ಸರಕಾರಿ ಸಾಲ-ಸೌಲಭ್ಯ ಪಡೆದು ಆರ್ಥಿಕವಾಗಿ ಸಬಲರಾಗಿ: ಡಿ.ಎಸ್.ಅರುಣ್

ಚಿಕ್ಕಮಗಳೂರು. ಜೂ.17: ಆರ್ಯ ವೈಶ್ಯ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗಾಗಿ ನಿಗಮಕ್ಕೆ ಸರ್ಕಾರದಿಂದ 15 ಕೋಟಿ ರೂ.ಗಳ ಅನುದಾನ ಬಿಡುಗಡೆ ಮಾಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್ ಹೇಳಿದರು
ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆ ಅಡಿ ಅರ್ಹಗೊಂಡ ಸಮುದಾಯದ ಫಲಾನುಭವಿಗಳಿಗೆ ಸಾಲ ಮಂಜೂರಾತಿ ಪತ್ರವನ್ನು ವಿತರಿಸಿ ಮಾತನಾಡಿದ ಅವರು, ಆರ್ಯವೈಶ್ಯ ಸಮುದಾಯಗಳ ಅಭಿವೃದ್ಧಿಗೆ ಸರ್ಕಾರವು ಬದ್ದವಾಗಿದ್ದು ಅರಿವು ಶೈಕ್ಷಣಿಕ ಸಾಲ ಯೋಜನೆ ಹಾಗೂ ಸ್ವ-ಉದ್ಯೋಗ ಯೋಜನೆ ಅಡಿಯಲ್ಲಿ ನೇರ ಸಾಲ ನೀಡಲು ಆನ್ಲೈನ್ನಲ್ಲಿ ಅರ್ಜಿ ಆಹ್ವಾನಿಸುವ ಮೂಲಕ ಅರ್ಹ ಫಲಾನುಭವಿಗಳಿಗೆ ಸಾಲಸೌಲಭ್ಯ ನೀಡಲಾಗುತ್ತಿದೆ. ಗರಿಷ್ಟ 1 ಲಕ್ಷದಂತೆ ಶೇ.2 ರ ಬಡ್ಡಿದರದಲ್ಲಿ ಸಾಲಸೌಲಭ್ಯ ಒದಗಿಸಲಾಗುತ್ತಿದ್ದು ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.
ಆರ್ಯ ವೈಶ್ಯ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗಾಗಿ ಸರ್ಕಾರಕ್ಕೆ 15 ಕೋಟಿ ರೂಗಳ ಪ್ರಸ್ತಾವನೆ ಸಲ್ಲಿಸಲಾಗಿತ್ತು 2019-20 ನೇ ಸಾಲಿಗೆ 10 ಕೋಟಿ ರೂ. ಬಿಡುಗಡೆಗೊಳಿಸಿತ್ತು ಆದರೆ ಕೋವಿಡ್-19 ಕಾರಣದಿಂದಾಗಿ ಶೇ.50 ರಷ್ಟು ಅನುದಾನ ಕಡಿತಗೊಳಿಸಿ 5 ಕೋಟಿ ರೂ. ಗಳ ಅನುದಾನ ಮಾತ್ರ ಬಿಡುಗಡೆ ಮಾಡಿದೆ ಅದರ ಸೌಲಭ್ಯವನ್ನು ಸಮುದಾಯ ಪಡೆದುಕೊಂಡು ಆರ್ಥಿಕವಾಗಿ ಸಬಲರಾಗುವಂತೆ ತಿಳಿಸಿದರು.
ಕೊರೋನಾ ಲಾಕ್ಡೌನ್ ಕಾರಣದಿಂದಾಗಿ ಬೀದಿ ಬದಿ ಹಾಗೂ ಸಣ್ಣಪುಟ್ಟ ವ್ಯಾಪಾರಸ್ಥರಿಗೆ ಆರ್ಥಿಕ ನಷ್ಟ ಉಂಟಾಗಿದೆ ಹಾಗಾಗಿ ಸರ್ಕಾರದ ವಿವಿಧ ಯೋಜನೆಗಳಿಂದ ಸಾಲಸೌಲಭ್ಯ ಒದಗಿಸಲಾಗುತ್ತಿದೆ 3 ಲಕ್ಷ ಆದಾಯ ಮಿತಿ ಹೊಂದಿದ 18 ರಿಂದ 45 ವರ್ಷ ವಯೋಮಿತಿಯ ಅರ್ಜಿದಾರರಿಗೆ ಸಾಲ ಒದಗಿಸಲಾಗುತ್ತಿದೆ ಜೊತೆಗೆ ಆರ್ಯವೈಶ್ಯ ಸಮುದಾಯಕ್ಕೆ ನಮೂನೆ ಜಿನಲ್ಲಿ ಜಾತಿ ಮತ್ತು ಆದಾಯ ಪ್ರಮಾಣಪತ್ರ ವಿತರಣೆಗೆ ಕಮ ಕೈಗೊಳ್ಳಲಾಗಿದೆ ಎಂದರು.
ರಾಜ್ಯದಲ್ಲಿ ಒಟ್ಟು 1650 ಅರ್ಜಿಗಳು ಸಲ್ಲಿಕೆಯಾಗಿದ್ದು ಅದರಲ್ಲಿ ಹೆಚ್ಚಾಗಿ ಸ್ವ-ಉದ್ಯೋಗ ನೇರ ಸಾಲಕ್ಕೆ ಸಂಬಂಧಿಸಿವೆ ಜಿಲ್ಲೆಯಲ್ಲಿ ಒಟ್ಟು 5 ಜನ ಫಲಾನುಭವಿಗಳನ್ನು ಗುರ್ತಿಸಿದ್ದು ಮುಂದಿನ ದಿನಗಳಲ್ಲಿ ಹೆಚ್ಚು ಅರ್ಜಿ ಸಲ್ಲಿಕೆಯಾಗುವಂತೆ ಜಾಗೃತಿ ಮೂಡಿಸಬೇಕಿದೆ ಎಂದರು.
ಕೌಶಲ್ಯಭಿವೃದ್ಧಿ ಕೆಲಸಗಳ ಜೊತೆಗೆ ವಿವಿಧ ವೃತ್ತಿಪರ ಶಿಕ್ಷಣಕ್ಕೆ ನಿಗಮದಿಂದ ಸಾಲಸೌಲಭ್ಯ ನೀಡಲಾಗುತ್ತಿದ್ದು ಸಾಲ ಪಡೆದ ಬಳಿಕ ಸರಿಯಾದ ಕಾಲಕ್ಕೆ ಮರುಪಾವತಿ ಮಾಡುವ ಮೂಲಕ ಮತ್ತಷ್ಟು ಫಲಾನುಭವಿಗಳಿಗೆ ಅನುಕೂಲ ಮಾಡಿಕೊಡುವಂತೆ ಕೇಳಿಕೊಂಡರು ಜೊತೆಗೆ ಮುಂದಿನ ದಿನಗಳಲ್ಲಿ ಮತ್ತಷ್ಟು ಅನುದಾನ ನೀಡುವ ಮೂಲಕ ಸಮಾಜದ ಅಭಿವೃದ್ಧಿಗೆ ಶ್ರಮಿಸುವುದಾಗಿ ಹೇಳಿದರು. ಇದೇ ವೇಳೆ ವಿವಿಧ ಯೋಜನೆಗಳ ಅಡಿಯಲ್ಲಿ ಅರ್ಹಗೊಂಡ ಫಲಾನುಭವಿಗಳಿಗೆ ಚೆಕ್ ವಿತರಣೆ ಮಾಡಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಕರ್ನಾಟಕ ಆರ್ಯವೈಶ್ಯ ನಿಗಮದ ಅಧ್ಯಕ್ಷ ಸತೀಶ್, ಉಪಾಧ್ಯಕ್ಷ ದಿನೇಶ್ ಗುಪ್ತಾ, ಜಿಲ್ಲಾ ವ್ಯವಸ್ಥಾಪಕ ರಾಕೇಶ್, ಮುಖಂಡ ಮಧುಕುಮಾರ್ ರಾಜ್ ಅರಸ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.







