾಜಿ ಸಭಾಪತಿ ಬಿ.ಎಲ್. ಶಂಕರ್, ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ, ಸುತ್ತೂರು, ಸಿದ್ಧಗಂಗಾ ಸೇರಿದಂತೆ ಶಿಕ್ಷಣ ದಾನ ಮಾಡುತ್ತಿರುವ ಹಲವಾರು ಸ್ವಾಮೀಜಿಗಳು ಸೇರಿದಂತೆ ಹಲವರೊಂದಿಗೆ ಚರ್ಚೆ ನಡೆಸಿ ಒಂದು ನಿರ್ಧಾರಕ್ಕೆ ಬರಲಾಯಿತು ಎಂದು ಸಚಿವರು ತಿಳಿಸಿದರು.
ರಾಜ್ಯದ ಎಸೆಸೆಲ್ಸಿ ಮಕ್ಕಳ ಕೋರಿಕೆಯಂತೆ ಬಹಳ ಮೊದಲೇ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ಅವರಿಗೆ ಈ ತನಕ ಅಭ್ಯಸಿಸಿದ್ದನ್ನು ಮತ್ತೊಮ್ಮೆ ಪುನರ್ಮನನ ಮಾಡಲು ಸಾಕಷ್ಟು ಸಮಯ ದೊರೆತಂತಾಗಿದೆ. ಒಂದೆರಡು ದಿನಗಳಲ್ಲಿ ಪರೀಕ್ಷೆಯ ಸವಿವರ ವೇಳಾಪಟ್ಟಿ ಪ್ರಕಟಿಸಲಾಗವುದು ಎಂದು ಸುರೇಶ್ಕುಮಾರ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್, ಸಾಶಿಇ ಆಯುಕ್ತ ಡಾ. ಕೆ.ಜೆ.ಜಗದೀಶ್, ಸರ್ವಶಿಕ್ಷಣ-ಕರ್ನಾಟಕ ರಾಜ್ಯಯೋಜನಾ ನಿರ್ದೇಶಕ ಡಾ. ಎಂ.ಟಿ. ರೇಜು, ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಎಂ. ಕನಗವಲ್ಲಿ, ಕಪ್ರೌಶಿ ಪರೀಕ್ಷಾ ಮಂಡಳಿ ನಿರ್ದೇಶಕಿ ಸುಮಂಗಲಾ ಹಾಜರಿದ್ದರು.







