ಸೋನಿಯಾ ನೇತೃತ್ವದಲ್ಲಿ ವಿಪಕ್ಷ ನಾಯಕರ ಸಭೆ: ಮಾಯಾವತಿ, ಅಖಿಲೇಶ್, ಕೇಜ್ರಿವಾಲ್ ಗೈರು
ಹೊಸದಿಲ್ಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಧ್ಯಕ್ಷತೆಯಲ್ಲಿ ಇಂದು ನಡೆಯಲಿರುವ ವಿಪಕ್ಷ ನಾಯಕರುಗಳ ಸಭೆಯಲ್ಲಿ ಭಾಗವಹಿಸದೇ ಇರಲು ಬಹುಜನ್ ಸಮಾಜ ಪಕ್ಷದ ನಾಯಕಿ ಮಾಯಾವತಿ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಹಾಗೂ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿರ್ಧರಿಸಿದ್ದಾರೆ. ದೇಶದಲ್ಲಿ ಕೊರೋನವೈರಸ್ ಸೋಂಕು ವ್ಯಾಪಕವಾಗಿರುವ ಹಿನ್ನೆಲೆಯಲ್ಲಿ ಪ್ರಸಕ್ತ ಪರಿಸ್ಥಿತಿಯನ್ನು ಅವಲೋಕಿಸಲು ಈ ಸಭೆಯನ್ನು ಕರೆಯಲಾಗಿದೆ.
ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ನಡೆಯಲಿರುವ ಈ ಸಭೆಯಲ್ಲಿ ವಲಸಿಗ ಕಾರ್ಮಿಕರ, ರೈತರ ಸಮಸ್ಯೆಗಳ ಕುರಿತು ಹಾಗೂ ಬಿಜೆಪಿ ಆಡಳಿತವಿರುವ ರಾಜ್ಯಗಳಾದ ಗುಜರಾತ್, ಉತ್ತರ ಪ್ರದೇಶ ಹಾಗೂ ಮಧ್ಯ ಪ್ರದೇಶದಲ್ಲಿ ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿರುವ ಕುರಿತು ಚರ್ಚೆ ನಡೆಯಲಿದೆ.
ದೇಶದಲ್ಲಿ ಲಾಕ್ ಡೌನ್ ಹೇರಲ್ಪಟ್ಟ ನಂತರ ವಿಪಕ್ಷ ನಾಯಕರುಗಳ ಮೊದಲ ಸಭೆ ಇದಾಗಲಿದೆ. ಎನ್ಸಿಪಿ, ತೃಣಮೂಲ ಕಾಂಗ್ರೆಸ್, ಡಿಎಂಕೆ, ಸಿಪಿಐ(ಎಂ), ಸಿಪಿಐ, ಆರ್ಜೆಡಿ, ಐಯುಎಂಎಲ್, ಜಮ್ಮು ಕಾಶ್ಮೀರ್ ನ್ಯಾಷನಲ್ ಕಾನ್ಫರೆನ್ಸ್, ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರೆಟಿಕ್ ಫ್ರಂಟ್, ಎಲ್ಜೆಡಿ ಹಾಗೂ ರಿವೊಲ್ಯೂಷನರಿ ಸೋಶಲಿಸ್ಟ್ ಪಾರ್ಟಿ ಈ ಸಭೆಯಲ್ಲಿ ಭಾಗವಹಿಸಲಿವೆ. ಶಿವಸೇನೆಯ ನಾಯಕ ಹಾಗೂ ಮಹಾರಾಷ್ಟ್ರ ಸೀಎಂ ಉದ್ಧವ್ ಠಾಕ್ರೆ ಕೂಡ ಈ ವೀಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಭಾಗವಹಿಸಲಿದ್ದಾರೆ.