ದೂರ ಸಂಪರ್ಕ ವ್ಯವಸ್ಥೆ ಸುಧಾರಣೆ ಕ್ರಮ: ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು, ಜೂ. 17: `ವರ್ಕ್ ಫ್ರಮ್ ಎನಿವೇರ್' ಎಂಬ ಪರಿಕಲ್ಪನೆ ಜನಪ್ರಿಯವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ದೂರ ಸಂಪರ್ಕ ವ್ಯವಸ್ಥೆ ಸುಧಾರಣೆಗೆ ಸಂಬಂಧಿಸಿದಂತೆ ಭಾಗೀದಾರರೊಂದಿಗೆ ಶೀಘ್ರವೇ ಸಭೆ ಕರೆದು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ಬುಧವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಅವರು, ಸರಕಾರಿ ಹಾಗೂ ಖಾಸಗಿ ವಲಯದ ದೂರಸಂಪರ್ಕ ಜಾಲ ಸುಧಾರಣೆಯಿಂದ ಸರಕಾರಿ ಕಚೇರಿಗಳಲ್ಲಿ ಹಾಗೂ ಇತರೆಡೆಗಳಲ್ಲಿ ಕಾರ್ಯನಿರ್ವಹಣೆಯ ವೇಗ ಹೆಚ್ಚಲಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಕೊರೋನ ಸೋಂಕಿನ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ ಹಾಗೂ ಇಲಾಖೆ ಅಧಿಕಾರಿಗಳು ನಿರಂತರವಾಗಿ ಉದ್ಯಮದವರ ಸಂಪರ್ಕದಲ್ಲಿದ್ದು, ನೈತಿಕ ಬೆಂಬಲ ಸೂಚಿಸಿದ್ದಾರೆ. ಹಲವು ಸಾರ್ಟ್ಅಪ್ಗಳು ಕೋವಿಡ್-19 ಲಾಕ್ಡೌನ್ ಸಂದರ್ಭದಲ್ಲಿ ಜನರಿಗೆ ನೆರವಾಗಲು ಹಾಗೂ ಕೋವಿಡ್ ನಿರ್ವಹಣೆಗೆ ಮಹತ್ತರ ಕೊಡುಗೆ ನೀಡಿದ್ದಾರೆ ಎಂದು ಯಡಿಯೂರಪ್ಪ ಶ್ಲಾಘಿಸಿದರು.
ಮುಂದಿನ ದಿನಗಳಲ್ಲಿ ವೈದ್ಯಕೀಯ ಉಪಕರಣ ಹಾಗೂ ತಂತ್ರಜ್ಞಾನ ವಲಯ ಸ್ಥಾಪಿಸುವ ವಿಷಯ ಸರಕಾರದ ಪರಿಶೀಲನೆ ಹಂತದಲ್ಲಿದ್ದು, ಈ ಬಗ್ಗೆ ಸರಕಾರ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಭರವಸೆ ನೀಡಿದರು. ಸಭೆಯಲ್ಲಿ ಡಿಸಿಎಂ ಡಾ.ಅಶ್ವತ್ಥನಾರಾಯಣ, ಸರಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್, ಇಲಾಖೆ ಮುಖ್ಯಕಾರ್ಯದರ್ಶಿ ಡಾ.ರಮಣರೆಡ್ಡಿ ಹಾಜರಿದ್ದರು.







