ಪಾಕಿಸ್ತಾನ ಝಿಂದಾಬಾದ್ ಘೋಷಣೆ: ಅಮೂಲ್ಯ ವಿರುದ್ಧ ಎನ್ಐಎ ತನಿಖೆಗೆ ಕೋರಿ ಹೈಕೋರ್ಟ್ ಗೆ ಅರ್ಜಿ

ಬೆಂಗಳೂರು, ಜೂ.19: ಸಿಎಎ ಪ್ರತಿಭಟನೆಯಲ್ಲಿ ಪಾಕಿಸ್ತಾನ ಝಿಂದಾಬಾದ್ ಘೋಷಣೆ ಕೂಗಿ ದೇಶದ್ರೋಹ ಆರೋಪಕ್ಕೆ ಸಿಲುಕಿರುವ ಅಮೂಲ್ಯ ಲಿಯೋನ ಪ್ರಕರಣವನ್ನು ಎನ್ಐಎಗೆ ವಹಿಸಬೇಕೆಂದು ಕೋರಿ ವಕೀಲರೊಬ್ಬರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಮಂಡ್ಯ ಮೂಲದ ವಕೀಲರಾದ ವಿಶಾಲ ರಘು ಎಂಬುವರು ಅಮೂಲ್ಯ ವಿರುದ್ಧದ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ವಹಿಸಬೇಕೆಂದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಅಮೂಲ್ಯ ಪಾಕಿಸ್ತಾನ ಝಿಂದಾಬಾದ್ ಘೋಷಣೆ ಕೂಗಿದ ಬಳಿಕ ಪ್ರಕರಣ ದಾಖಲಿಸಿಕೊಂಡಿರುವ ಉಪ್ಪಾರಪೇಟೆ ಠಾಣೆ ಪೊಲೀಸರು ಮತ್ತು ತನಿಖಾಧಿಕಾರಿ ಕಾಲಮಿತಿಯಲ್ಲಿ ತನಿಖಾ ವರದಿ ಮತ್ತು ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿಲ್ಲ. ಹೀಗಾಗಿಯೇ ಕಾನೂನು ಅವಕಾಶ ಬಳಸಿಕೊಂಡು ಅಮೂಲ್ಯ ಜಾಮೀನು ಪಡೆದುಕೊಂಡಿದ್ದಾರೆ.
ತನಿಖಾಧಿಕಾರಿಯನ್ನು ಅಮಾನತು ಮಾಡಲು ರಾಜ್ಯ ಸರಕಾರಕ್ಕೆ ನಿರ್ದೇಶಿಸಬೇಕು. ಅಮೂಲ್ಯ ಜಾಮೀನು ವಜಾಕ್ಕೆ ಅರ್ಜಿ ಸಲ್ಲಿಸಲು ಸರಕಾರಕ್ಕೆ ನಿರ್ದೇಶಿಸಬೇಕು. ಈ ಬಗ್ಗೆ ತನಿಖೆ ನಡೆಸಲು ಸೂಕ್ತ ತನಿಖಾ ಸಂಸ್ಥೆಯಾದ ಎನ್ಐಎಗೆ ವಹಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.
ಅರ್ಜಿಯಲ್ಲಿ ಪ್ರತಿವಾದಿಗಳನ್ನಾಗಿ ರಾಜ್ಯ ಸರಕಾರ ಹಾಗೂ ಆರೋಪಿ ಅಮೂಲ್ಯ ಲಿಯೋನಾಳನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದ್ದು, ಅರ್ಜಿ ಇನ್ನೂ ವಿಚಾರಣೆಗೆ ನಿಗದಿಯಾಗಬೇಕಿದೆ.





