ರಾಜ್ಯಕ್ಕೆ ಕೊರೋನಾಘಾತ: ಸೋಂಕಿಗೆ ಮತ್ತೆ ನಾಲ್ವರು ಬಲಿ; ಒಂದೇ ದಿನ 257 ಪ್ರಕರಣಗಳು ಪಾಸಿಟಿವ್
ಬೆಂಗಳೂರು, ಜೂ.3: ಕರ್ನಾಟಕದಲ್ಲಿ ಒಂದೇ ದಿನ ಮತ್ತೆ 257 ಮಂದಿಗೆ ಕೊರೋನ ವೈರಸ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 4,320ಕ್ಕೆ ಏರಿಕೆಯಾಗಿದೆ. ಬೆಂಗಳೂರು ನಗರದಲ್ಲಿ ಇಬ್ಬರು, ಗದಗದಲ್ಲಿ ಪುರುಷರೊಬ್ಬರು ಮತ್ತು ದಾವಣಗೆರೆ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಕೊರೋನ ಸೋಂಕಿನಿಂದ ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 57ಕ್ಕೆ ಏರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇಂದು ಸಂಜೆ ಬಿಡುಗಡೆಗೊಳಿಸಿದ ಬುಲೆಟಿನ್ ನಲ್ಲಿ ಬುಧವಾರ ಸಂಜೆ 5 ಗಂಟೆಯಿಂದ ಗುರುವಾರ ಸಂಜೆ 5 ಗಂಟೆವರೆಗೆ 257 ಕೋವಿಡ್ ಪ್ರಕರಣಗಳು ಪಾಸಿಟಿವ್ ಬಂದಿರುವುದಾಗಿ ಮಾಹಿತಿ ನೀಡಲಾಗಿದೆ.
ಜ್ವರ, ಕೆಮ್ಮು ಮತ್ತು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಬೆಂಗಳೂರು ನಗರ ಜಿಲ್ಲೆಯ 65 ವರ್ಷದ ಮಹಿಳೆಯೊಬ್ಬರು ಜೂ.3 ರಂದು ಮೃತಪಟ್ಟಿದ್ದಾರೆ. ಜಿಲ್ಲೆಯ ಮತ್ತೊಬ್ಬರು ಮಹಿಳೆ(65 ವರ್ಷ) ಜ್ವರ, ಮಧುಮೇಹ ಮತ್ತು ಉಸಿರಾಟದ ತೊಂದರೆಯಿಂದ ಮೇ.3 ರಂದು ನಿಗದಿತ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ದಾವಣಗೆರೆ ಜಿಲ್ಲೆಯ 83 ವರ್ಷದ ಮಹಿಳೆ ಎದೆನೋವಿನಿಂದ ಮೇ.31 ರಂದು ಆಸ್ಪತ್ರೆಗೆ ದಾಖಲಾಗಿದ್ದು, ಅಂದೇ ಮೃತಪಟ್ಟಿದ್ದಾರೆ. ಅವರ ಕೊರೋನ ವರದಿಯು ಪಾಸಿಟಿವ್ ಬಂದಿದೆ. ಮಧುಮೇಹದಿಂದ ಬಳಲುತ್ತಿದ್ದ ಗದಗ ಜಿಲ್ಲೆಯ 44 ವರ್ಷದ ವ್ಯಕ್ತಿಯೊಬ್ಬರು ಮೇ.2 ರಂದು ಆಸ್ಪತ್ರೆಗೆ ದಾಖಲಾಗಿದ್ದು, ಅಂದೇ ಮೃತಪಟ್ಟಿದ್ದಾರೆ. ಅವರ ಗಂಟಲ ದ್ರವದ ಮಾದರಿಯಲ್ಲಿ ಕೊರೋನ ಪಾಸಿಟಿವ್ ಬಂದಿದೆ.
ಸೋಂಕು ಖಚಿತಗೊಂಡ ಪ್ರಕರಣಗಳ ಪೈಕಿ ಉಡುಪಿ 92, ರಾಯಚೂರು 88, ಮಂಡ್ಯ ಮತ್ತು ಹಾಸನ ಜಿಲ್ಲೆಯಲ್ಲಿ ತಲಾ 15, ದಾವಣಗೆರೆ 13, ಬೆಳಗಾವಿ 12, ಬೆಂಗಳೂರು ನಗರ 9, ದಕ್ಷಿಣ ಕನ್ನಡ 4, ಗದಗ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ತಲಾ 2, ಬಳ್ಳಾರಿ, ಮೈಸೂರು, ವಿಜಯಪುರ, ತುಮಕೂರು ಮತ್ತು ಹಾವೇರಿ ಜಿಲ್ಲೆಯಲ್ಲಿ ತಲಾ ಒಂದೊಂದು ಪ್ರಕರಣಗಳು ಪಾಸಿಟಿವ್ ಬಂದಿದೆ.
ಒಟ್ಟಾರೆ ರಾಜ್ಯದಲ್ಲಿ 4,320 ಕೊರೋನ ಸೋಂಕಿತರ ಪೈಕಿ 1,610 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಇದರಲ್ಲಿ ಇಂದು ಒಂದೇ ದಿನ 106 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ ಇದುವರೆಗೆ 57 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, 2,631 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.