ದ.ಕ.ದಲ್ಲಿ ಶನಿವಾರ ನಾಲ್ವರಿಗೆ ಕೊರೋನ ಸೋಂಕು ದೃಢ: 13 ಮಂದಿ ಗುಣಮುಖ

ಸಾಂದರ್ಭಿಕ ಚಿತ್ರ
ಮಂಗಳೂರು, ಜೂ.16: ದ.ಕ. ಜಿಲ್ಲೆಯಲ್ಲಿ ಶನಿವಾರ ನಾಲ್ವರಿಗೆ ಕೊರೋನ ಸೋಂಕು ತಗುಲಿದೆ. ಸೋಂಕಿತರ ಪೈಕಿ 13 ಮಂದಿ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ಮರಳಿದ್ದಾರೆ.
ಸೌದಿ ಅರೇಬಿಯ, ಕುವೈತ್, ಮುಂಬೈನಿಂದ ಬಂದಿದ್ದ ತಲಾ ಓರ್ವರಲ್ಲಿ ಸೋಂಕು ದೃಢಪಟ್ಟಿದೆ. ಜೊತೆಗೆ ಪಿ-8005ರ ಪ್ರಾಥಮಿಕ ಸಂಪರ್ಕದಲ್ಲಿದ್ದ 21 ವರ್ಷದ ಯುವಕನಲ್ಲೂ ಸೋಂಕು ಇರುವುದು ಪತ್ತೆಯಾಗಿದೆ. ಎಲ್ಲ ಸೋಂಕಿತರನ್ನು ವೆನ್ಲಾಕ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
13 ಮಂದಿ ಗುಣಮುಖ: ಸೋಂಕಿತರಲ್ಲಿ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಳವಾಗುತ್ತಿರುವುದು ಖುಷಿಯ ವಿಚಾರ. ಶನಿವಾರ ವೆನ್ಲಾಕ್ ಆಸ್ಪತ್ರೆಯಿಂದ 13 ಮಂದಿ ಕೊರೋನದಿಂದ ಗುಣಮುಖರಾಗಿದ್ದಾರೆ. ಅಲ್ಲದೆ, 81 ಹಾಗೂ 60 ವರ್ಷದ ವೃದ್ಧರನ್ನು ‘ಕೋವಿಡ್-19 ಟೆಕ್ನಿಕಲ್ ಅಡ್ವೈಸರಿ ಕಮಿಟಿ ಬೆಂಗಳೂರು’ ಇವರ ತೀರ್ಮಾನದಂತೆ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ. ಇದರೊಂದಿಗೆ 221 ಮಂದಿ ಇದುವರೆಗೆ ಸೋಂಕು ಮುಕ್ತರಾದಂತಾಗಿದೆ.
ಐಸಿಯುನಲ್ಲಿ ಇಬ್ಬರು: ಈಗ ಚಿಕಿತ್ಸೆಯಲ್ಲಿರುವ ಬಹುತೇಕ ಮಂದಿಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಆದರೆ 70 ವರ್ಷದ ವ್ಯಕ್ತಿಯೊಬ್ಬರು ಮಧುಮೇಹ ಮತ್ತು ನ್ಯುಮೋನಿಯಾದಿಂದ ಬಳಲುತ್ತಿದ್ದು ಗಂಭೀರ ಪರಿಸ್ಥಿತಿಯಲ್ಲಿದ್ದಾರೆ, ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೋರ್ವ 52 ವರ್ಷ ವಯಸ್ಸಿನ ವ್ಯಕ್ತಿ ಮಧುಮೇಹ ಮತ್ತು ಅರ್ಬುದ ರೋಗದಿಂದ ಬಳಲುತ್ತಿದ್ದು ಐಸಿಯುನಲ್ಲಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗಿನ ಒಟ್ಟು ಸೋಂಕಿತರ ಸಂಖ್ಯೆ 426ಕ್ಕೆ ಏರಿಕೆಯಾಗಿದ್ದು, ಈ ಪೈಕಿ 10 ಮಂದಿ ಹೊರ ಜಿಲ್ಲೆಯವರು. ಶನಿವಾರ ಒಟ್ಟು 121 ವರದಿಗಳು ಪ್ರಯೋಗಾಲಯದಿಂದ ಬಂದಿದ್ದು, ಅವುಗಳಲ್ಲಿ ನಾಲ್ಕು ಪಾಸಿಟಿವ್ ಆಗಿದ್ದರೆ, ಉಳಿದೆಲ್ಲವೂ ನೆಗೆಟಿವ್ ಆಗಿವೆ. ಹೊಸದಾಗಿ 116 ಮಂದಿಯ ಸ್ಯಾಂಪಲ್ನ್ನು ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ.







