ರಾಜ್ಯಸಭೆ ಚುನಾವಣೆ: ನಾಲ್ವರು ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ; ಅವಿರೋಧ ಆಯ್ಕೆ ಹಾದಿ ಸುಗಮ

ಬೆಂಗಳೂರು, ಜೂ. 10: ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಜೂ.19ರಂದು ನಡೆಯಲಿರುವ ಚುನಾವಣೆಗೆ ಸಲ್ಲಿಕೆಯಾಗಿದ್ದ ಐದು ಮಂದಿ ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ ಇಂದು ನಡೆಸಿದ್ದು, ಸೂಚಕರ ಸಹಿ ಇಲ್ಲದ ಕಾರಣ ಪಕ್ಷೇತರ ಅಭ್ಯರ್ಥಿ ನಾಮಪತ್ರ ತಿರಸ್ಕೃತವಾಗಿದೆ.
ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಬಿಜೆಪಿಯ ಈರಣ್ಣ ಕಡಾಡಿ ಹಾಗೂ ಅಶೋಕ್ ಗಸ್ತಿ ಅವರ ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಚುನಾವಣಾಧಿಕಾರಿಯೂ ಆಗಿರುವ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಬುಧವಾರ ಮಾಧ್ಯಮಗಳಿಗೆ ಮಾಹಿತಿ ನೀಡಿದರು.
ನಾಮಪತ್ರಕ್ಕೆ ಶಾಸಕರು ಸೂಚಕರಾಗಿ ಸಹಿ ಹಾಕದ ಕಾರಣಕ್ಕೆ ಪಕ್ಷೇತರ ಅಭ್ಯರ್ಥಿ ಸಂಗಮೇಶ್ ಚಿಕ್ಕನರಗುಂದ ಅವರ ಉಮೇದುವಾರಿಕೆ ತಿರಸ್ಕೃತಗೊಂಡಿದೆ. ಹೀಗಾಗಿ ರಾಜ್ಯಸಭೆ ಚುನಾವಣಾ ಅಖಾಡದಲ್ಲಿ ಬಿಜೆಪಿಯ ಇಬ್ಬರು, ಜೆಡಿಎಸ್ ಹಾಗೂ ಕಾಂಗ್ರೆಸ್ ತಲಾ ಒಬ್ಬರು ಸೇರಿದಂತೆ ನಾಲ್ವರು ಅಭ್ಯರ್ಥಿಗಳ ಕಣದಲ್ಲಿ ಉಳಿದಿದ್ದಾರೆ ಎಂದು ವಿಶಾಲಾಕ್ಷಿ ತಿಳಿಸಿದರು.
ನಾಮಪತ್ರ ಹಿಂಪಡೆಯಲು ಜೂ.12ಕ್ಕೆ ಕೊನೆಯ ದಿನವಾಗಿದೆ. ಅಲ್ಲಿಯವರೆಗೂ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ವಾಪಸ್ ಪಡೆಯಲು ಅವಕಾಶವಿರುತ್ತದೆ. ಆ ಬಳಿಕ ಕಣದಲ್ಲಿ ನಾಲ್ವರೇ ಅಭ್ಯರ್ಥಿಗಳೇ ಉಳಿದರೆ ಅದೇ ದಿನ ಸಂಜೆ ಅವಿರೋಧ ಆಯ್ಕೆಯ ಬಗ್ಗೆ ಅಧಿಕೃತವಾಗಿ ಚುನಾವಣಾಧಿಕಾರಿ ಪ್ರಕಟಿಸಲಿದ್ದಾರೆ.







