ಡಿಕೆಶಿ ನೇತೃತ್ವ : ಕೆಪಿಸಿಸಿ ನೂತನ ಕಚೇರಿಯಲ್ಲಿ ಹೋಮ ಹವನ
![ಡಿಕೆಶಿ ನೇತೃತ್ವ : ಕೆಪಿಸಿಸಿ ನೂತನ ಕಚೇರಿಯಲ್ಲಿ ಹೋಮ ಹವನ ಡಿಕೆಶಿ ನೇತೃತ್ವ : ಕೆಪಿಸಿಸಿ ನೂತನ ಕಚೇರಿಯಲ್ಲಿ ಹೋಮ ಹವನ](https://www.varthabharati.in/sites/default/files/images/articles/2020/06/14/247292-1592125597.jpeg)
ಬೆಂಗಳೂರು: ಕ್ವೀನ್ಸ್ ರಸ್ತೆಯಲ್ಲಿ ನಿರ್ಮಾಣ ಹಂತದಲ್ಲಿರುವ ಕೆಪಿಸಿಸಿ ನೂತನ ಕಟ್ಟಡದಲ್ಲಿ ರವಿವಾರ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಹೋಮ ಹವನ ನಡೆಯಿತು.
ಈ ಕಟ್ಟಡದಲ್ಲಿ ಶಿವಕುಮಾರ್ ಅವರು ಪಕ್ಷದ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ. ಜುಲೈ 2ರಂದು ಅವರು ಅಧಿಕೃತವಾಗಿ ಅಧಿಕಾರ ಸ್ವೀಕರಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಈ ಕಾರಣದಿಂದಲೇ ಪೂಜಾ ಕಾರ್ಯಗಳನ್ನು ನೆರವೇರಿಸಿದ್ದಾರೆ.
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಪಕ್ಷದ ಮುಖಂಡರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಸಿದ್ದರಾಮಯ್ಯ, ಎಸ್.ಆರ್. ಪಾಟೀಲ, ಮಲ್ಲಿಕಾರ್ಜುನ ಖರ್ಗೆ, ಜಿ. ಪರಮೇಶ್ವರ ಮತ್ತಿತರ ಮುಖಂಡರು ಮತ್ತು ಕಾಂಗ್ರೆಸ್ ಕಾರ್ಯಕರ್ತರ ಹೆಸರಿನಲ್ಲಿ ಶಿವಕುಮಾರ್ ಸಂಕಲ್ಪ ಮಾಡಿದರು.
ನಂತರ ಮಾತನಾಡಿದ ಡಿಕೆಶಿ ‘ಎಲ್ಲ ವಿಘ್ನಗಳನ್ನು ನಿವಾರಣೆ ಮಾಡಲಿ ಎಂದು ಶುಭ ಮೂಹೂರ್ತದಲ್ಲಿ ಪೂಜೆ ಮಾಡಿದ್ದೇನೆ. ಎರಡು ವರ್ಷಗಳಿಂದ ಕಟ್ಟಡದ ಕೆಲಸ ನಿಂತಿದೆ. ಎಲ್ಲರ ಒಳಿತಿಗಾಗಿ ಹೋಮ ಮಾಡಿದ್ದೇನೆ. ರಾಜ್ಯಕ್ಕೆ, ನಮ್ಮ ಪಕ್ಷದ ನಾಯಕರು, ಕಾರ್ಯಕರ್ತರಿಗೆ ಒಳ್ಳೆಯದು ಆಗಲಿ ಎಂದು ಪ್ರಾರ್ಥನೆ ಮಾಡಿದ್ದೇನೆ. ರಾಜ್ಯ ಆದಷ್ಟು ಬೇಗ ಕೊರೋನದಿಂದ ಮುಕ್ತವಾಗಲಿ’ ಎಂದರು.