ಮಗನ ಮದುವೆಯಲ್ಲಿ ನಿಯಮ ಉಲ್ಲಂಘನೆ ಆರೋಪ: ಶಾಸಕ ಪರಮೇಶ್ವರ ನಾಯ್ಕ ವಿರುದ್ಧ ಪ್ರಕರಣ ದಾಖಲು

ಬಳ್ಳಾರಿ, ಜೂ.15: ಪುತ್ರನ ಮದುವೆಯಲ್ಲಿ ಕೊರೋನ ಎಸ್ಒಪಿ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಹೂವಿನಹಡಗಲಿ ಶಾಸಕ ಪಿ.ಟಿ.ಪರಮೇಶ್ವರ ನಾಯ್ಕ ಅವರ ವಿರುದ್ಧ ಬಳ್ಳಾರಿ ಜಿಲ್ಲೆ ಹರಪನಹಳ್ಳಿ ತಾಲೂಕಿನ ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ರ ಭರತ್, ತಂದೆ ಪರಮೇಶ್ವರ್ ನಾಯ್ಕ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಹರಪನಹಳ್ಳಿ ತಹಶೀಲ್ದಾರ್ ನಾಗವೇಣಿ ಅವರ ದೂರಿನ ಮೇರೆಗೆ ದೂರು ದಾಖಲಿಸಿಕೊಳ್ಳಲಾಗಿದೆ.
ಲಕ್ಷ್ಮಿಪುರದಲ್ಲಿ ಪರಮೇಶ್ವರ್ ನಾಯ್ಕ್ ಅವರ ಪುತ್ರನ ಮದುವೆ ಸಮಾರಂಭ ನೆರವೇರಿತ್ತು. ಈ ಸಮಾರಂಭದಲ್ಲಿ ಸಚಿವ ಶ್ರೀರಾಮುಲು, ಮಾಜಿ ಸಿಎಂ ಸಿದ್ದರಾಮಯ್ಯ, ಡಾ.ಜಿ.ಪರಮೇಶ್ವರ್, ಪ್ರಿಯಾಂಕ್ ಖರ್ಗೆ ಸೇರಿ ಇನ್ನಿತರ ನಾಯಕರು, ಸಾವಿರಾರು ಮಂದಿ ಭಾಗಿಯಾಗಿದ್ದರು.
ಮದುವೆಯಲ್ಲಿ 50ಕ್ಕಿಂತ ಹೆಚ್ಚು ಮಂದಿ ಸೇರಬಾರದೆಂಬ ಪೊಲೀಸರ ನಿಯಮವಿದ್ದರೂ ಸಾವಿರಾರು ಮಂದಿ ಭಾಗಿಯಾಗಿದ್ದರು. ಅಲ್ಲದೆ, ಸುರಕ್ಷತೆ ಅಂತರ ಕಾಯ್ದುಕೊಳ್ಳದೇ ನಿಯಮ ಉಲ್ಲಂಘಿಸಿಸಲಾಗಿದೆ ಎಂದು ಆರೋಪಿಸಲಾಗಿದೆ.
‘ಕೊರೋನ ಹಿನ್ನೆಲೆಯಲ್ಲಿ ಕಡಿಮೆ ಸಂಖ್ಯೆಯಲ್ಲಿ ಜನ ಬರುವಂತೆ ಮನವಿ ಮಾಡಿದ್ದರೂ ಭಾರೀ ಸಂಖ್ಯೆಯಲ್ಲಿ ಬಂದಿದ್ದರಿಂದ ಚಿಕ್ಕ ವ್ಯತ್ಯಾಸವಾಗಿದೆ.’
-ಪರಮೇಶ್ವರ ನಾಯ್ಕ್, ಮಾಜಿ ಸಚಿವ







