ಪಾದರಾಯನಪುರ ಗಲಾಟೆ ಪ್ರಕರಣ: ಆರೋಪಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು
ಬೆಂಗಳೂರು, ಜೂ.16: ಪಾದರಾಯನಪುರದಲ್ಲಿ ನಡೆದ ಆರೋಗ್ಯ, ಬಿಬಿಎಂಪಿ ಹಾಗೂ ಪೊಲೀಸ್ ಸಿಬ್ಬಂದಿ ಮೇಲೆ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿದ್ದ ಮತ್ತೊಬ್ಬ ಆರೋಪಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಜಾಮೀನು ಕೋರಿ ಆರೋಪಿ ಇರ್ಫಾನ್ ಅಹ್ಮದ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಜಾಮೀನು ನೀಡಿ ಆದೇಶಿಸಿತು.
ಆರೋಪಿಯು ತಲಾ ಒಂದು ಲಕ್ಷ ರೂ.ಮೊತ್ತದ ವೈಯಕ್ತಿಕ ಬಾಂಡ್ ಒದಗಿಸಬೇಕು. ಅಷ್ಟೇ ಮೊತ್ತದ ಇಬ್ಬರ ಭದ್ರತಾ ಖಾತರಿ ನೀಡಬೇಕು. ಸಾಕ್ಷ್ಯ ನಾಶಪಡಿಸಬಾರದು. ವಿಚಾರಣಾ ನ್ಯಾಯಾಲಯದ ಅನುಮತಿಯಿಲ್ಲದೆ ಅದರ ವ್ಯಾಪ್ತಿ ಪ್ರದೇಶದಿಂದ ಹೊರ ಹೋಗಬಾರದು ಎಂದು ಕೋರ್ಟ್ ಷರತ್ತು ವಿಧಿಸಿ, ಜಾಮೀನು ಮಂಜೂರು ಮಾಡಿದೆ.
ಕಾರಾಗೃಹದಿಂದ ಬಿಡುಗಡೆ ಆದ ಬಳಿಕ ಅರ್ಜಿದಾರರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಬೇಕೆಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.
Next Story