ದ.ಕ. ಜಿಲ್ಲಾಧಿಕಾರಿ ಕಚೇರಿ ಮುಂದೆ ಸಿಪಿಎಂ ಪ್ರತಿಭಟನೆ
ಮಂಗಳೂರು, ಜೂ.16: ಕೋವಿಡ್-19 ನಿಗ್ರಹದಲ್ಲಿ ಕೇಂದ್ರ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಸಿಪಿಎಂ ಮಂಗಳೂರು ನಗರ ಉತ್ತರ ಮತ್ತು ದಕ್ಷಿಣ ಸಮಿತಿಯ ವತಿಯಿಂದ ಮಂಗಳವಾರ ದ.ಕ.ಜಿಲ್ಲಾಧಿಕಾರಿ ಕಚೇರಿಯ ಮುಂದೆ ಪ್ರತಿಭಟನೆ ನಡೆಯಿತು.
ಆಹಾರ ಧಾನ್ಯಗಳ ವಿತರಣೆ, ನೇರ ನಗದು ವರ್ಗಾವಣೆ, ಕಾರ್ಮಿಕರಿಗೆ ವೇತನ, ಕೆಲಸದ ಭದ್ರತೆ, ಉದ್ಯೋಗ ಖಾತ್ರಿ ಯೋಜನೆಯ ವಿಸ್ತರಣೆ, ಸಾರ್ವಜನಿಕ ಉದ್ದಿಮೆಗಳ ರಕ್ಷಣೆ ಮುಂತಾದ ಬೇಡಿಕೆಗಳನ್ನು ಮುಂದಿಟ್ಟು ಸಿಪಿಎಂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಸಿಪಿಎಂ ದ.ಕ.ಜಿಲ್ಲಾ ಕಾರ್ಯದರ್ಶಿ ಮಂಡಳಿಯ ಸದಸ್ಯ ಸುನೀಲ್ ಕುಮಾರ್ ಬಜಾಲ್ ಮಾತನಾಡಿ ಕೋವಿಡ್-19 ನಿಗ್ರಹಿಸುವಲ್ಲಿ ಕೇಂದ್ರದ ನರೇಂದ್ರ ಮೋದಿ ಸರಕಾರ ಸಂಪೂರ್ಣ ವಿಫಲವಾಗಿದೆ. ಲಾಕ್ಡೌನ್ ಸಂದರ್ಭ ಜನರ ಜೀವ ರಕ್ಷಣೆ ಮಾಡುವ ಬದಲು ಕಾರ್ಪೊರೇಟ್ ಕಂಪೆನಿಗಳ ಹಿತ ಕಾಯುವ ಮೂಲಕ ದೇಶ ವಿರೋಧಿಯಾಗಿ ವರ್ತಿಸಿದೆ. ಕಳೆದ 3 ತಿಂಗಳಿನಿಂದ ಜನತೆ ಕೆಲಸವಿಲ್ಲದೆ, ಕೈಯಲ್ಲಿ ಕಾಸಿಲ್ಲದೆ, ಆಹಾರಕ್ಕಾಗಿ ಪರದಾಡುವಂತಾಗಿದೆ. ಜನಸಾಮಾನ್ಯರ ಬಗ್ಗೆ ಕಿಂಚಿತ್ತೂ ಕಾಳಜಿ ವಹಿಸದ ಸರಕಾರ ತನ್ನ ಕೀಳು ಮಟ್ಟದ ರಾಜಕೀಯದಲ್ಲೇ ಮಗ್ನವಾಗಿದೆ. ದೇಶವು ಗಂಭೀರ ಸ್ಥಿತಿಯಲ್ಲಿದ್ದಾಗ ನಾಪತ್ತೆಯಾಗಿದ್ದ ಗೃಹ ಸಚಿವರು ಈಗ ಕೆಲವು ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ ಎಂಬ ಸುದ್ದಿ ತಿಳಿದು ಮತ್ತೆ ಪ್ರತ್ಯಕ್ಷರಾಗಿದ್ದಾರೆ. ಕೊರೋನ ವೈರಸ್ ವ್ಯಾಪಕವಾಗಿ ದೇಶದಲ್ಲಿ ಹರಡುತ್ತಿದ್ದರೂ ಜನತೆಯ ಜೀವವನ್ನು ರಕ್ಷಣೆ ಮಾಡುವ ಬದಲು ಜನರ ಬದುಕಿನಲ್ಲಿ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿದರು.
ತೆರಿಗೆ ವ್ಯಾಪ್ತಿಯಿಂದ ಹೊರಗಿರುವ ಕೋಟ್ಯಂತರ ಕುಟುಂಬಗಳಿಗೆ ಮಾಸಿಕ 7,500ರೂ.ನೀಡಬೇಕು ಮತ್ತು ಮುಂದಿನ 6 ತಿಂಗಳವರೆಗೆ ನೇರ ನಗದು ವರ್ಗಾವಣೆ ಮಾಡಬೇಕು, ಪ್ರತೀ ಕುಂಟುಂಬಕ್ಕೆ ಮಾಸಿಕ 10 ಕೆಜಿ ಆಹಾರ ಧಾನ್ಯಗಳನ್ನು ನೀಡಬೇಕು,ಉದ್ಯೋಗ ಖಾತ್ರಿ ಯೋಜನೆ ಯನ್ನು ವಿಸ್ತರಿಸಬೇಕು, ಕಾರ್ಮಿಕರಿಗೆ ವೇತನ ಹಾಗೂ ಕೆಲಸದ ಭದ್ರತೆ ನೀಡಬೇಕು ಇತ್ಯಾದಿ ಬೇಡಿಕೆಗಳನ್ನು ಹೊಂದಿರುವ ಮನವಿಯನ್ನು ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಸರಕಾರಕ್ಕೆ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರಾದ ಜೆ ಬಾಲಕೃಷ್ಣ ಶೆಟ್ಟಿ, ವಾಸುದೇವ ಉಚ್ಚಿಲ್, ದಯಾನಂದ ಶೆಟ್ಟಿ, ಸಂತೋಷ್ ಬಜಾಲ್, ಜಯಂತಿ ಬಿ. ಶೆಟ್ಟಿ, ಭಾರತಿ ಬೋಳಾರ, ಸುರೇಶ್ ಬಜಾಲ್, ಬಾಬು ದೇವಾಡಿಗ, ನವೀನ್ ಕೊಂಚಾಡಿ, ಅಶೋಕ್ ಶ್ರಿಯಾನ್, ಸಾಮಾಜಿಕ ಹೋರಾಟಗಾರ ಜೆರಾಲ್ಡ್ ಟವರ್ ಮುಂತಾದವರು ಪಾಲ್ಗೊಂಡಿದ್ದರು.







